ಸಂಗ್ರಹ ಚಿತ್ರ 
ರಾಜ್ಯ

ಶಾಸಕರು/ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣ: ಮಾಹಿತಿ ನೀಡುವಂತೆ ರಿಜಿಸ್ಟ್ರಾರ್‌ಗೆ ಹೈಕೋರ್ಟ್ ಸೂಚನೆ

ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸಂಸದರ ವಿರುದ್ಧ ವಿಚಾರಣಾ ಹಂತದಲ್ಲಿರುವ ಕ್ರಿಮಿನಲ್ ಪ್ರಕರಣಗಳ ಕುರಿತು ಮಾಹಿತಿ ಸಲ್ಲಿಸುವಂತೆ ರಿಜಿಸ್ಟ್ರಾರ್‌ಗೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ.

ಬೆಂಗಳೂರು: ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸಂಸದರ ವಿರುದ್ಧ ವಿಚಾರಣಾ ಹಂತದಲ್ಲಿರುವ ಕ್ರಿಮಿನಲ್ ಪ್ರಕರಣಗಳ ಕುರಿತು ಮಾಹಿತಿ ಸಲ್ಲಿಸುವಂತೆ ರಿಜಿಸ್ಟ್ರಾರ್‌ಗೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ.

ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಮೇರೆಗೆ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ವಿಚಾರಣೆಯ ವೇಳೆ ಅಮಿಕಸ್‌ ಕ್ಯೂರಿಯಾಗಿರುವ ಹಿರಿಯ ವಕೀಲ ಆದಿತ್ಯ ಸೋಂಧಿ ಅವರು “ಸುಪ್ರೀಂ ಕೋರ್ಟ್‌ 2023ರ ನವೆಂಬರ್‌ನಲ್ಲಿ ಕೆಲವು ನಿರ್ದೇಶನಗಳನ್ನು ನೀಡಿದ್ದು, ಇದನ್ನು ಉಲ್ಲೇಖಿಸಿ ನವೆಂಬರ್‌ 9ರಂದು ಮೆಮೊ ಸಲ್ಲಿಸಲಾಗಿದೆ ಎಂದು ಹೇಳಿದರು.

ಈ ವೇಳೆ  ಸಿಜೆ ಅವರು “ಸುಪ್ರೀಂ ಕೋರ್ಟ್‌ ಆದೇಶಕ್ಕೆ ಅನುಗುಣವಾಗಿ ನಾವು ಕ್ರಮಕೈಗೊಂಡಿದ್ದೇವೆ” ಎಂದರು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ಸೋಂಧಿ ಅವರು “ಪ್ರಧಾನ ಸತ್ರ ನ್ಯಾಯಾಲಯದಲ್ಲಿ (ವಿಶೇಷ ನ್ಯಾಯಾಲಯ) ಶಾಸಕರು ಮತ್ತು ಸಂಸದರಿಗೆ ಸಂಬಂಧಿಸಿದ ಬಾಕಿ ಇರುವ ಪ್ರಕರಣಗಳನ್ನು ರಿಜಿಸ್ಟ್ರಿಯು ವಿಭಾಗೀಯ ಪೀಠದ ಮುಂದೆ ಮಂಡಿಸಲು ಸೂಚಿಸಬೇಕು. ಇದರಿಂದ ಆ ಪ್ರಕರಣಗಳಲ್ಲಿನ ಬೆಳವಣಿಗೆ ಪರಿಶೀಲಿಸಲು ಅನುಕೂಲವಾಗಲಿದೆ” ಎಂದರು.

ಮುಂದುವರಿದು, “2022ರ ಮಾರ್ಚ್‌ 5ರಂದು ಹೈಕೋರ್ಟ್‌ ಆದೇಶ ಮಾಡಿದ್ದು, ಹಲವು ಶಾಸಕರು/ ಸಂಸದರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದಿರುವುದರ ಕುರಿತಾದ ಸ್ಥಿತಿಗತಿಯ ಬಗ್ಗೆ ಈ ನ್ಯಾಯಾಲಯದ ಪರಿಶೀಲನೆಯಾಗಬೇಕಿದೆ. ಈ ವಿಚಾರದಲ್ಲಿ ಸಾಕಷ್ಟು ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಬೇಕಿದೆ. ನ್ಯಾಯಾಲಯಕ್ಕೆ ಸಮಯಾವಕಾಶ ಆದಾಗ ಇದನ್ನು ಕೈಗೆತ್ತಿಕೊಳ್ಳಬಹುದು” ಎಂದರು.

ಇದನ್ನು ಆಲಿಸಿದ ಪೀಠವು “2023 ನವೆಂಬರ್‌ 9ರ ಸುಪ್ರೀಂ ಕೋರ್ಟ್‌ ನಿರ್ದೇಶನವನ್ನು ನವೆಂಬರ್‌ 20ರಂದು ಆದಿತ್ಯ ಸೋಂಧಿ ಅವರು ಮೆಮೊ ರೂಪದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಅಮಿಕಸ್‌ ಕೋರಿಕೆಯಂತೆ ರಿಜಿಸ್ಟ್ರಿಯು ಆದೇಶ ಅನುಪಾಲನೆ ಮಾಡಿದೆ. ಈ ಆದೇಶಕ್ಕೂ ಮುನ್ನ ಹೈಕೋರ್ಟ್‌ ಕೆಲವು ನಿರ್ದೇಶನಗಳನ್ನು ನೀಡಿದ್ದು, ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ನಿರ್ದೇಶನಗಳಿಗೆ ಅನುಪಾಲನಾ ವರದಿಯನ್ನು ರಿಜಿಸ್ಟ್ರಿ ಸಲ್ಲಿಸಬೇಕು” ಎಂದು ಆದೇಶಿಸಿ, ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT