ಸಂಗ್ರಹ ಚಿತ್ರ 
ರಾಜ್ಯ

ವಿಧಾನಸಭೆ ಕಲಾಪ: ಅಕ್ರಮ ಮದ್ಯ ಮಾರಾಟದಲ್ಲಿ ಅಬಕಾರಿ ಅಧಿಕಾರಿಗಳೂ ಕೈಜೋಡಿಸಿದ್ದಾರೆ- ಕ್ರಮಕ್ಕೆ ಶಾಸಕರ ಆಗ್ರಹ

ಗ್ರಾಮೀಣ ಭಾಗದಲ್ಲಿ ಮನೆ, ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಈ ಅಕ್ರಮದಲ್ಲಿ ಅಬಕಾರಿ ಅಧಿಕಾರಿಗಳೂ ಕೂಡ ಕೈಜೋಡಿಸಿದ್ದಾರೆ. ಇದನ್ನು ತಡೆಗಟ್ಟಲು ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ವಿಧಾನಸಭೆಯಲ್ಲಿ ಶಾಸಕರು ಪಕ್ಷಬೇಧ ಮರೆತು ಮಂಗಳವಾರ ಆಗ್ರಹಿಸಿದರು.

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಮನೆ, ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಈ ಅಕ್ರಮದಲ್ಲಿ ಅಬಕಾರಿ ಅಧಿಕಾರಿಗಳೂ ಕೂಡ ಕೈಜೋಡಿಸಿದ್ದಾರೆ. ಇದನ್ನು ತಡೆಗಟ್ಟಲು ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ವಿಧಾನಸಭೆಯಲ್ಲಿ ಶಾಸಕರು ಪಕ್ಷಬೇಧ ಮರೆತು ಮಂಗಳವಾರ ಆಗ್ರಹಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ದೊಡ್ಡ ಬಳ್ಳಾಪುರ ಕ್ಷೇತ್ರದ ಬಿಜೆಪಿ ಶಾಸಕ ಧೀರಜ್ ಮುನಿರಾಜು, "ನನ್ನ ಕ್ಷೇತ್ರದಲ್ಲಿ ಹಳ್ಳಿ ಹಳ್ಳಿಯಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ನನ್ನ ಹುಟ್ಟೂರಿನ ಬೂತ್ ವಡ್ಡರಹಳ್ಳಿಯಲ್ಲಿ ಆರು ಕಡೆ ಮದ್ಯ ಮಾರಾಟವಾಗುತ್ತಿದೆ. ಕುಡಿದು ಲಿವರ್ ಹಾನಿಗೊಳಗಾಗಿ 16 ಮಂದಿ ಕಿರಿಯ ವಯಸ್ಸಿನವರು ಮೃತಪಟ್ಟಿದ್ದಾರೆ. ಅಕ್ರಮ ಮಾರಾಟವನ್ನು ಸ್ಥಗಿತಗೊಳಿಸುವಂತೆ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರೂ ಪ್ರಯೋಜನವಾಗುತ್ತಿಲ್ಲ" ಎಂದು ಆಕ್ಷೇಪಿಸಿದರು.

"ಪ್ರತಿಯೊಬ್ಬರಿಗೆ ಎರಡೂವರೆ ಲೀಟರ್ ಮದ್ಯ ಸಂಗ್ರಹಕ್ಕೆ ಅವಕಾಶವಿದೆ. ಅದಕ್ಕಿಂತ ಹೆಚ್ಚು ಸಂಗ್ರಹ ಮಾಡಿಕೊಂಡಿದ್ದರೆ, ಅದರ ಹಿಂದೆ ಮಾರಾಟದ ಉದ್ದೇಶವಿದ್ದರೆ ಕ್ರಮ ಕೈಗೊಳ್ಳಬಹುದು. ಆದರೆ, ಅಬಕಾರಿ ಅಧಿಕಾರಿಗಳು ಬಾರ್​ನವರಿಗೆ ಮಾರಾಟದ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ. ನಿಯಮ ಮೀರಿ ಹೆಚ್ಚುವರಿ ಮದ್ಯ ಮಾರಾಟ ಮಾಡಿದ ಬಾರ್‌ಗಳ ವಿರುದ್ಧ ಮೂರು ಬಾರಿ ಪ್ರಕರಣ ದಾಖಲಾದರೆ ಪರವಾನಗಿ ರದ್ದು ಮಾಡಬಹುದು. ಆದರೆ, ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿಲ್ಲ. ಜೊತೆಗೆ ತಮ್ಮ ತಾಲ್ಲೂಕು ನೆರೆಯ ಆಂಧ್ರ ಪ್ರದೇಶಕ್ಕೆ ಹೊಂದಿಕೊಂಡಿದ್ದು, ಅಲ್ಲಿಂದ ಸೇಂದಿ ಕೂಡ ತಂದು ಮಾರಾಟ ಮಾಡಲಾಗುತ್ತಿದೆ" ಎಂದು ಹೇಳಿದರು.

ಶಾಸಕ ಧೀರಜ್ ಅವರ ಪ್ರಸ್ತಾಪಕ್ಕೆ ಧ್ವನಿಗೂಡಿಸಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, "ಮನೆ, ಮನೆಯಲ್ಲಿ ಹಳ್ಳಿ ಹಳ್ಳಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದೆ. ಎಲ್ಲವೂ ಗೊತ್ತಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ" ಎಂದು ಆಕ್ಷೇಪಿಸಿದರು.

ಶಾಸಕರಾದ ಸುರೇಶ್ ಗೌಡ, ಆರಗ ಜ್ಞಾನೇಂದ್ರ ಮಾತನಾಡಿ, "ಅಕ್ರಮ ಮದ್ಯ ಮಾರಾಟದಿಂದ ಜನರ ನೆಮ್ಮದಿ ಹಾಳಾಗುತ್ತಿದೆ. ಮಹಿಳೆಯರು ತಡರಾತ್ರಿ ಕರೆ ಮಾಡಿ ಅಕ್ರಮ ಮದ್ಯ ಮಾರಾಟದಿಂದ ಎಷ್ಟು ಪಾಲು ಪಡೆಯುತ್ತಿದ್ದೀರಾ ಎಂದು ಪ್ರಶ್ನಿಸುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆಸಿದರೆ ಪರಿಶಿಷ್ಟ ಜಾತಿಯವರ ಕಾಲೋನಿಗಳಲ್ಲಿ ಕುಡಿದು ಆರೋಗ್ಯ ಹಾಳು ಮಾಡಿಕೊಂಡು ಯುವಕರೇ ಇಲ್ಲವಾಗುತ್ತಾರೆ" ಎಂದು ಆತಂಕ ವ್ಯಕ್ತಪಡಿಸಿದರು.

ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿ, "ನಿಯಮಾನುಸಾರ ಅಕ್ರಮ ಮದ್ಯ ಮಾರಾಟಕ್ಕೆ ಕ್ರಮ ಕೈಗೊಳ್ಳುತ್ತಿದ್ದೇವೆ, ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಬೇರೆ ರೀತಿಯಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಂಡು ಅಕ್ರಮಗಳಿಗೆ ಕಡಿವಾಣ ಹಾಕಲು ಪ್ರಯತ್ನಿಸಲಾಗುವುದು" ಎಂದು ಹೇಳಿದರು‌.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT