ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ  
ರಾಜ್ಯ

Rain in Karnataka: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ, ವಿಜಯಪುರದಲ್ಲಿ ಮಹಿಳೆ ಸಾವು

Sumana Upadhyaya

ಬೆಂಗಳೂರು: ಕಳೆದೊಂದು ತಿಂಗಳಿನಿಂದ ಬಿಸಿಲ ಬೇಗೆಯಿಂದ ಬಳಲುತ್ತಿದ್ದ ರಾಜ್ಯದ ಹಲವು ಜಿಲ್ಲೆಗಳ ಜನತೆ ಕೊಂಚ ತಂಪಿನಿಂದ ನಿಟ್ಟುಸಿರು ಬಿಡುವಂತಾಯಿತು. ಬಿಸಿಲ ಝಳಕ್ಕೆ ತುತ್ತಾಗಿದ್ದ ಉತ್ತರ ಕರ್ನಾಟಕ, ಮಲೆನಾಡು ಸೇರಿ ರಾಜ್ಯದ 12 ಜಿಲ್ಲೆಗಳಲ್ಲಿ ನಿನ್ನೆ ಶುಕ್ರವಾರ ಮಳೆ ಸುರಿದಿದೆ.

ವಿಜಯಪುರದಲ್ಲಿ ನಾಲ್ವರು ಬಲಿ: ವಿಜಯಪುರ ಜಿಲ್ಲೆಯಲ್ಲಿ ಭೀಕರ ಸಿಡಿಲಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಬುಧವಾರ ರಾತ್ರಿಯಿಂದೀಚೆಗೆ ಜಿಲ್ಲೆಯಲ್ಲಿ ಸಿಡಿಲಬ್ಬರಕ್ಕೆ ಒಟ್ಟು ನಾಲ್ವರು ಬಲಿಯಾಗಿದ್ದಾರೆ. ಬೆಳಗಾವಿ, ವಿಜಯಪುರ, ಕೊಡಗು, ಚಿಕ್ಕಮಗಳೂರು, ಬಾಗಲಕೋಟೆ, ದಕ್ಷಿಣ ಕನ್ನಡ, ಶಿವಮೊಗ್ಗ, ಗದಗ, ಹಾವೇರಿ, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಕಳೆದ ಕೆಲವು ದಿನಗಳಿಂದ ಬಸವಳಿದಿದ್ದ ಜನ, ಜಾನುವಾರುಗಳಿಗೆ ಕೊಂಚ ನೆಮ್ಮದಿ ಸಿಕ್ಕಿದೆ.

ವಿಜಯಪುರ ಜಿಲ್ಲೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದರೂ ಸಿಡಿಲು, ಮಿಂಚಿನ ಅಬ್ಬರ ತುಸು ಜೋರಾಗಿಯೇ ಇತ್ತು. ಬುಧವಾರ ರಾತ್ರಿ ಮತ್ತು ಗುರುವಾರ ಜಿಲ್ಲೆಯಲ್ಲಿ ಬಾಲಕ ಸೇರಿ ಮೂವರು ಸಿಡಿಲಿಗೆ ಬಲಿಯಾಗಿದ್ದರು.ನಿನ್ನೆ ಶುಕ್ರವಾರ ಇಂಡಿ ತಾಲೂಕಿನ ತಾಂಬಾದಲ್ಲಿ ದೇವರಿಗೆ ನೈವೇದ್ಯ ತೆಗೆದುಕೊಂಡು ಹೋಗುವಾಗ ಸಿಡಿಲು ಬಡಿದು ಭಾರತಿ ಹನುಮಂತ ಕೆಂಗನಾಳ (42 ವ) ಎಂಬ ಮಹಿಳೆ ಅಸುನೀಗಿದ್ದಾಳೆ.

ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ತಾಲೂಕಿನಲ್ಲಿ ಮತ್ತೆ ಸಾಧಾರಣ ಮಳೆಯಾಗಿದೆ. ಇನ್ನು ಚಿಕ್ಕಮಗಳೂರಿನ ಶೃಂಗೇರಿ ಮತ್ತು ನರಸಿಂಹರಾಜಪುರದ ಕೆಲವೆಡೆಯೂ ಒಂದೆರಡು ಗಂಟೆಗಳ ಕಾಲ ಉತ್ತಮ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯ ಭಾಗದ ಶಿರಾಡಿಘಾಟ್‌ ಸುತ್ತಮುತ್ತ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಕೆಲಕಾಲ ಸಿಡಿಲು-ಗುಡುಗು ಸಹಿತ ಉತ್ತಮ ಮಳೆ ಬಿದ್ದಿದೆ.

ಧಾರವಾಡ ಜಿಲ್ಲೆಯಲ್ಲಿ ಅಬ್ಬರದ ಮಳೆ, ಧರೆಗುರುಳಿದ 10 ವಿದ್ಯುತ್​ ಕಂಬಗಳು: ಮಳೆ ಅಬ್ಬರಕ್ಕೆ 10 ವಿದ್ಯುತ್​ ಕಂಬಗಳು ಧರೆಗುರುಳಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುಳಿಕಟ್ಟಿಯಲ್ಲಿ ನಡೆದಿದೆ. ಶಿರಸಿ ಕಾವಲವಾಡ ಮಧ್ಯೆ ಇರುವ ಮೇನ್​ ವಿದ್ಯುತ್​ ಲೈನ್​ ಕಂಬಗಳು ಇದಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಬಿಸಿಲಿನ‌ ತಾಪಕ್ಕೆ ತತ್ತರಿಸಿದ ಜನಕ್ಕೆ ಮಳೆಯ ಸಿಂಚನ: ದಾವಣಗೆರೆ ಜಿಲ್ಲೆಯ ಜನ ಅಕ್ಷರಶಃ ಬಿಸಿಲಿನ ಬೇಗೆಗೆ ತತ್ತರಿಸಿದ್ದರು. ತಾಲೂಕಿನ ಹೆಬ್ಬಾಳ್​ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬಿರುಗಾಳಿ ಸಹಿತ ಮಳೆ ಆಗಿದ್ದು, ಗಾಳಿಗೆ ಮನೆಯ ಹೆಂಚುಗಳು ಹಾರಿ ಹೋಗಿವೆ. ಬಿಸಿಲ ದಗೆಯಿಂದ ಕಂಗೆಟ್ಟಿದ್ದ ರೈತರಲ್ಲಿ, ಸುರಿದ ಅಲ್ಪ ಸ್ವಲ್ಪ‌ಮಳೆಗೆ ಮುಖದಲ್ಲಿ‌ಮಂದಹಾಸ ಮೂಡಿದೆ.

ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು ಸಹಿತ ಸುರಿದ ಮಳೆ ಸುರಿದಿದ್ದು, ನಗರದ ಭೋವಿ ಗಲ್ಲಿಯಲ್ಲಿ ಮಳೆ ನೀರು ಮಳಿಗೆಗಳಿಗೆ ನುಗ್ಗಿದೆ. ಇದರಿಂದ ಮಳೆ ನೀರು ಮಳಿಗೆಗಳ ಒಳಗೆ ಹೋಗದಂತೆ ತಡೆಯಲು ಹರಸಾಹಸ ಪಡುವಂತಾಗಿದೆ. ಇನ್ನು ದಿಢೀರ್ ಮಳೆಯಿಂದ ವಾಹನ ಸವಾರರು ಕಂಗಾಲಾಗಿದ್ದಾರೆ.

SCROLL FOR NEXT