ಸೊಂಟದಲ್ಲಿ ಗನ್​ ಇಟ್ಕೊಂಡು ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿದ ವ್ಯಕ್ತಿ
ಸೊಂಟದಲ್ಲಿ ಗನ್​ ಇಟ್ಕೊಂಡು ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿದ ವ್ಯಕ್ತಿ 
ರಾಜ್ಯ

ಸೊಂಟದಲ್ಲಿ ಗನ್​ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿದ ವ್ಯಕ್ತಿ ಪೊಲೀಸ್ ವಶಕ್ಕೆ, ತೀವ್ರ ವಿಚಾರಣೆ

Lingaraj Badiger

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಸೋಮವಾರ ಭದ್ರತಾ ಲೋಪವಾಗಿದೆ. ಸೊಂಟದಲ್ಲಿ ಗನ್ ಇಟ್ಟುಕೊಂಡಿದ್ದ ವ್ಯಕ್ತಿಯೋರ್ವ ತೆರೆದ ವಾಹನದಲ್ಲಿ ತೆರಳುತ್ತಿದ್ದ ಸಿದ್ದರಾಮಯ್ಯ ಅವರಿಗೆ ಹಾರ ಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಭರ್ಜರಿ ಪ್ರಚಾರ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ, ಸಚಿವ ರಾಮಲಿಂಗಾ ರೆಡ್ಡಿ ಮತ್ತು ಅಭ್ಯರ್ಥಿ ಸೌಮ್ಯರೆಡ್ಡಿ ನಿಂತಿದ್ದ ಕ್ಯಾಂಟೆರ್ ಮೇಲೆ ಹತ್ತಿದ ವ್ಯಕ್ತಿಯೋರ್ವ ಸಿದ್ದರಾಮಯ್ಯ ಅವರಿಗೆ ಹೂವಿನ ಹಾರ ಹಾಕಿದ್ದಾರೆ. ಈ ವೇಳೆ ಆತನ ಸೊಂಟದಲ್ಲಿ ಗನ್ ಇರುವುದು ಪತ್ತೆಯಾಗಿದೆ. ಸೊಂಟದಲ್ಲಿ ಗನ್ ಇಟ್ಟುಕೊಂಡಿದ್ದ ವ್ಯಕ್ತಿ ರಿಯಾಜ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ರಿಯಾಜ್ ತನಗೆ ಜೀವ ಭಯ ಇದೆ ಎಂದು​ ಅರ್ಜಿ ನೀಡಿ ಗನ್ ಪಡೆದುಕೊಂಡಿದ್ದ. ಅಲ್ಲದೇ ಎಲೆಕ್ಷನ್ ಟೈಮಲ್ಲಿ ಗನ್ ಸರೆಂಡರ್ ಮಾಡದಿರಲು ಸಹ ಅನುಮತಿ ಪಡೆದಿದ್ದ. ಆದರೆ ಸಿಎಂ ಬಳಿ ಹೋಗುವಾಗ ಗನ್ ತೆಗೆದುಕೊಂಡು ಹೋಗಬಾರದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ರಿಯಾಜ್​ನನ್ನು ಸಿದ್ದಾಪುರ ಪೊಲೀಸ್ ಠಾಣೆಗೆ ಕರೆಯಿಸಿಕೊಂಡು ತೀವ್ರ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಹ ಸಿದ್ದಾಪುರ ಠಾಣೆ ಭೇಟಿ ನೀಡಿ, ರಿಯಾಜ್ ಗನ್ ಇಟ್ಟುಕೊಂಡು ಸಿಎಂ ಬಳಿಗೆ ಹೋಗಿದ್ಯಾಕೆ ಎಂಬ ಆಯಾಮದಲ್ಲಿ ವಿಚಾರಣೆ ನಡೆಸಿದ್ದಾರೆ.

SCROLL FOR NEXT