ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ 
ರಾಜ್ಯ

ಕುಶಾಲನಗರದಲ್ಲಿ 7.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಕೆಎಸ್‌ಆರ್‌ಟಿಸಿ ಬಸ್ ಡಿಪೋ ನಿರ್ಮಾಣ

Nagaraja AB

ಮಡಿಕೇರಿ: ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕುಶಾಲನಗರದ ನೂತನ ಕೆಎಸ್‌ಆರ್‌ಟಿಸಿ ಬಸ್‌ ಘಟಕದ ನಿರ್ಮಾಣ ಕಾರ್ಯ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಕುಶಾಲನಗರ-ಮಡಿಕೇರಿ ರಸ್ತೆಯ ಬಸವನಹಳ್ಳಿ ಬಳಿ ನಿರ್ಮಿಸುತ್ತಿರುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದು, 7.5 ಕೋಟಿ ರೂ.ವೆಚ್ಚದಲ್ಲಿ ಸುಸಜ್ಜಿತ ಡಿಪೋ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಬಸವನಹಳ್ಳಿ ಬಳಿಯ 4 ಎಕರೆ ಭೂ ಸ್ವಾಧೀನ ಪ್ರಕ್ರಿಯೆ ಮುಂದುವರೆದಿದ್ದು, ಕುಶಾಲನಗರದಿಂದ ಮೈಸೂರಿಗೆ ಸಂಪರ್ಕಿಸುವ ನಾಲ್ಕು ಪಥದ ಹೆದ್ದಾರಿಗೆ ನೇರವಾಗಿ ಡಿಪೋ ಸಂಪರ್ಕ ಕಲ್ಪಿಸಲು ಯೋಜಿಸಲಾಗುತ್ತಿದೆ ಎಂದು ಮೂಲಗಳು ಖಚಿತಪಡಿಸಿವೆ. ಅರಣ್ಯ ಇಲಾಖೆಯಿಂದ ಅನುಮತಿ ಪಡೆದು ನಾಲ್ಕು ಎಕರೆ ಜಮೀನಿನಲ್ಲಿದ್ದ ಮರಗಳನ್ನು ತೆರವುಗೊಳಿಸಲಾಗಿದೆ. ಈ ಡಿಪೋ ರಾಷ್ಟ್ರೀಯ ಹೆದ್ದಾರಿ 275 ರಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿದೆ.

ಸುತ್ತಲಿನ ಆವರಣಗೋಡೆ ನಿರ್ಮಾಣಕ್ಕೆ ಬೇಕಾಗುವ ಸಾಮಗ್ರಿಗಳು ಹಾಗೂ ಕಟ್ಟಡದ ತಳಪಾಯಕ್ಕೆ ಬೇಕಾದ ಕಬ್ಬಿಣದ ಸರಳುಗಳು ಹಾಗೂ ಇತರೆ ಸಾಮಗ್ರಿಗಳು ಈಗಾಗಲೇ ಬಂದಿದ್ದು, ಇಡೀ ಪ್ರದೇಶವನ್ನು ಸಮತಟ್ಟುಗೊಳಿಸಲಾಗುತ್ತಿದೆ. ತ್ವರಿತಗತಿಯಲ್ಲಿ ಕಾಮಗಾರಿ ಮುಂದುವರೆಯಲಿದೆ. ಮೈಸೂರು ಮೂಲದ ಗುತ್ತಿಗೆದಾರರೊಬ್ಬರು ಟೆಂಡರ್ ಪಡೆದಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ ಖಚಿತಪಡಿಸಿದರು.

ವಿದ್ಯುತ್ ಚಾಲಿತ ಬಸ್‌ಗಳಿಗೆ ಇ-ಚಾರ್ಜಿಂಗ್ ಪಾಯಿಂಟ್‌ಗಳು ಸೇರಿದಂತೆ ಆಧುನಿಕ ಸೌಲಭ್ಯಗಳೊಂದಿಗೆ ಡಿಪೋ ಸುಸಜ್ಜಿತವಾಗಿದೆ ಎಂದು ಅವರು ವಿವರಿಸಿದರು. ಮುಂಬರುವ ನಾಲ್ಕು ಪಥದ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿಗೆ ಡಿಪೋ ಉತ್ತಮ ಸಂಪರ್ಕವನ್ನು ಹೊಂದಿದೆ ಎಂದು ಮೂಲಗಳು ಖಚಿತಪಡಿಸಿವೆ.

SCROLL FOR NEXT