ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಅವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸಲಾಗುವುದು ಇಲ್ಲವೆ ಗಡಿಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬಾಂಗ್ಲಾದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ರಾಜ್ಯ ಮತ್ತು ರಾಷ್ಟ್ರ ಎರಡಕ್ಕೂ ಅಪಾಯ ತಂದೊಡ್ಡಿದೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನಂತರ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶದಿಂದ ಕರ್ನಾಟಕಕ್ಕೆ ಬರುವವರನ್ನು ಪೊಲೀಸರು ಗುರುತಿಸಲಿದ್ದಾರೆ. ಅವರು ಪಾಸ್ಪೋರ್ಟ್, ವೀಸಾದಂತಹ ಮಾನ್ಯ ದಾಖಲೆಗಳನ್ನು ಹೊಂದಿಲ್ಲದಿದ್ದರೆ ಅವರನ್ನು ತಕ್ಷಣ ಬಂಧಿಸಿ ಬಂಧನ ಕೇಂದ್ರಗಳಿಗೆ ಕಳುಹಿಸಲಾಗುತ್ತದೆ. ಅದರ ನಂತರ, ನಾವು ಅವರ ಪ್ರಜೆಗಳ ಬಂಧನದ ಬಗ್ಗೆ ಬಾಂಗ್ಲಾದೇಶ ಹೈಕಮಿಷನ್ ಅಥವಾ ರಾಯಭಾರಿಗೆ ತಿಳಿಸುತ್ತೇವೆ. ನಂತರ ಅವರನ್ನು ಗಡೀಪಾರು ಮಾಡಲು ಅನುಮತಿ ಪಡೆಯುತ್ತೇವೆ ಪರಮೇಶ್ವರ ತಿಳಿಸಿದ್ದಾರೆ.
ಬಾಂಗ್ಲಾದೇಶಿ ಪ್ರಜೆಗಳು ರಾಜಕೀಯ ಬೆಂಬಲವನ್ನು ಹೊಂದಿರುವುದರಿಂದ ಅವರನ್ನು ಗಡೀಪಾರು ಮಾಡಲು ಸಾಧ್ಯವಾಗಿಲ್ಲ ಎಂಬ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಬಿಜೆಪಿ ನಾಯಕ ಬಿ. ಭಾಸ್ಕರ್ ರಾವ್ ಹೇಳಿಕೆಗೆ ಸಚಿವರು ಆಕ್ರೋಶ ವ್ಯಕ್ತಪಡಿಸಿದರು. ಆಯುಕ್ತರಾಗಿದ್ದ ಅವಧಿಯಲ್ಲಿ ಅವರಿಂದ ಸಾಧ್ಯವಾಗಿರದಿದ್ದ ಕಾರ್ಯವನ್ನು ಈಗ ನಾವು ಮಾಡುತ್ತಿದ್ದೇವೆ ಎಂದು ಪರಮೇಶ್ವರ ಹೇಳಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಬಿಗಿಗೊಳಿಸುತ್ತಿದ್ದೇವೆ. ಯಾರೇ ಆಗಲಿ ಕಾನೂನು ವಿರುದ್ಧ ನಡೆಯಲು ಬಿಡುವುದಿಲ್ಲ. ರಾಜ್ಯದಲ್ಲಿ ಅಕ್ರಮವಾಗಿ ತಂಗಿರುವ ಬಾಂಗ್ಲಾದೇಶಿ ಪ್ರಜೆಗಳ ಮೇಲೆ ಪೊಲೀಸರು ಕ್ರಮಕೈಗೊಳ್ಳುವುದು ನಿತ್ಯವೂ ನಡೆಯುತ್ತಿದೆ ಎಂದು ಪರಮೇಶ್ವರ ಹೇಳಿದರು.