ಬೆಂಗಳೂರು: ಅಪಘಾತಕ್ಕೀಡಾಗಿದ್ದ ಖಾಸಗಿ ಕಾಲೇಜಿನ ಕಾನೂನು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ನಿರಾಕರಿಸಿದ್ದಾರೆಂದು ಆರೋಪಿಸಿ ಯಶವಂತಪುರ ಠಾಣೆ ಹೊಯ್ಸಳ ಸಿಬ್ಬಂದಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿದೆ.
ಶ್ರೀನಗರದ ನಿವಾಸಿ ರಾಹುಲ್ ಗೌಡ ಗಾಯಗೊಂಡಿದ್ದು, ಕಳೆದ ಸೋಮವಾರ ರಾತ್ರಿ ಯಶವಂತಪುರ ಸಮೀಪ ಆತನ ಬೈಕ್ ಅಪಘಾತಕ್ಕೀಡಾಗಿತ್ತು. ಆಗ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಹೊಯ್ಸಳ ಸಿಬ್ಬಂದಿ ನಿರಾಕರಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಜನರ ಟೀಕೆಗೆ ಗುರಿಯಾಗಿದೆ.
ಎಂ.ಎಸ್.ರಾಮಯ್ಯ ಕಾನೂನು ಕಾಲೇಜಿನ ವಿದ್ಯಾರ್ಥಿ ರಾಹುಲ್, ಯಶವಂತಪುರ ಕಡೆಯಿಂದ ಸೋಮವಾರ ರಾತ್ರಿ 2.30ರ ಸುಮಾರಿಗೆ ಬುಲೆಟ್ ನಲ್ಲಿ ಮನೆಗೆ ಮರಳುತ್ತಿದ್ದ. ಆತ ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡಿದ್ದ. ಘಟನೆ ಬಳಿಕ ಯಶವಂತಪುರ ಸಂಚಾರ ಠಾಣೆ ಪೊಲೀಸರು ಕೂಡ ಸ್ಥಳಕ್ಕೆ ತೆರಳಿದ್ದರು.
ಆದರೆ, ಅಪಘಾತಕ್ಕೀಡಾಗಿ ಕಿವಿಯಲ್ಲಿ ರಕ್ತ ಸೋರುತ್ತಿದ್ದ ಗಾಯಾಳುವನ್ನು ಹೊಯ್ಸಳ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ಸಿಬ್ಬಂದಿ ನಿರಾಕರಿಸಿದ್ದಾರೆ, 108 ಆ್ಯಂಬುಲೆನ್ಸ್ ಅನ್ನು ಕರೆಸಿ ಗಾಯಾಳುವನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ.
ಈ ವೇಳೆ ಹೊಯ್ಸಳ ವಾಹನದಲ್ಲಿ ಯಾಕೆ ಗಾಯಾಳುವನ್ನು ಕರೆದೊಯ್ಯಲಿಲ್ಲವೆಂದು ಸಾರ್ವಜನಿಕರು ಪ್ರಶ್ನಿಸಿದ್ದು, ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದೇವೆಂದು ಹೊಯ್ಸಳ ಸಿಬ್ಬಂದಿ ಹೇಳುವ ಮಾತನ್ನು ವಿಡಿಯೋದಲ್ಲಿ ಕಂಡು ಬಂದಿದೆ. ಈ ವಿಡಿಯೋವನ್ನು ಸ್ಥಳೀಯರು ಜನರು ತಮ್ಮ ಮೊಬೈಲ್ ಗಳಲ್ಲಿ ಚಿತ್ರೀಕರಿಸಿಕೊಂಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರು, ಯಶವಂತಪುರ ಠಾಣೆ ಹೊಯ್ಸಳ ಸಿಬ್ಬಂದಿಗೆ ವಿವರಣೆ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ.
ಸ್ವಯಂ ಅಪಘಾತವಾಗಿದ್ದು, ಘಟನೆ ಸಂಬಂಧ ತನಿಖೆ ಆರಂಭಿಸಲಾಗಿದೆ. ತನಿಖೆಯ ವರದಿಯಂತೆ ಕ್ರಮ ಕೈಗೊಳ್ಳಲಾಗುವುದು. ಗಾಯಾಳು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆಂದು ಹೇಳಿದ್ದಾರೆ.