ಬೆಂಗಳೂರು: ಸಮಗ್ರ ತ್ಯಾಜ್ಯ ನಿರ್ವಹಣೆ ನಮ್ಮ ಆದ್ಯತೆಯಾಗಿದ್ದು, ಇದಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಎಸ್ಆರ್ ಉಮಾಶಂಕರ್ ಅವರು ಸೋಮವಾರ ಹೇಳಿದರು.
ವಿಕಾಸಸೌಧದಲ್ಲಿ ಬಿಬಿಎಂಪಿ ಸಿ40 ನಗರಗಳ ಸಹಯೋಗದಲ್ಲಿ ‘ಕ್ಲೈಮೇಟ್ ಆ್ಯಕ್ಷನ್’ ಕುರಿತ ಎರಡು ದಿನಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ನಗರದಲ್ಲಿನ ಘನತ್ಯಾಜ್ಯ ಸಮಸ್ಯೆಯನ್ನು ಹೋಗಲಾಡಿಸಲು ಹಲವು ಉಪಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದ್ದು, ಎಲ್ಲವನ್ನೂ ಅನುಷ್ಠಾನಗೊಳಿಸುವ ಕೆಲಸ ಮುಂದುವರೆದಿದೆ. ಸಮಗ್ರ ತ್ಯಾಜ್ಯ ನಿರ್ವಹಣೆಗಾಗಿ ರಾಜ್ಯ ಸರ್ಕಾರವು 50 ರಿಂದ 100 ಎಕರೆ ಸರ್ಕಾರಿ ಭೂಮಿಯನ್ನು ಗುರುತಿಸಿದೆ. ಪಾಲಿಕೆಗೆ ಭೂಮಿ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.
ನಗರದಲ್ಲಿ ತೇವ ಮತ್ತು ಒಣ ತ್ಯಾಜ್ಯವನ್ನು ಕಡ್ಡಾಯವಾಗಿ ವಿಂಗಡಣೆ ಮಾಡಬೇಕು, ನಗರದಲ್ಲಿ ತ್ಯಾಜ್ಯದಿಂದ ಇಂಧನ ಸ್ಥಾವರವನ್ನು ಸ್ಥಾಪಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಕಾರ್ಯಾರಂಭ ಮಾಡಲಾಗುವುದು ಎಂದು ತಿಳಿಸಿದರು.
ನಗರದಲ್ಲಿನ ಪರಿಸರ ಮಾಲಿನ್ಯವನ್ನು ತಡೆಗಟ್ಟಲು, ಅನೇಕ ಯೋಜನೆಗಳನ್ನು ಪ್ರಾರಂಭಿಸಿ, ಅವುಗನ್ನು ಕಾರ್ಯಗತಗೊಳಿಸಬೇಕಿದೆ. ನಗರದಾದ್ಯಂತ ಹಸಿರೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಜಾಗತಿಕ ತಾಪಮಾನದಲ್ಲಿ ಸಾಕಷ್ಟು ಏರುಪೇರಾಗುತ್ತಿದ್ದು, ಇದಕ್ಕೆ ಮಾಲಿನ್ಯದ ಮಟ್ಟ ಹೆಚ್ಚಾಗುತ್ತಿರುವುದು ಪರಿಣಾಮ ಬೀರುತ್ತಿದೆ. ಮಾಲಿನ್ಯವನ್ನು ನಿಯಂತ್ರಿಸಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ನಗರದಲ್ಲಿನ ಕಟ್ಟಡ ಅವಶೇಷಗಳ ವಿಲೇವಾರಿ ಸರಿಪಡಿಸಬೇಕು. ಕಟ್ಟಡದ ಅವಶೇಷಗಳನ್ನು ಎಲ್ಲೆಂದರಲ್ಲಿ ಸುರಿಯುವುದರಿಂದ ವಾಯು ಮಾಲಿನ್ಯವಾಗುತ್ತದೆ. ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.