ರಾಜ್ಯ

ಹುಲಿ ಉಗುರು ಧರಿಸಿದ ಪ್ರಕರಣ: ನಟ ದರ್ಶನ್​, ವಿನಯ್​ ಗುರೂಜಿ ವಿರುದ್ಧ ಕ್ರಮ ಕೈಗೊಳ್ಳಲು ದೂರು

Sumana Upadhyaya

ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರು ಹುಲಿ ಉಗುರುಳ್ಳ ಡಾಲರ್ - ಚೈನ್ ನ್ನು ತಮ್ಮ ಕೊರಳಿಗೆ ಧರಿಸಿಕೊಂಡು ಅರಣ್ಯ ಕಾಯ್ದೆ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಬಂಧಿಸಿ ಅವರೀಗ ಜೈಲಿನಲ್ಲಿದ್ದಾರೆ.

ಈ ಪ್ರಕರಪಣ ಬೆನ್ನಲ್ಲೇ ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹಾಗೂ ಜನಪ್ರಿಯ ಧರ್ಮಗುರುವಾದ ವಿನಯ್ ಗುರೂಜಿಯವರು ಇದೇ ರೀತಿಯ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಬೆಂಗಳೂರಿನಲ್ಲಿರುವ ಸರ್ವಸಂಘಗಳ ಒಕ್ಕೂಟದ ಅಧ್ಯಕ್ಷ ಸಿ.ಎಂ. ಶಿವಕುಮಾರ್ ನಾಯಕ್  ಎಂಬುವವರು ಇವರಿಬ್ಬರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. 

ನಟ ದರ್ಶನ್ ಅವರು ತಮ್ಮದೊಂದು ಫೋಟೋದಲ್ಲಿ ಚಿನ್ನದ ಚೈನ್ ನಲ್ಲಿ ಹುಲಿಯ ಉಗುರು ಇರುವ ಡಾಲರ್ ನ್ನು ತಮ್ಮ ಕೊರಳಿಗೆ ಹಾಕಿಕೊಂಡಿದ್ದಾರೆ. ವಿನಯ್ ಗುರೂಜಿಯವರ ಭಾವಚಿತ್ರವೊಂದರಲ್ಲಿ ಹುಲಿಯ ಚರ್ಮದ ಮೇಲೆ ಕುಳಿತಿದ್ದಾರೆ. ಇದು ಕಾನೂನಿನ ಉಲ್ಲಂಘನೆಯಾಗಿದೆ. ಅರಣ್ಯ ಕಾಯ್ದೆಯಡಿ ಇವರ ಮೇಲೆ ದೂರು ದಾಖಲು ಮಾಡಬೇಕೆಂದು ಸರ್ವ ಸಂಘಟನೆಗಳ ಒಕ್ಕೂಟದಿಂದ ದೂರು ಕೊಡುತ್ತಿದ್ದೇವೆ ಎಂದು ಹೇಳಿರುವ ಅವರು, ಈ ಬರಹದ ಕೆಳಗಡೆ ಒಕ್ಕೂಟದ ಅಧ್ಯಕ್ಷರು ಸಿ.ಎಂ. ಶಿವಕುಮಾರ್ ಎಂದು ತಮ್ಮ ಹೆಸರನ್ನು ಹಾಕಿಕೊಂಡಿದ್ದಾರೆ.

ದರ್ಶನ್ ಅವರು ಅರಣ್ಯ ರಾಯಭಾರಿ ಆಗಿದ್ದಾರೆ. ಅವರಿಗೆ ಕನಿಷ್ಠ ಪ್ರಜ್ಞೆ ಇಲ್ಲವೇ, ದರ್ಶನ್ ಬಂಗಾರದ ಚೈನ್ ಹಾಕಿದ್ದಾರೆ. ಅದರಲ್ಲಿ ಹುಲಿಯ ಉಗುರು ಇದೆ. ಅವರಿಂದ ಕಾನೂನಿನ ಉಲ್ಲಂಘನೆ ಆಗಿದೆ. ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ. ಹುಲಿಯ ಉಗುರು ಇದ್ದ ಕಾರಣಕ್ಕೆ ವರ್ತೂರು ಸಂತೋಷ ಅವರನ್ನು ಬಂಧಿಸಿದ್ದೀರಿ. ಅದೇ ರೀತಿ ನಟ ದರ್ಶನ್, ವಿನಯ್ ಗುರೂಜಿಯನ್ನೂ ಕರೆಸಿ ವಿಚಾರಿಸಿ. ಅವರು ಧರಿಸಿದ ಹುಲಿ ಉಗುರು ಅಸಲಿಯೋ ಅಥವಾ ನಕಲಿಯೋ ಅನ್ನೋದನ್ನು ಪರಿಶೀಲನೆ ಮಾಡೋದು ಅರಣ್ಯಾಧಿಕಾರಿಗಳ ಕಾರ್ಯ ಎಂದು ಹೇಳಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ 1972: ಯಾವುದೇ ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹಿಸುವುದು ತಪ್ಪಾಗುತ್ತದೆ. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು. ಅಕ್ರಮ ಎಂದು ಸಾಬೀತಾದರೆ 3 ರಿಂದ 7 ವರ್ಷ ಜೈಲು ಮತ್ತು ಕನಿಷ್ಠ 10000 ರೂ ದಂಡ ವಿಧಿಸುವ ಸಾಧ್ಯತೆ ಇದೆ.

SCROLL FOR NEXT