ಬೆಂಗಳೂರು: ನಮ್ಮ ಮೆಟ್ರೋ ಆಗಸ್ಟ್ 6 ರಿಂದ ನಾಗಸಂದ್ರದಿಂದ ಮಾದಾವರವರೆಗಿನ ಗ್ರೀನ್ ಲೈನ್ ವಿಸ್ತರಿತ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ಆರಂಭಿಸಲಿದೆ ಎಂದು ಬಿಎಂಆರ್ಸಿಎಲ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೆಪ್ಟೆಂಬರ್ ಅಂತ್ಯದ ವೇಳೆಗೆ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಈ ಮಾರ್ಗವನ್ನು ಮೆಟ್ರೋ ವಾಣಿಜ್ಯ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
298-ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ 3.7-ಕಿಮೀ ಉದ್ದದ ಈ ಮಾರ್ಗವು ಮಂಜುನಾಥ ನಗರ, ಚಿಕ್ಕಬಿದರಕಲ್ಲು(ಹಿಂದಿನ ಜಿಂದಾಲ್ ನಗರ) ಮತ್ತು ಮಾದಾವರ(ಬಿಐಇಸಿ) ನಿಲ್ದಾಣಗಳನ್ನು ಒಳಗೊಂಡಿದೆ.
ನಾವು ಈಗಾಗಲೇ ಸಂಪೂರ್ಣ ಸ್ವಚ್ಛತಾ ಕಾರ್ಯವನ್ನು ಕೈಗೆತ್ತಿಕೊಂಡಿದ್ದೇವೆ. ವಿವಿಧ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಒಂದು ತಿಂಗಳ ಕಾಲ ಪ್ರಾಯೋಗಿಕ ಸಂಚಾರ ನಡೆಯಲಿದೆ. ನಾವು ಸೆಪ್ಟೆಂಬರ್ ಎರಡನೇ ವಾರದೊಳಗೆ ಮೆಟ್ರೋ ರೈಲು ಸುರಕ್ಷತಾ ಆಯುಕ್ತರನ್ನು ತಪಾಸಣೆಗೆ ಆಹ್ವಾನಿಸಲು ಯೋಜಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.
ಇದು ವಿಸ್ತರಣಾ ಮಾರ್ಗವಾಗಿರುವುದರಿಂದ ಮತ್ತು ಗ್ರೀನ್ ಲೈನ್ನಲ್ಲಿ ಚಲಿಸುವ ರೈಲುಗಳನ್ನು ಪ್ರಾಯೋಗಿಕ ಸಂಚಾರಕ್ಕೆ ಬಳಸಲಾಗುವುದು. ನೆಲಮಂಗಲ, ಮಾಕಳಿ ಮತ್ತು ಮಾದನಾಯಕನಹಳ್ಳಿ ನಿವಾಸಿಗಳು ಮತ್ತು ತುಮಕೂರಿನಿಂದ ಬೆಂಗಳೂರಿಗೆ ಬರುವವರು ಮಾದಾವರದಲ್ಲಿ ಮೆಟ್ರೋ ಸೇವೆಯನ್ನು ಪಡೆಯಬಹುದು. ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರಕ್ಕೆ ಭೇಟಿ ನೀಡುವವರಿಗೂ ಈ ಲೈನ್ ನೆರವಾಗಲಿದೆ.
ಈ ಮಾರ್ಗದ ಕಾಮಗಾರಿ ಪೂರ್ಣಗೊಳಿಸಲು ಆಗಸ್ಟ್ 2019ಕ್ಕೆ ಗಡುವು ನೀಡಲಾಗಿತ್ತು. ಆದರೆ ಮಾದಾವರದ ನಿಲ್ದಾಣದ ಕಾಮಗಾರಿ ಪೂರ್ಣಗೊಳ್ಳಲು ವಿಳಂಬ ಸೇರಿದಂತೆ ನಾನಾ ಕಾರಣಗಳಿಂದ ಹಲವು ಬಾರಿ ಡೆಡ್ ಲೈನ್ ವಿಸ್ತರಣೆ ಮಾಡಬೇಕಾಯಿತು ಎಂದು ಮಹೇಶ್ವರ್ ರಾವ್ ತಿಳಿಸಿದ್ದಾರೆ.