ರಾಜ್ಯ

ಚಿನ್ನದ ಪದಕ ವಿಜೇತ ಭಾರತದ ಅಂಧರ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಸಿಎಂ

Lingaraj Badiger

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಭಾರತದ ಅಂಧರ ಮಹಿಳಾ ಕ್ರಿಕೆಟ್ ತಂಡ ಹಾಗೂ ಕರ್ನಾಟಕದ ಅಂಧ ಪುರುಷರ ಕ್ರಿಕೆಟ್ ತಂಡದ ಸದಸ್ಯರನ್ನು ಸನ್ಮಾನಿಸಿದರು.

ಐಬಿಎಸ್ಎ ವಿಶ್ವ ಕ್ರಿಕೆಟ್ ಪಂದ್ಯಾವಳಿಯಲ್ಲಿ(ಕ್ರಿಕೆಟ್ ಫಾರ್ ಬ್ಲೈಂಡ್) ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡ ಚಿನ್ನದ ಪದಕ ಗೆದ್ದಿದ್ದು, ಅಂಧ ಪುರುಷರ ಕ್ರಿಕೆಟ್ ತಂಡ ಬೆಳ್ಳಿ ಪದಕವನ್ನು ಗೆದ್ದುಕೊಂಡಿದೆ.

ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ವರ್ಷಾ ಮತ್ತು ತಂಡದ ಆಟಗಾರ್ತಿಯರಾದ ದೀಪಿಕಾ, ಗಂಗವ್ವ ಮತ್ತು ಕರ್ನಾಟಕದ ಪುರುಷರ ತಂಡದ ಪ್ರಕಾಶ್ ಜೆ, ಸುನೀಲ್ ಕುಮಾರ್, ಬಸಪ್ಪ ವಡ್ಡಗೋಳ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.

ಕಳೆ ಆಗಸ್ಟ್‌ನಲ್ಲಿ ಐಬಿಎಸ್ಎ ವರ್ಲ್ಡ್ ಗೇಮ್ಸ್‌ನಲ್ಲಿ ಆಸ್ಟ್ರೇಲಿಯಾವನ್ನು ಒಂಬತ್ತು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡ ಚಿನ್ನದ ಪದಕವನ್ನು ಗೆದ್ದು ಇತಿಹಾಸ ಸೃಷ್ಟಿಸಿದೆ.

ಕರ್ನಾಟಕ ರಾಜ್ಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ನೇತೃತ್ವದ ಪದಕ ವಿಜೇತ ಆಟಗಾರರ ತಂಡ ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಸಲ್ಲಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು, ಗೋವಿಂದರಾಜು ಅವರೊಂದಿಗೆ ಪ್ರತ್ಯೇಕ ಚರ್ಚೆ ನಡೆಸಿ ಅವರ ಬೇಡಿಕೆಗಳ ಈಡೇರಿಕೆಗೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಟಗಾರರೊಂದಿಗೆ ಸಂವಾದ ನಡೆಸಿ, ಆಟಗಾರರು ಪಡೆಯುವ ತರಬೇತಿ, ಚೆಂಡನ್ನು ಹೇಗೆ ಗುರುತಿಸುತ್ತಾರೆ, ಎಷ್ಟು ಪಂದ್ಯಗಳನ್ನು ಆಡಿದ್ದಾರೆ ಎಂಬಿತ್ಯಾದಿ ಕುತೂಹಲಕಾರಿ ಪ್ರಶ್ನೆಗಳನ್ನು ಕೇಳಿದರು.

SCROLL FOR NEXT