ಕರ್ನಾಟಕ ಹೈಕೋರ್ಟ್ 
ರಾಜ್ಯ

ರಾಯಚೂರು ಬಿಜೆಪಿ ಅಭ್ಯರ್ಥಿಗೆ ಸಂಕಷ್ಟ: ರಾಜಾ ಅಮರೇಶ್ವರ ನಾಯಕ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ!

ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಸುಳ್ಳು ದಾಖಲೆಗಳನ್ನು ನೀಡುವ ಮೂಲಕ ಎಸ್‌ಟಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದ ಮೊರೆ ಹೋಗಿದ್ದಾರೆ.

ರಾಯಚೂರು: ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಸುಳ್ಳು ದಾಖಲೆಗಳನ್ನು ನೀಡುವ ಮೂಲಕ ಎಸ್‌ಟಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದ ಮೊರೆ ಹೋಗಿದ್ದಾರೆ.

ಮಾನ್ವಿ ತಾಲ್ಲೂಕಿನ ಕರಡಿಗುಡ್ಡ ಗ್ರಾಮದ ನರಸಿಂಹ ನಾಯಕ ಅವರು ತಮ್ಮ ಅರ್ಜಿಯಲ್ಲಿ ಅಮರೇಶ್ವರ ನಾಯಕ ಅವರ ಶೈಕ್ಷಣಿಕ ದಾಖಲೆಗಳಲ್ಲಿ ಅವರು ಕ್ಷತ್ರಿಯ-ಹಿಂದೂ ಸಮುದಾಯಕ್ಕೆ ಸೇರಿದವರು ಎಂಬುದನ್ನು ತೋರಿಸುತ್ತಿದ್ದು, ರಾಯಚೂರು ಕ್ಷೇತ್ರ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ ಮೀಸಲಾಗಿದೆ ಎಂದು ಹೇಳಿದ್ದಾರೆ.

ಅಮರೇಶ್ವರ ನಾಯಕ ಅವರು ಸುಳ್ಳು ದಾಖಲೆಗಳ ಮೂಲಕ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಎಸ್‌ಟಿ ಜಾತಿ ಪ್ರಮಾಣ ಪತ್ರ ಪಡೆದಿದ್ದು, ಈ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸುವಂತೆ ನರಸಿಂಹ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದರು.

ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾದ ಏಪ್ರಿಲ್ 19ಕ್ಕೂ ಮುನ್ನ ಜಾತಿ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸುವಂತೆ ಏಕ ಸದಸ್ಯ ಪೀಠದ ನ್ಯಾಯಾಧೀಶರು ಅಮರೇಶ್ವರ ನಾಯಕ ಅವರಿಗೆ ಸೂಚಿಸಿದರು. ಅದೇ ದಿನ ನ್ಯಾಯಾಲಯ ತನ್ನ ತೀರ್ಪು ಪ್ರಕಟಿಸಲಿದೆ.

ಈ ಕುರಿತು ದೂರವಾಣಿ ಮೂಲಕ ಟಿಎನ್ಐಇ ಜೊತೆಗೆ ಮಾತನಾಡಿದ ಅಮರೇಶ್ವರ ನಾಯಕ, ಅಗತ್ಯ ದಾಖಲೆಗಳೊಂದಿಗೆ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. 'ನಾನು ರಾಯಚೂರಿನ ಹಾಲಿ ಸಂಸದ. ಕಳೆದ ಬಾರಿಯೂ ರಾಯಚೂರು ಎಸ್‌ಟಿ ಮೀಸಲು ಕ್ಷೇತ್ರವಾಗಿದ್ದು, ಚುನಾವಣಾಧಿಕಾರಿಗಳು ದಾಖಲೆಗಳನ್ನು ಸ್ವೀಕರಿಸಿದರು ಮತ್ತು ಜನರು ತಮ್ಮನ್ನು ಸಂಸದನನ್ನಾಗಿ ಆಯ್ಕೆ ಮಾಡಿದ್ದರು. ನರಸಿಂಹ ಅವರ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸುವ ವಿಶ್ವಾಸವಿದೆ' ಎಂದರು.

ಒಂದು ವೇಳೆ ನ್ಯಾಯಾಲಯವು ಅಭ್ಯರ್ಥಿಯ ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸಿದರೆ, ಪಕ್ಷವು ಯಾವ ಕ್ರಮಗಳನ್ನು ಕೈಗೊಳ್ಳುತ್ತದೆ ಎಂಬುದರ ಕುರಿತು ಬಿಜೆಪಿಯಿಂದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಇದೇ ವೇಳೆ, ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಉಸ್ತುವಾರಿ ಕುಷ್ಠಗಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಮಾತನಾಡಿ, ಅಮರೇಶ್ವರ ಅವರ ಜಾತಿ ಪ್ರಮಾಣಪತ್ರವನ್ನು ಹೈಕೋರ್ಟ್ ರದ್ದುಪಡಿಸಿದರೆ, ಅಭ್ಯರ್ಥಿಯನ್ನು ಬದಲಾಯಿಸುವ ಅಥವಾ ಡಮ್ಮಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದರು.

ತಹಶೀಲ್ದಾರ್‌ಗಳು ಎಲ್ಲ ದಾಖಲೆಗಳನ್ನು ಪರಿಶೀಲಿಸಿದ ನಂತರವೇ ಜಾತಿ ಪ್ರಮಾಣಪತ್ರವನ್ನು ನೀಡುತ್ತಾರೆ. ನರಸಿಂಹ ನಾಯಕ ಅವರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡುವ ಆಶಾವಾದವಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT