ರಾಜ್ಯ

ರಾಜ್ಯದ ಕೈಗಾರಿಕಾ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ತ್ವರಿತ ಕ್ರಮ: ಸಚಿವ ಎಂಬಿ ಪಾಟೀಲ್

Manjula VN

ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ಪ್ರದೇಶಗಳು ಎದುರಿಸುತ್ತಿರುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ತ್ವರಿತ ಕ್ರಮ ಕೈಗೊಳ್ಳುವುದಾಗಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಸೋಮವಾರ ಹೇಳಿದರು.

ರಾಜ್ಯದ ನಾನಾ ಕೈಗಾರಿಕಾ ಪ್ರದೇಶಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರು ಸಂಬಂಧಿಸಿದ ವಿವಿಧ ಇಲಾಖೆಗಳೊಂದಿಗೆ ಸೋಮವಾರ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಚಿವರು, "ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಜಿಲ್ಲೆಗಳ ಕೈಗಾರಿಕಾ ಪ್ರದೇಶಗಳು ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿವೆ. ಇದಲ್ಲದೆ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಪ್ರತಿದಿನ 45 ಎಂಎಲ್‌ಡಿಯಷ್ಟು ಕುಡಿಯುವ ನೀರು ಅಗತ್ಯವಿದೆ. ಇದನ್ನು ಹಿಡಕಲ್ ಜಲಾಶಯದಿಂದ ಪೂರೈಸಬಹುದು. ಹಾಗೆಯೇ, ವಿಜಯಪುರ ಕೈಗಾರಿಕಾ ಪ್ರದೇಶಕ್ಕೆ ಕೂಡ ಕೃಷ್ಣಾ ಜಲಾಶಯದಿಂದ ನಿತ್ಯವೂ ಇಷ್ಟೇ ಪ್ರಮಾಣದ ಕುಡಿಯುವ ನೀರು ಪೂರೈಸಬೇಕಾಗಿದೆ ಎಂದು ಹೇಳಿದರು.

ಅಲ್ಲದೆ, ಕಲಬುರಗಿ ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ಮತ್ತು ಭೀಮಾ ನದಿಗಳಿಂದ ದಿನವೂ 7 ಎಂಎಲ್‌ಡಿ, ಬಳ್ಳಾರಿ ಕೈಗಾರಿಕಾ ಪ್ರದೇಶಕ್ಕೆ ತುಂಗಭದ್ರಾ ಅಣೆಕಟ್ಟೆಯಿಂದ 13 ಎಂಎಲ್‌ಡಿ, ರಾಯಚೂರು ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ನದಿಯಿಂದ 13 ಎಂಎಲ್‌ಡಿಯಷ್ಟು ಕುಡಿಯುವ ನೀರು ಅಗತ್ಯವಿದೆ. ಒಟ್ಟಾರೆ ಪ್ರತಿನಿತ್ಯ 290 ಎಂಎಲ್‌ಡಿ ನೀರು ಈ ಜಿಲ್ಲೆಗಳಿಗೆ ಬೇಕಾಗಿದೆ. ಇದನ್ನು ಬಗೆಹರಿಸದೆ ಹಾಗೆಯೇ ಬಿಟ್ಟರೆ ರಾಜ್ಯದ ಕೈಗಾರಿಕಾ ಬೆಳವಣಿಗೆಯೇ ಹಿನ್ನಡೆ ಕಾಣಲಿದೆ," ಎಂದು ಆತಂಕ ವ್ಯಕ್ತಪಡಿಸಿದರು.

ಹಳೆ ಮೈಸೂರು ಭಾಗದಲ್ಲಿರುವ ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ಈಗಾಗಲೇ ತ್ಯಾಜ್ಯ ನೀರನ್ನು ಸಂಸ್ಕರಿಸಿ, ಅದನ್ನು ಕೈಗಾರಿಕಾ ಉದ್ದೇಶಕ್ಕೆ ಬಳಸಲಾಗುತ್ತಿದೆ. ಆದರೆ, ಇಲ್ಲೆಲ್ಲ ಕುಡಿಯುವ ನೀರಿನ ವಿಪರೀತ ಅಭಾವವಿದೆ. ಆದ್ದರಿಂದ, ಎಲ್ಲೆಲ್ಲಿ ಎಷ್ಟು ನೀರಿನ ಲಭ್ಯತೆ ಇದೆ, ಇಲ್ಲಿಗೆಲ್ಲ ಯಾವ್ಯಾವ ಮೂಲಗಳಿಂದ ಕುಡಿಯುವ ನೀರನ್ನು ಪೂರೈಸಬಹುದು ಎಂದು ಕಂಡುಕೊಳ್ಳಬೇಕು. ಈ ಸಂಬಂಧವಾಗಿ ಇನ್ನೊಂದು ವಾರದಲ್ಲಿ ಮತ್ತೊಂದು ಸಭೆ ನಡೆಸಲಾಗುವುದು ಎಂದು ತಿಳಿಸಿದರು.

SCROLL FOR NEXT