ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ನಂತರದ ದೃಶ್ಯ
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ನಂತರದ ದೃಶ್ಯ  
ರಾಜ್ಯ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಇಂದು ಉನ್ನತ ಅಧಿಕಾರಿಗಳೊಂದಿಗೆ ಸಿಎಂ ಸಭೆ, ತೀವ್ರಗೊಂಡ ತನಿಖೆ

Sumana Upadhyaya

ಬೆಂಗಳೂರು: ಐಟಿ ಸಿಟಿ, ಉದ್ಯಾನನಗರಿ ಬೆಂಗಳೂರಿನ ಖ್ಯಾತ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆಯಾಗಿದೆ. ತಲೆ ಮೇಲೆ ಹ್ಯಾಟ್​​​​ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯಿಂದ ಬಾಂಬ್​​​ ಇಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಆರೋಪಿ ಹಾಕಿರುವ ