ಇಂದಿನ ಪ್ರಮುಖ ಸುದ್ದಿಗಳು 05-07-2024 
ರಾಜ್ಯ

ಮುಡಾ ಹಗರಣ: 21 IAS ಅಧಿಕಾರಿಗಳ ವರ್ಗಾವಣೆ; ದಲಿತ ಅಭಿವೃದ್ಧಿ ಹಣ ಸಮರ್ಪಕ ಬಳಕೆಗೆ ಸಿಎಂ ಸೂಚನೆ; ರೌಡಿ ಅಭಿಮಾನಿಗಳ Fans Page ಗೆ CCB ಕಡಿವಾಣ; ಇಂದಿನ ಪ್ರಮುಖ ಸುದ್ದಿಗಳು 05-07-2024

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಉಪ ಮೇಯರ್ ಮೋಹನ್ ರಾಜು ಸೇರಿ ಮೂವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿರುವ ರೌಡಿ ಅಭಿಮಾನಿಗಳ ಫ್ಯಾನ್ ಪೇಜ್ ಗಳಿಗೆ ಕಡಿವಾಣ ಹಾಕಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.

ಮುಡಾ ಹಗರಣ: 21 IAS ಅಧಿಕಾರಿಗಳ ವರ್ಗಾವಣೆ

ಮೈಸೂರು ಅಭಿವೃದ್ಧಿ ಪ್ರಾಧಿಕಾರ-ಮುಡಾದಿಂದ ನಿವೇಶನ ಹಂಚಿಕೆಯ ಹಗರಣ ಹೊರಬರುತ್ತಿದ್ದಂತೆ ರಾಜ್ಯ ಸರ್ಕಾರ ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಸೇರಿದಂತೆ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.

ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಲಕ್ಷ್ಮಿಕಾಂತ್ ಈ ಹಿಂದೆ ಮೈಸೂರು ಪಾಲಿಕೆ ಆಯುಕ್ತರಾಗಿದ್ದರು. ಈ ಮಧ್ಯೆ ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲಾಗಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರವಿದೆ. ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ.

ದಲಿತ ಅಭಿವೃದ್ಧಿ ಹಣ ಸಮರ್ಪಕ ಬಳಕೆಗೆ CM Siddaramaiah ಸೂಚನೆ

ಎಸ್ ಸಿ, ಎಸ್ ಪಿ ಮತ್ತು ಟಿಎಸ್ ಪಿಯಡಿ ನಿಗದಿ ಮಾಡಿರುವ ಅನುದಾನವನ್ನು ಆಯಾ ವರ್ಷವೇ ವೆಚ್ಚ ಮಾಡಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿಂದು ನಡೆದ ರಾಜ್ಯ ಅನುಸೂಚಿತ ಜಾತಿಗಳು, ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಮಾತನಾಡಿದ ಸಿಎಂ, ಇಡೀ ದೇಶದಲ್ಲೇ ಕರ್ನಾಟಕದಲ್ಲಿ ಮಾತ್ರ ಎಸ್ ಸಿ ಎಸ್ ಪಿ, ಟಿಎಸ್ ಪಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ.

ಈ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ಆಯಾ ವರ್ಷವೇ ಶೇ. 100 ರಷ್ಟು ಖರ್ಚು ಮಾಡಬೇಕೆಂಬ ಕಾನೂನನ್ನು ಜಾರಿಗೆ ತರಲಾಗಿದ್ದು, ಖರ್ಚು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಈ ಮಧ್ಯೆ ಎಸ್ ಸಿ, ಎಸ್ ಪಿ ಮತ್ತು ಟಿಎಸ್ ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಮಂಗಳೂರಿನಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ

ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಕಳೆದ ಕೆಲವು ದಿನಗಳಿಂದ ನಿರಂತರ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳೂರಿನಲ್ಲಿ ಹೆದ್ದಾರಿ ಪಕ್ಕ ಗುಡ್ಡ ಕುಸಿತವಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಕೆಲವೆಡೆ ಭೂ ಕುಸಿತವೂ ಉಂಟಾಗಿದೆ. ಈ ಮಧ್ಯೆ ಕೃಷ್ಣೆ, ತುಂಗೆ, ಕಾವೇರಿ ನದಿಗಳು ಮೈದುಂಬಿ ಹರಿಯುತ್ತಿವೆ.

