ರಾಜ್ಯ

ವನ್ಯಜೀವಿ ಉತ್ಪನ್ನ ಮಾರಾಟಕ್ಕೆ ತಡೆ: ಉನ್ನತ ಮಟ್ಟದ ಸಮಿತಿ ರಚನೆ

Manjula VN

ಬೆಂಗಳೂರು: ಹುಲಿ ಉಗುರು, ಹುಲಿ ಹಲ್ಲು ಸೇರಿದಂತೆ ವನ್ಯಜೀವಿಗಳ ಯಾವುದೇ ಅಂಗಾಂಗದಿಂದ ಮಾಡಿದ ಉತ್ಪನ್ನ ಮತ್ತು ವಸ್ತುಗಳ ಮಾರಾಟ ತಡೆಗೆ ಜನ ಜಾಗೃತಿ ಮೂಡಿಸಲು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಗ್ರ ವರದಿ ಸಲ್ಲಿಸಲು ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ.

ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಸ್ಪಷ್ಟ ಸೂಚನೆ ನೀಡಿದ್ದು, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ-ಎಪಿಸಿಸಿಎಫ್ (ವನ್ಯಜೀವಿ) ಇವರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ನಿರ್ದೇಶಿಸಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯಿದೆ ಜಾರಿಗೆ ಬಂದಾಗಿನಿಂದ ದಾಖಲಾಗಿರುವ (ದೂರು) ಪ್ರಕರಣಗಳು, ಕಾನೂನಿನಡಿಯಲ್ಲಿ ಕೈಗೊಂಡಿರುವ ಕ್ರಮ ಹಾಗೂ ಹಾಲಿ ದಾಖಲಾಗಿರುವ ಮತ್ತು ದಾಖಲಾಗುತ್ತಿರುವ ಪ್ರಕರಣಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಒಂದು ವಾರದೊಳಗೆ ವರದಿ ಸಲ್ಲಿಸಲು ಸಮಿತಿಗೆ ಸೂಚಿಸಿದ್ದಾರೆ.

ಸೂಚನೆ ಬೆನ್ನಲ್ಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರು, ಸಮಿತಿ ರಚನೆ ಕುರಿತು ಬುಧವಾರ ಆದೇಶ ಹೊರಡಿಸಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ರ ಅಡಿಯಲ್ಲಿ ಯಾವುದೇ ವನ್ಯಜೀವಿ ವಸ್ತುಗಳನ್ನು ಸಂಗ್ರಹಿಸುವುದನ್ನು ನಿಷೇಧಿಸುವ ಸ್ಪಷ್ಟ ನಿರ್ದೇಶನಗಳಿವೆ. ಅಂತಹ ವಸ್ತುಗಳು ಇದ್ದಲ್ಲಿ ಅವುಗಳನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಬೇಕು ಅಥವಾ ಅರಣ್ಯ ಅಧಿಕಾರಿಗಳಿಂದ ಪರವಾನಗಿ/ಅಧಿಕಾರ ಪತ್ರವನ್ನು ಪಡೆಯಬೇಕು ಎಂದು ಕಾಯ್ದೆಯು ಹೇಳುತ್ತದೆ ಎಂದು ಆದೇಶದಲ್ಲಿ ದೀಕ್ಷಿತ್ ತಿಳಿಸಿದ್ದಾರೆ.

ಹೆಚ್ಚುವರಿ ಪಿಸಿಸಿಎಫ್ (ವನ್ಯಜೀವಿ) ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿಯಲ್ಲಿ ಬೆಂಗಳೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಬೆಂಗಳೂರು ನಗರ, ತುಮಕೂರು, ಕೊಪ್ಪ ಮತ್ತು ಶಿವಮೊಗ್ಗದ  ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಸದಸ್ಯರಾಗಿರುತ್ತಾರೆ.

SCROLL FOR NEXT