ರಾಜ್ಯ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ತೀರ್ಪು ಪ್ರಕಟ ಮುಂದೂಡಿದ ಸುಪ್ರೀಂ ಕೋರ್ಟ್!

Srinivasamurthy VN

ಹಾಸನ: ಲೋಕಸಭಾ(LokaSabha) ಚುನಾವಣೆ ವೇಳೆಯಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna) ಪ್ರಮಾಣ ಪತ್ರದಲ್ಲಿ ಆಸ್ತಿ ವಿವರ ಮುಚ್ಚಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್(Supreme Court) ತನ್ನ ತೀರ್ಪು ಮುಂದೂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್(Karnataka High Court) ಈಗಾಗಲೇ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರ ಸಂಸತ್ ಸದಸ್ಯತ್ವವನ್ನು ಅಸಿಂಧೂಗೊಳಿಸಿ ಆದೇಶ ಹೊರಡಿಸಿದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಂಸದ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸುಪ್ರಿಂಕೋರ್ಟ್(Supreme Court) ಅಂತಿಮ ತೀರ್ಪು ಪ್ರಕಟಿಸಬೇಕಿತ್ತು. ಆದರೆ ಕೋರ್ಟ್ ಮಂಗಳವಾರ ನಡೆದ ವಿಚಾರಣೆಯಲ್ಲಿ ತೀರ್ಪ ಪ್ರಕಟವನ್ನು ಫೆಬ್ರವರಿ 20 ಕ್ಕೆ ಮುಂದೂಡಿದೆ.

2ನೇ ಬಾರಿ ತೀರ್ಪು ಮುಂದೂಡಿಕೆ
ಇತ್ತೀಚೆಗಷ್ಟೇ ಹೊಳೆನರಸೀಪುರದ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಸಲ್ಲಿಸಿದ್ದ ಇದೇ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ಅನರ್ಹಗೊಳಿಸಿದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಸಂಬಂಧ ಅನರ್ಹತೆಯನ್ನು ಪ್ರಶ್ನಿಸಿ ಪ್ರಜ್ವಲ್ ಅರ್ಜಿ ಸಲ್ಲಿಸಿದಾಗ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿತು. ಈ ಹಿಂದೆ ಪ್ರಜ್ವಲ್ ಮತ್ತು ದೇವರಾಜೇಗೌಡ ಅವರ ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್ ಜನವರಿ 19 ಕ್ಕೆ ಅಂತಿಮ ತೀರ್ಪನ್ನು ಕಾಯ್ದಿರಿಸಿತ್ತು. ನಂತರ ಫೆಬ್ರವರಿ 13 ರಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ತೀರ್ಪನ್ನು ಫೆಬ್ರವರಿ 20 ಕ್ಕೆ ಮುಂದೂಡಿದೆ.

ಕರ್ನಾಟಕ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದರೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದಲ್ಲಿ ಪ್ರಜ್ವಲ್ ಭವಿಷ್ಯಕ್ಕೆ ಆತಂಕ ಎದುರಾಗಿದ್ದು, ಅಂತಿಮ ತೀರ್ಪಿಗೆ ಇನ್ನೂ ಒಂದು ವಾರ ಕಾಯಬೇಕಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ಪ್ರಜ್ವಲ್ ರೇವಣ್ಣ, 'ನ್ಯಾಯ ಸಿಗುವ ವಿಶ್ವಾಸವಿದೆ ಮತ್ತು ಯಾರೂ ಕಾನೂನಿಗಿಂತ ಮೇಲಲ್ಲ. ನ್ಯಾಯಾಲಯಗಳ ಬಗ್ಗೆ ಹೆಚ್ಚಿನ ಗೌರವವನ್ನು ಹೊಂದಿದ್ದೇವೆ ಮತ್ತು ಕಾದು ನೋಡುತ್ತೇವೆ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣರ ಸದಸ್ಯತ್ವ ಅಸಿಂಧು ಬಳಿಕ ಕುತೂಹಲ ಮೂಡಿಸಿದ ಇಂದಿನ ತೀರ್ಪು, ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಈ ತೀರ್ಪು ಮಹತ್ವ ಪಡೆದುಕೊಂಡಿದೆ‌. ಮಾಜಿ‌ ಪ್ರಧಾನಿ ದೇವೇಗೌಡರ(HD Devegowda) ಮೊಮ್ಮಗನ ರಾಜಕೀಯ ಭವಿಷ್ಯ‌ ನಿರ್ಧರಿಸಲಿರೋ ಸುಪ್ರೀಂ ತೀರ್ಪಿ ಬಗ್ಗೆ ಎಲ್ಲರೂ ಕುತೂಹಲದಿಂದ ಎದುರು ನೋಡುತ್ತಿದ್ದು, ಒಂದು ವೇಳೆ ಹೈಕೋರ್ಟ್ ಆದೇಶ ಎತ್ತಿಹಿಡಿದರೆ ಆರು ವರ್ಷ ಚುನಾವಣೆಗೆ ಸ್ಪರ್ಧೆ ಮಾಡಲು ಪ್ರಜ್ವಲ್ ರೇವಣ್ಣ(Prajwal Revanna) ಅವರಿಗೆ ಅವಕಾಶ ಸಿಗದಿರುವ ಆತಂಕ ಎದುರಾಗಿದೆ.
 

SCROLL FOR NEXT