ಶೃಂಗೇರಿಯ ಸ್ನಾನಘಟ್ಟ ಹಾಗೂ ಕಪ್ಪೆ ಶಂಕರ ದೇವಸ್ಥಾನದ ಮೆಟ್ಟಿಲುಗಳು ಸಂಪೂರ್ಣ ನೀರಿನಲ್ಲಿ ಮುಳುಗಿವೆ. ಕೊಡಗು, ಭಾಗಮಂಡಲ ಸೇರಿದಂತೆ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ 100 ಅಡಿ ಭರ್ತಿಯಾಗಿದ್ದು, ಈ ಭಾಗದ ರೈತರಲ್ಲಿ ಸಂತಸ ಮೂಡಿಸಿದೆ.

ರೇಣುಕಾಸ್ವಾಮಿ ಹತ್ಯೆ: ಮಾಜಿ ಉಪ ಮೇಯರ್ ಮೋಹನ್ ರಾಜುಗೆ Police Notice

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಉಪ ಮೇಯರ್ ಮೋಹನ್ ರಾಜು ಸೇರಿ ಮೂವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಮೋಹನ್ ರಾಜು ನಗರದ ಬಸವೇಶ್ವರ ನಗರ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಉಪ ಮೇಯರ್ ಮೋಹನ್ ರಾಜ್ ರಿಂದ 40 ಲಕ್ಷ ರೂಪಾಯಿ ಹಣ ಪಡೆದಿದ್ದರ ಬಗ್ಗೆ ವಿಚಾರಣೆ ವೇಳೆ ದರ್ಶನ್ ಅವರು ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಪ್ರಕರಣ ಸಂಬಂಧ ಪವಿತ್ರಾಗೌಡ ಸ್ನೇಹಿತೆ ಸಮತ ಅವರಿಗೂ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಪ್ರಕರಣದ ಆರೋಪಿ ಒಬ್ಬನಿಗೆ ಹಣಕಾಸಿನ ಸಹಾಯ ಮಾಡಿರುವ ಆರೋಪ ಇವರ ಮೇಲಿದೆ. ಬೆಂಗಳೂರಿನ ಪ್ರಭಾವಿ ಶಾಸಕನ ಕಾರು ಚಾಲಕ ಕಾರ್ತಿಕ್ ಪುರೋಹಿತ್ ಎಂಬಾತನಿಗೂ ನೋಟಿಸ್ ನೀಡಲಾಗಿದೆ. ರೇಣುಕಾಸ್ವಾಮಿ ಹತ್ಯೆ ಕೇಸ್ ಆರೋಪಿ ಪ್ರದೋಷ್ ಗೆ ಆಪ್ತನಾಗಿರುವ ಕಾರ್ತಿಕ್ ಪುರೋಹಿತ್ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ರೌಡಿ ಅಭಿಮಾನಿಗಳ Fans Page ಗೆ CCB ಕಡಿವಾಣ

ಸಾಮಾಜಿಕ ಜಾಲತಾಣಗಳಲ್ಲಿರುವ ರೌಡಿ ಅಭಿಮಾನಿಗಳ ಫ್ಯಾನ್ ಪೇಜ್ ಗಳಿಗೆ ಕಡಿವಾಣ ಹಾಕಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ. ಸೈಬರ್ ಕ್ರೈಂ ಪೊಲೀಸರ ಸಹಾಯದೊಂದಿಗೆ ಈಗಾಗಲೇ ಅಂತಹ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ. ಕುಖ್ಯಾತ ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ, ಸೈಕಲ್ ರವಿ ಸೇರಿದಂತೆ ಹಲವರ ಹೆಸರಿನಲ್ಲಿ ಬಾಸ್ ಟ್ಯಾಗ್ ಲೈನ್ ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾನ್ ಪೇಜ್ ಗಳನ್ನು ತೆರೆಯಲಾಗುತ್ತಿದ್ದು ಗಮನಕ್ಕೆ ಬಂದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

SCROLL FOR NEXT