ರಾಜ್ಯ

ನಾಳೆ ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ 'ಯುವ ನಿಧಿ' ಯೋಜನೆಗೆ ಸಿಎಂ ಚಾಲನೆ

Lingaraj Badiger

ಬೆಂಗಳೂರು: ಪದವೀಧರ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ 1500 ಭತ್ಯೆ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ 'ಯುವ ನಿಧಿ' ಯೋಜನೆಗೆ ಶುಕ್ರವಾರ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಾಗಿದ್ದಾರೆ.

ಸ್ವಾಮಿ ವಿವೇಕಾನಂದ ಜಯಂತಿ ದಿನವಾದ ಜನವರಿ 12 ರಂದು ಯುವ ನಿಧಿ ಗ್ಯಾರಂಟಿ ಯೋಜನೆಗೆ ಚಾಲನೆಗೆ ಶಿವಮೊಗ್ಗದಲ್ಲಿ ವೇದಿಕೆ ಸಿದ್ಧವಾಗುತ್ತಿದೆ. 

ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದ್ದು, ಸುಮಾರು 85,000 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಸಚಿವರುಗಳಾದ ಮಧು ಬಂಗಾರಪ್ಪ, ಡಾ.ಎಂ.ಸಿ.ಸುಧಾಕರ್, ಶಾಸಕರು, ಅಧಿಕಾರಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಯುವ ನಿಧಿ ಯೋಜನೆಗೆ ಚಾಲನೆ ದೊರೆಯಲಿದೆ.

ಬೆಳಗ್ಗೆ 11 ಗಂಟೆಗೆ ಆರಂಭವಾಗುವ ಕಾರ್ಯಕ್ರಮದಲ್ಲಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಮತ್ತು ಹಾವೇರಿ ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆಯಿದೆ.

ಕರ್ನಾಟಕದಲ್ಲಿ ನೆಲೆಸಿರುವ ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾದಾರರಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ ಎಂದು ಯುವ ನಿಧಿ ಯೋಜನೆ ಅನುಷ್ಠಾನಗೊಳಿಸುತ್ತಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಶರಣಪ್ರಕಾಶ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಸಚಿವರು ಹೇಳಿದ್ದಾರೆ.

ಈ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ. ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ನೀಡಲಾಗುತ್ತದೆ. ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

SCROLL FOR NEXT