ಕಾಂಗ್ರೆಸ್ ಪ್ರತಿಭಟನೆ 
ರಾಜ್ಯ

ಅಂಬೇಡ್ಕರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಅಮಿತ್ ಶಾ ವಜಾಗೊಳಿಸಿ; ರಾಷ್ಟ್ರಪತಿಗಳಿಗೆ ಕಾಂಗ್ರೆಸ್ ಆಗ್ರಹ

ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆ ದೇಶದ್ರೋಹ ಹೇಳಿಕೆಯಾಗಿದೆ. ರಾಷ್ಟ್ರಪತಿಗಳು ಕೂಡಲೇ ಗೃಹ ಸಚಿವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಿ, ಬಂಧನಕ್ಕೊಳಪಡಿಸಬೇಕೆಂದು ಒತ್ತಾಯಿಸಿದರು.

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಕುರುಬಾರಹಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಸಿದ್ಧಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ನೇತೃತ್ವದಲ್ಲಿ ಶಾಸಕರು, ಸಾವಿರಾರು ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು, ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.

ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆ ದೇಶದ್ರೋಹ ಹೇಳಿಕೆಯಾಗಿದೆ. ರಾಷ್ಟ್ರಪತಿಗಳು ಕೂಡಲೇ ಗೃಹ ಸಚಿವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಿ, ಬಂಧನಕ್ಕೊಳಪಡಿಸಬೇಕೆಂದು ಒತ್ತಾಯಿಸಿದರು. ಈ ವೇಳೆ ಕೆಲ ಕಾರ್ಯಕರ್ತರು ಅಮಿತ್ ಶಾ ಅವರ ಭಾವಚಿತ್ರಕ್ಕೆ ಬೆಂಕಿ ಹಾಕಿದರು. ಬಳಿಕ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ಅವರು, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಅಮಿತ್ ಶಾ ಸಂವಿಧಾನದ ಆಶಯವನ್ನು ನಾಶಪಡಿಸಲು ಬಯಸಿದ್ದಾರೆ. ಅವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ. ಸಂವಿಧಾನದ ನಿಯಮಗಳನ್ನು ಜಾರಿಗೆ ತರುವಲ್ಲಿ ವಿಫಲವಾಗಿರುವ ಗೃಹ ಸಚಿವರನ್ನು ರಾಷ್ಟ್ರಪತಿಗಳು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಗೃಹ ಸಚಿವರು ಅಂಬೇಡ್ಕರ್ ಎನ್ನುವುದು ಒಂದು ವ್ಯಸನ ಎಂದು ಹೇಳಿರುವುದು ಒಂದು ರಾಷ್ಟ್ರಕ್ಕೆ ಮಾಡಿದ ಅಪಮಾನ. ಬಿಜೆಪಿಯವರು ಒಂದು ದೇಶ, ಒಂದು ಧರ್ಮ, ಒಂದು ಚುನಾವಣೆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರಲು ಹೊರಟಿದ್ದಾರೆ. ಕೂಡಲೇ ರಾಷ್ಟ್ರಪತಿಗಳು ಗೃಹ ಮಂತ್ರಿಗಳನ್ನು ಮಂತ್ರಿ ಮಂಡಲದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಮಾತನಾಡಿ, ಕೋಮುಗಲಭೆ ಹಬ್ಬಿಸಿ ಗುಜರಾತ್‌ನಿಂದ ಹೊರಗೆ ಬಂದಿರುವ ಅಮಿತ್ ಶಾ ದೇಶದ ಗೃಹ ಸಚಿವರಾಗಿ ದೇಶಕ್ಕೆ ಅಪಾಯ ತಂದೊಡ್ಡಿದ್ದಾರೆ. ಅಲ್ಪಸಂಖ್ಯಾತರು ಮತ್ತು ಅದರ ನಾಯಕತ್ವದ ಮೇಲೆ ದಾಳಿಯಿಂದ ಹೆಸರುವಾಸಿಯಾಗಿರುವ ಶಾ ಅವರು, ಇದೀಗ ಆರ್‌ಎಸ್‌ಎಸ್ ನಿರ್ದೇಶನದಂತೆ ಜನರ ಸಾಂವಿಧಾನಿಕ ಆಕಾಂಕ್ಷೆಗಳನ್ನು ಮುಗಿಸಲು ಬಯಸಿದ್ದಾರೆಂದು ಕಿಡಿಕಾರಿದ್ದಾರೆ.

ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು ಮಾತನಾಡಿ, ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಕೀಳಿ ಮಟ್ಟದಲ್ಲಿ ಮಾತನಾಡಿದ್ದಾರೆ. ಬಿಜೆಪಿ ಸಂವಿಧಾನ ಹಾಗೂ ಅಂಬೇಡ್ಕರ್ ವಿರೋಧಿಯಾಗಿದ್ದು, ಸಂವಿಧಾನ ಬದಲಾವಣೆ ಮಾಡಬೇಕೆಂದು ಹುನ್ನಾರ ಮಾಡುತ್ತಿದ್ದಾರೆ. ಅಂಬೇಡ್ಕರ್ ಅವರನ್ನು ಅವಮಾನಿಸಿರುವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡಿ, ಅಮಿತ್ ಶಾ ಅವರು ದೇಶದ ಜನರ ಕ್ಷಮೆ ಯಾಚಿಸಬೇಕು ಮತ್ತು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಯಾವ ದೇವತೆಗಳು ಕೂಡ ದಲಿತರಿಗೆ ಹಿಂದುಳಿದವರಿಗೆ, ಮಹಿಳೆಯರಿಗೆ ಮಕ್ಕಳಿಗೆ ಹಕ್ಕು ಭಾದ್ಯತೆ ತಂದು ಕೊಟ್ಟಿಲ್ಲ. ಅದು ಸಾಧ್ಯವಾಗಿದ್ದ, ಅಂಬೇಡ್ಕರ್ ಅವರ ಸಂವಿಧಾನದಿಂದ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಬೇಕು. ಅಂಬೇಡ್ಕರ್ ಅವರು ದೇವರಿಗಿಂತ ದೊಡ್ಡವರು. ಎಲ್ಲರಿಗೂ ದೇವರ ಜಪಕ್ಕಿಂತ ಅಂಬೇಡ್ಕರ್ ಜಪ ಮುಖ್ಯ ಎಂಬುದನ್ನು ಶಾ ಅರಿತುಕೊಳ್ಳಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ದರ್ಶನ್ ದ್ರುವನಾರಾಯಣ, ತಿಮ್ಮಯ್ಯ, ಹರೀಶ್ ಗೌಡ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT