ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿತಕ್ಕೆ ಸಂಬಂಧಿಸಿ ಸಕಲೇಶಪುರ ದೊಡ್ಡತಪ್ಪಲು ಗುಡ್ಡ ಕುಸಿತ ಪ್ರದೇಶಕ್ಕೆ ಇಂದು ಭಾನುವಾರ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಕಳೆದ ಐದಾರು ದಿನಗಳಿಂದ ದೊಡ್ಡಮಟ್ಟದ ಮಳೆ ಆರಂಭವಾಗಿದೆ. 2018ರಲ್ಲಿ ನಾನು ಸಿಎಂ ಆಗಿದ್ದಾಗ ಇದೇ ರೀತಿ ಮಳೆಯಾಗಿತ್ತು. 2018ರ ನಂತರ ಈಗ ಈ ರೀತಿ ಮಳೆಯಾಗಿದೆ.
ಒಂದೆಡೆ ಜಲಾಶಯಗಳು ತುಂಬಿದ್ದು ಪಕ್ಕದ ರಾಜ್ಯಗಳ ಜೊತೆ ಸಂಘರ್ಷಕ್ಕೆ ಒಂದು ವರ್ಷ ವಿರಾಮ ಸಿಕ್ಕಿದೆ. ಮಳೆಯಿಂದ ಆಗಿರುವ ಅನಾಹುತಗಳು, ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು. ಅಂಕೋಲದ ಶಿರೂರಿನಲ್ಲಿ ಮಳೆ ಮುಂದುವರೆದರೆ ಇನ್ನೂ ಭೂಕುಸಿತವಾಗುತ್ತದೆ. ಸಕಲೇಶಪುರದಿಂದ ಉದ್ದಕ್ಕೂ ಭೂಕುಸಿತವಾಗುತ್ತಲೇ ಇದೆ.
ಎಂಟು ವರ್ಷದ ಹಿಂದಿನಿಂದ ಪಶ್ಚಿಮ ಘಟ್ಟದಲ್ಲಿ ಗುತ್ತಿಗೆದಾರ ಕೆಲಸ ಮಾಡುತ್ತಿದ್ದಾನೆ. ಕಳಪೆ ಹಾಗೂ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಲಾಗುತ್ತಿದೆ. ಕೇಂದ್ರದ ಭೂಸಾರಿಗೆ ಸಚಿವರಿಗೆ ಎಲ್ಲಾ ಮಾಹಿತಿ ಕೊಡುತ್ತೇನೆ. ಗಡ್ಕರಿ ಅವರ ಪಾತ್ರವೂ ಇಲ್ಲಿ ಹೆಚ್ಚಿದೆ. ವೈಜ್ಞಾನಿಕವಾಗಿ ಕಾಮಗಾರಿ ಮಾಡಲು ಗಡ್ಕರಿ ಅವರ ಜೊತೆ ಚರ್ಚೆ ಮಾಡುತ್ತೇನೆ. ಸ್ಥಳಕ್ಕೆ ಒಮ್ಮೆ ಭೇಟಿ ನೀಡಲು ಮನವಿ ಮಾಡುತ್ತೇನೆ. ರಾಜ್ಯ ಸರ್ಕಾರದ ಮಂತ್ರಿಗಳು ಭೇಟಿ ನೀಡಿ ಜನಗಳಿಗೆ ಮಾನಸಿಕವಾಗಿ ಧೈರ್ಯ ತುಂಬಬೇಕು. ಆದ್ದರಿಂದ ನಾನು ನಿನ್ನೆಯಿಂದ ಭೇಟಿ ನೀಡುತ್ತಿದ್ದೇನೆ ಎಂದರು.
ಕೇಂದ್ರ ಸಚಿವರಿಗೆ ಶಾಸಕರುಗಳಾದ ಸಿಮೆಂಟ್ ಮಂಜು, ಹೆಚ್.ಪಿ.ಸ್ವರೂಪ್ಪ್ರಕಾಶ್, ಸಿ.ಎನ್.ಬಾಲಕೃಷ್ಣ, ಹೆಚ್.ಕೆ.ಸುರೇಶ್ ಸಾಥ್ ನೀಡಿದ್ದಾರೆ. ಡಿಸಿ ಸತ್ಯಭಾಮ, ಎಸ್ಪಿ ಮಹಮದ್ ಸುಜೇತಾ, ಎಸಿ ಶೃತಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಾಥ್ ನೀಡಿದರು.