ಬೆಂಗಳೂರು: 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು ಮತ್ತು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್, ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳನ್ನು ಹಲವು ವರ್ಷಗಳಿಂದ ಭರ್ತಿ ಮಾಡುವ ಕಾರ್ಯ ಆಗಿರಲಿಲ್ಲ. ಈ ಮಧ್ಯೆ ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಗೆ ನೇಮಕಾತಿ ವಿಳಂಬವಾಗಿತ್ತು. ಈ ಬಾರಿ 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಗರಿಷ್ಠ ಮೂರು ವರ್ಷ ವಯೋಮಿತಿ ಸಡಿಲಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ಆಕಾಂಕ್ಷಿಗಳಾಗಿರುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಬದಲಾಗಿ 38 ವರ್ಷದವರೆಗೆ, ಒಬಿಸಿ ವರ್ಗದವರಿಗೆ 38 ವರ್ಷ ಬದಲಿಗೆ 41 ವರ್ಷದವರೆಗೆ, ಎಸ್ಸಿ / ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷದ ಬದಲಿಗೆ 43 ವರ್ಷದ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಆದರೆ ಈ ನಿಯಮವು ಈ ಬಾರಿಗೆ ಮಾತ್ರ ಅನ್ವಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಸಂಪುಟ ಸಭೆಯ ಇತರ ತೀರ್ಮಾನಗಳು
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೊಯೇಲ್ ಅವರು ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಶಾಲಿನಿ ರಜನೀಶ್ ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲು ತೀರ್ಮಾನ
ಮಂಡ್ಯ ಕೆಆರ್ ಎಸ್ ಬೃಂದಾವನ ಉದ್ಯಾನವನವನ್ನು ಪಿಪಿಪಿಯಡಿ 2,663 ಕೋಟಿ ಮೊತ್ತದಲ್ಲಿ ಮೇಲ್ದರ್ಜೆಗೆ ಏರಿಸಲು ಆಡಳಿತಾತ್ಮಕ ಅನುಮೋದನೆ. ಟೆಂಡರ್ ಮೂಲಕ ಪಿಪಿಪಿ ಮಾದರಿಯಲ್ಲಿ ಕಾಮಗಾರಿ ಅನುಷ್ಠಾನ ಮಾಡಲು ಅನುಮೋದನೆ.
KIADB ಧಾರವಾಡದ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿನ 2.64 ಎಕರೆ ಸಿ.ಎ.ನಿವೇಶನವನ್ನು ಮೆ. ಲೋಕ ಶಿಕ್ಷಣ ಟ್ರಸ್ಟ್ ರವರಿಗೆ ಹಂಚಿಕೆ ಮಾಡಲು ಅನುಮೋದನೆ. ಹಂಚಿಕೆ ಜೊತೆಗೆ ನಿವೇಶನದ ಮೊತ್ತಕ್ಕೆ ಶೇ. 75 ರಷ್ಟು ರಿಯಾಯಿತಿ ನೀಡಲು ಸಂಪುಟ ಸಭೆ ಒಪ್ಪಿಗೆ.
ಅನಿಮೇಶನ್ ವಿಶ್ಯುವಲ್ ಎಫೆಕ್ಟ್ ಗೇಮಿಂಗ್ ಮತ್ತು ಕಾಮಿಕ್ಸ್ (AVGC) 2.0. - "ಉತ್ಕೃಷ್ಟತಾ ಕೇಂದ್ರವನ್ನು" 16 ಕೋಟಿ ರೂ. ಅಂದಾಜು ಮೊತ್ತದಲ್ಲಿ (CAPEX-ರೂ. 7 ಲಕ್ಷ ಕೋಟಿ ಮತ್ತು OPEX-ರೂ. 9 ಕೋಟಿ) ಅನುದಾನ ನೀಡಲು ಅನುಮೋದನೆ.
ಲೋಕೋಪಯೋಗಿ ಇಲಾಖೆಯಿಂದ ರಾಜ್ಯದ 15 ತಾಲ್ಲೂಕುಗಳಲ್ಲಿ ತಲಾ ಒಂದು ಹಾಸ್ಟೆಲ್ಗಳ ಕಟ್ಟಡಗಳನ್ನು ಒಟ್ಟು ರೂ. 105 ಕೋಟಿಗಳ ಅಂದಾಜು ಮೊತ್ತದಲ್ಲಿ (ಪ್ರತಿ ಹಾಸ್ಟೆಲ್ - ರೂ. 7 ಕೋಟಿಗಳು) ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ.
ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ನೇಮಕಾತಿಗೆ ಸಂಬಂಧಿಸಿದಂತೆ "ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು 2024”ಕ್ಕೆ ಅನುಮೋದನೆ.
ಪಿಯು ಉಪನ್ಯಾಸಕರ ಹುದ್ದೆಗೆ ಶಾಲೆ ಉಪನ್ಯಾಸಕರಿಗೆ ಬಡ್ತಿ ಪಡೆಯಲು 55% ಅಂಕ ಪಡೆಯಬೇಕಾಗಿತ್ತು. ಅದನ್ನು ಪರಿಷ್ಕರಿಸಿ 50% ಕಡಿತಕ್ಕೆ ತೀರ್ಮಾನ.