ತಾಪಮಾನ 
ರಾಜ್ಯ

ಉತ್ತಮ ಮುಂಗಾರು ಮಳೆಯ ಹೊರತಾಗಿಯೂ ರಾಜ್ಯದಲ್ಲಿ ತಾಪಮಾನ ಹೆಚ್ಚಳ!

ಬೆಂಗಳೂರಿನಲ್ಲಿ ಆಗಸ್ಟ್ 15 ರಂದು ಗರಿಷ್ಠ ತಾಪಮಾನ 29.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಸಾಮಾನ್ಯಕ್ಕಿಂತ 1.4 ಡಿಗ್ರಿ ಸೆಲ್ಸಿಯಸ್ ಹೆಚ್ಚು.

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಉತ್ತಮ ಮುಂಗಾರು ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಇದರ ಹೊರತಾಗಿಯೂ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ತಾಪಮಾನ ಗಗನಕ್ಕೇರುತ್ತಿದೆ.

ಬೆಂಗಳೂರಿನಲ್ಲಿ ಆಗಸ್ಟ್ 15 ರಂದು ಗರಿಷ್ಠ ತಾಪಮಾನ 29.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಸಾಮಾನ್ಯಕ್ಕಿಂತ 1.4 ಡಿಗ್ರಿ ಸೆಲ್ಸಿಯಸ್ ಹೆಚ್ಚು ದಾಖಲಾಗಿದೆ. ಆಗಸ್ಟ್ 14 ರಂದು, ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇತ್ತು. ಇದು ಸಾಮಾನ್ಯಕ್ಕಿಂತ 2.8 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ.

ಬುಧವಾರ ಮತ್ತು ಗುರುವಾರ ಕನಿಷ್ಠ ತಾಪಮಾನ 22.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸಾಮಾನ್ಯಕ್ಕಿಂತ 2.4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ.

ಈ ತಿಂಗಳ ಹವಾಮಾನ ಪರಿಸ್ಥಿತಿಗಳು ಮೇ ತಿಂಗಳಿನಂತೆಯೇ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಬೆಂಗಳೂರು) ನಿರ್ದೇಶಕ ಎನ್ ಪುವಿಯರಸನ್ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

“ಸೂರ್ಯನ ಪ್ರಖರ ಶಾಖವನ್ನು ಈ ತಿಂಗಳು ನಾವು ಗಮನಿಸಬಹುದು. ಗಾಳಿ, ಮೋಡ ಕಡಿಮೆಯಾಗಿದ್ದು ಆಕಾಶವು ಶುಭ್ರವಾಗಿ ಕಾಣಿಸುತ್ತಿದೆ. ತೇವಾಂಶ ಕೂಡ ಹೆಚ್ಚಾಗಿದೆ. ಆಗಸ್ಟ್​​ನಲ್ಲಿ ಮಳೆಯ ಪ್ರಮಾಣವೂ ಇಳಿಮುಖವಾಗಿದ್ದು, ರಾಜ್ಯದಾದ್ಯಂತ ತಾಪಮಾನ ಏರಿಕೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇನ್ನೂ ಮೂರು ದಿನಗಳ ಕಾಲ ಇದೇ ರೀತಿಯ ತಾಪಮಾನ ಇರಲಿದೆ. ನಂತರ ಮುಂಗಾರು ಮಳೆ ಮತ್ತೆ ಚುರುಕಾಗಲಿದ್ದು ತಾಪಮಾನದಲ್ಲಿ ಸ್ವಲ್ಪ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಪುವಿಯರಸನ್ ಅವರು ತಿಳಿಸಿದ್ದಾರೆ.

ಹಾವೇರಿಯಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ 6.6 ಡಿಗ್ರಿ ಸೆಲ್ಸಿಯಸ್‌ನಷ್ಟು ವ್ಯತ್ಯಾಸ ದಾಖಲಾಗಿದೆ. ಇದು ರಾಜ್ಯದಲ್ಲಿಯೇ ಅತಿ ಹೆಚ್ಚು ವ್ಯತ್ಯಾಸವಾಗಿತ್ತು. ಹಾವೇರಿಯಲ್ಲಿ ಗರಿಷ್ಠ ತಾಪಮಾನ 33.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಅವರು ಹೇಳಿದ್ದಾರೆ.

IMD ಅಂಕಿಅಂಶಗಳ ಪ್ರಕಾರ, ಜೂನ್ 1 ರಿಂದ(ಮಾನ್ಸೂನ್ ಆರಂಭ) ಆಗಸ್ಟ್ 15 ರವರೆಗೆ, ಕರ್ನಾಟಕದಲ್ಲಿ ಮಳೆಯ ಪ್ರಮಾಣ ಶೇ. 22 ರಷ್ಟು ಏರಿಕೆ ದಾಖಲಿಸಿದೆ. ರಾಜ್ಯದಲ್ಲಿ 573.4 ಮಿಮೀ ವಾಡಿಕೆಯ ಮಳೆಯ ಮುನ್ಸೂಚನೆಗೆ ವಿರುದ್ಧವಾಗಿ, 697.3 ಮಿಮೀ ಮಳೆಯಾಗಿದೆ. ಜೂನ್ ಮತ್ತು ಜುಲೈನಲ್ಲಿ ಗರಿಷ್ಠ ಪ್ರಮಾಣದ ಮಳೆ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಮಳೆ ಪ್ರಮಾಣ ಶೇ. 37ರಷ್ಟು ಏರಿಕೆಯಾಗಿದೆ. ಜೂನ್ 1 ರಿಂದ ಆಗಸ್ಟ್ 15 ರವರೆಗೆ ನಗರದಲ್ಲಿ 287.8 ಮಿಮೀ ಮಳೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT