ಸಿಎಂ ಸಿದ್ದರಾಮಯ್ಯ 
ರಾಜ್ಯ

ಸೋರಿಕೆ ಪತ್ತೆ ಹಚ್ಚಿ, 2024-25 ಅಂತ್ಯದೊಳಗೆ ತೆರಿಗೆ ಸಂಗ್ರಹ ಗುರಿ ತಲುಪಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

2023-24 ರ ಒಟ್ಟು ತೆರಿಗೆ ಸಂಗ್ರಹಣೆ 70,575 ಕೋಟಿ ರೂ. ಇತ್ತು. ವಿಜಿಲೆನ್ಸ್‌ ಹೆಚ್ಚಿಸಿ, ತೆರಿಗೆ ಸೋರಿಕೆಯನ್ನು ಪತ್ತೆ ಹಚ್ಚಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಬೇಕು.

ಬೆಂಗಳೂರು: ರಾಜ್ಯದಲ್ಲಿ ಜಿಎಸ್'ಟಿ ಸಂಗ್ರಹ ಸೇರಿ ಇನ್ನಿತರ ರಾಜಸ್ವ ಸಂಗ್ರಹದಲ್ಲಿ ಏರಿಕೆ ಕಂಡಿದ್ದು, ಆದರೂ ತೆರಿಗೆ ಸೋರಿಕೆ ಪತ್ತೆ ಹಚ್ಚಿ ಅದಕ್ಕೆ ಪರಿಹಾರ ಕಂಡುಕೊಂಡು 2024-25ರ ಅಂತ್ಯದೊಳಗೆ ತೆರಿಗೆ ಸಂಗ್ರಹ ಗುರಿ ತಲುಪುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದರು.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ತೆರಿಗೆ ಸಂಗ್ರಹದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆದಾಯ ಸಂಗ್ರಹಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾಣಿಜ್ಯ ತೆರಿಗೆ ಇಲಾಖೆಯಿಂದ 2024 ನವೆಂಬರ್‌ ಅಂತ್ಯದವರೆಗಿನ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹಣೆ ಗುರಿ 56,317 ಕೋಟಿ ರೂ.ಇದ್ದು ಇದುವರೆಗೆ ರೂ.53,103 ಕೋಟಿ ತೆರಿಗೆ ಸಂಗ್ರಹ ಮಾಡಲಾಗಿದ್ದು, ಶೇ.94 ರಷ್ಟು ಸಾಧನೆ ಮಾಡಲಾಗಿದೆ. 2024-25 ಹಣಕಾಸು ಸಾಲಿನ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹ ಗುರಿ ರೂ. 84475 ಕೋಟಿ ಇದೆ. ಮಲೆನಾಡು ಮತ್ತು ಮೈಸೂರು ವಿಭಾಗದಲ್ಲಿ ತೆರಿಗೆ ಸಂಗ್ರಹ ನಿಗದಿತ ಗುರಿಗಿಂತ ಕಡಿಮೆಯಿದೆ. ಎಲ್ಲಾ ವಿಭಾಗಗಳು ಮುಂದಿನ ನಾಲ್ಕು ತಿಂಗಳಲ್ಲಿ ಗುರಿಯನ್ನು ಕಡ್ಡಾಯವಾಗಿ ಸಾಧಿಸಬೇಕು ಎಂದು ಸೂಚನೆ ನೀಡಿದರು.

2023-24 ರ ಒಟ್ಟು ತೆರಿಗೆ ಸಂಗ್ರಹಣೆ 70,575 ಕೋಟಿ ರೂ. ಇತ್ತು. ವಿಜಿಲೆನ್ಸ್‌ ಹೆಚ್ಚಿಸಿ, ತೆರಿಗೆ ಸೋರಿಕೆಯನ್ನು ಪತ್ತೆ ಹಚ್ಚಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಬೇಕು. ಬೆಂಗಳೂರು ವಿಭಾಗದಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ವಿಶೇಷ ಅಭಿಯಾನ ಕೈಗೊಂಡು ಮುಂದಿನ 4 ತಿಂಗಳ ಅವಧಿಯಲ್ಲಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಿ ಶೇ.100ರಷ್ಟು ಬಜೆಟ್‌ ಗುರಿಯನ್ನು ಸಾಧಿಸಬೇಕು. ಜಿಎಸ್‌ಟಿ ಸಂಗ್ರಹವನ್ನು ಹೆಚ್ಚಿಸಬೇಕು. ಲೆಕ್ಕಪರಿಶೋಧನೆ ಮತ್ತು ನ್ಯಾಯನಿರ್ಣಯದಿಂದ ಪ್ರಸ್ತುತ ಹಣಕಾಸು ಸಾಲಿನಲ್ಲಿ ರೂ.4671 ಕೋಟಿ ತೆರಿಗೆ ಸಂಗ್ರಹ ಗುರಿಯಿದ್ದು, ನವೆಂಬರ್‌ ಅಂತ್ಯದವರೆಗೆ ರೂ.3,076.86 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ.

ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯಡಿಯಲ್ಲಿ ಸ್ವೀಕರಿಸಿದ ಮನವಿಗಳನ್ನು ವಿಲೇವಾರಿ ಮಾಡಿ ತೆರಿಗೆ ಸಂಗ್ರಹ ಕೈಗೊಳ್ಳಬೇಕು. ರಾಜ್ಯ ಜಿಎಸ್‌ಟಿ ಸಂಗ್ರಹದಲ್ಲಿ ಶೇಕಡಾ 15ರ ಬೆಳವಣಿಗೆ ದರ ಸಾಧಿಸಿದೆ. ರಾಜ್ಯದಲ್ಲಿ ನವೆಂಬರ್‌ ಅಂತ್ಯದವರೆಗೆ ರೂ.13,722 ಕೋಟಿ ಜಿಎಸ್‌ಟಿ ಸಂಗ್ರಹಿಸಲಾಗಿದ್ದು, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2024-25 ನೇ ಸಾಲಿನಲ್ಲಿ ರೂ.26 ಸಾವಿರ ಕೋಟಿ ಗುರಿ ನಿಗದಿಪಡಿಸಿದ್ದು, ನವೆಂಬರ್‌ ಕೊನೆಯವರೆಗೆ ರೂ.15,160.97 ಕೋಟಿ ರಾಜಸ್ವ ಸಂಗ್ರಹಿಸಲಾಗಿದ್ದು, ಶೇ.58ರಷ್ಟು ಪ್ರಗತಿ ಸಾಧಿಸಲಾಗಿದೆ. ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಬೇಕು. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.21ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ. ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು.

ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು. ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು. ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಕಳೆದ ವರ್ಷಕ್ಕಿಂತ ಶೇ.10ರಷ್ಟು ಹೆಚ್ಚಿನ ಬೆಳವಣಿಗೆ ದರ ಸಾಧಿಸಲಾಗಿದೆ. ಈ ವರ್ಷದ ಒಟ್ಟು ರಾಜಸ್ವ ಗುರಿ ರೂ.9ಸಾವಿರ ಕೋಟಿ ಇದ್ದು, ನವೆಂಬರ್‌ ಅಂತ್ಯದವರೆಗೆ ರೂ.4862 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ. ಖನಿಜ ಹಕ್ಕು ತೆರಿಗೆ ಅಧಿನಿಯಮ ಜಾರಿಗೆ ಕ್ರಮ ಹಾಗೂ 2025-26 ನೇ ಸಾಲಿನಲ್ಲಿ ಉಪ ಖನಿಜದಿಂದ ಹೆಚ್ಚುವರಿಯಾಗಿ ರಾಜಸ್ವ ಸಂಗ್ರಹಿಸಲು ಕ್ರಮ ವಹಿಸಬೇಕು. ರಾಜಧನ ಸಂಗ್ರಹ ಸೇರಿ ವಿವಿಧ ಹೊಣೆಗಳನ್ನು ಅರಣ್ಯ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT