ಸಿಎಂ ಸಿದ್ದರಾಮಯ್ಯ - ಡಿಕೆ ಶಿವಕುಮಾರ್ 
ರಾಜ್ಯ

ತೆರಿಗೆ ಹಂಚಿಕೆ ಕಡಿತದಿಂದ ಕರ್ನಾಟಕಕ್ಕೆ 62 ಸಾವಿರ ಕೋಟಿ ರೂ. ಗೂ ಹೆಚ್ಚು ನಷ್ಟ: ಸಿಎಂ ಸಿದ್ದರಾಮಯ್ಯ

ರಾಜ್ಯದಿಂದ 4 ಲಕ್ಷ 30 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಆದರೂ ನಮಗೆ ತೆರಿಗೆ ಹಣದಲ್ಲಿ ಮೋಸವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬೆಂಗಳೂರು: ರಾಜ್ಯದಿಂದ 4 ಲಕ್ಷ 30 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಆದರೂ ನಮಗೆ ತೆರಿಗೆ ಹಣದಲ್ಲಿ ಮೋಸವಾಗುತ್ತಿದೆ. ತೆರಿಗೆ ಹಂಚಿಕೆ ಕಡಿತದಿಂದ ಕಳೆದ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ 62,098 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ರಾಜ್ಯದ ಪಾಲಿನ ತೆರಿಗೆ ಹಣವನ್ನು ನೀಡದ ಕೇಂದ್ರ ಸರ್ಕಾರದ ವಿರುದ್ಧ ಫೆಬ್ರವರಿ 7 ರಂದು ದೆಹಲಿಯ ಜಂತರ್​ ಮಂತರ್​​ನಲ್ಲಿ ಧರಣಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಇಂದು ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ನಾವು ಕೇಂದ್ರ ಸರ್ಕಾರಕ್ಕೆ 100 ರೂ. ತೆರಿಗೆ ಕಟ್ಟಿದರೆ ನಮಗೆ ಶೇ. 12-13ರಷ್ಟು ವಾಪಸ್ ಬರುತ್ತಿದೆ. ಆದರೂ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲವೆಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರದ ವಿರುದ್ಧ ನಾವು ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಎದುರಾಗಿದೆ. ದೆಹಲಿಯಲ್ಲಿ ನಮ್ಮ ಇಡೀ ಸರ್ಕಾರ ಪ್ರತಿಭಟನೆ ಮಾಡಲಿದೆ. ಈ ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಧರಣಿಯಲ್ಲಿ ರಾಜ್ಯದ ಎಲ್ಲಾ ಸಂಸದರು ಕೂಡ ಭಾಗಿಯಾಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು. 

ಕೇಂದ್ರ ಸರ್ಕಾರದ ವಿರುದ್ಧ ಈವರೆಗೆ ರಾಜ್ಯ ಸರ್ಕಾರ ಧರಣಿ ನಡೆಸಿರಲಿಲ್ಲ. ಆದರೆ ಈಗ ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ನಾಳೆ ಸಂಜೆಯೇ ದೆಹಲಿಗೆ ಹೋಗುತ್ತೇವೆ. ನಾಡಿದ್ದು ಪ್ರತಿಭಟನೆ ಮಾಡುತ್ತೇವೆ. ಸಂವಿಧಾನ ಅಳವಡಿಸಿಕೊಂಡ ಬಳಿಕ ಒಕ್ಕೂಟ ವ್ಯವಸ್ಥೆ ಒಪ್ಪಿಕೊಂಡಿದ್ದೇವೆ. ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ಈ ಹಣ ರಾಜ್ಯಗಳಿಗೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

14ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 42ರಷ್ಟು ಹಣ ನೀಡಬೇಕು. 15ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 41ರಷ್ಟು ಹಣ ನೀಡಬೇಕು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕವೇ ಈ ಆಯೋಗ ರಚನೆ ಆಗಿತ್ತು ಎಂದು ಸಿದ್ದರಾಮಯ್ಯ ಹೇಳಿದರು.

ಮಧ್ಯಂತರ ವರದಿಯಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 5498 ಕೋಟಿ ರೂಪಾಯಿ ವಿಶೇಷ ಅನುದಾನಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ, ಇದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರಸ್ಕರಿಸಿದ್ದರು. ಕೇಂದ್ರ ಸರ್ಕಾರ ತಿರಸ್ಕರಿಸಿದ್ದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿನ ಭೀಕರ ಬರ ಪರಿಸ್ಥಿತಿ ಇದ್ದು, 35 ಸಾವಿರ ಕೋಟಿ ರೂಪಾಯಿ ಬೆಳೆ ನಷ್ಟವಾಗಿದ್ದು, 17,901 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಕರ್ನಾಟಕ, ಕೇಂದ್ರಕ್ಕೆ ಮನವಿ ಮಾಡಿದೆ. ಆದರೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ(NDRF) ಇದುವರೆಗೆ ರಾಜ್ಯಕ್ಕೆ ಒಂದು ರೂಪಾಯಿ ನೀಡಿಲ್ಲ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT