ರಾಜ್ಯ

ಜೈಲಿಂದ ಬಿಡುಗಡೆಯಾದ ಬೆನ್ನಲ್ಲೇ ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತೆ ಪೊಲೀಸರ ವಶಕ್ಕೆ

Sumana Upadhyaya

ಬೆಂಗಳೂರು: ರಾಜ್ಯದಲ್ಲಿ ಕನ್ನಡ ಭಾಷೆಯಲ್ಲಿ ನಾಮಫಲಕ ಅಳವಡಿಕೆ ಕಡ್ಡಾಯಗೊಳಿಸುವ ವಿಚಾರದಲ್ಲಿ ನಡೆಸಲಾದ ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಮುಖ್ಯಸ್ಥ ಕರವೇ ನಾರಾಯಣ ಗೌಡ ಅವರನ್ನು ಇಂದು ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಿದ ಕೂಡಲೇ ಮತ್ತೆ ಪೊಲೀಸರ ವಶಕ್ಕೆ ಪಡೆದಿದ್ದಾರೆ. 

ನಾರಾಯಣಗೌಡ ಅವರು ಬಿಡುಗಡೆಯಾಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಇದೀಗ ಮಾರ್ಥಾಸ್ ಆಸ್ಪತ್ರೆಯಲ್ಲಿ ನಾರಾಯಣಗೌಡ ಅವರನ್ನು ಆರೋಗ್ಯ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಬಳಿಕ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ. 2017ರ ಹಳೇ ಕೇಸ್ ಸಂಬಂಧ ಪೊಲೀಸರು ನಾರಾಯಣಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.

ಏನಿದು ಪ್ರಕರಣ?: 2017ರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ‌ ಲೇಔಟ್ ಪೊಲೀಸ್ ಠಾಣೆಯಲ್ಲಿ ನಾರಾಯಣ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ‌ ಲೇಔಟ್ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊರೋನಾ ಸಮಯದಲ್ಲಿ ರಾಷ್ಟ್ರೀಯ ವಿಪ್ಪತ್ತು ನಿರ್ವಹಣ ಕಾಯ್ದೆಯಡಿ ಹಲಸೂರ್ ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ವಾರಂಟ್ ಜಾರಿಯಾಗಿತ್ತು. ಹೀಗಾಗಿ ಹಲಸೂರ್ ಗೇಟ್ ಠಾಣೆ ಪೊಲೀಸರು ನಾರಾಯಣಗೌಡ ಅವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ.

SCROLL FOR NEXT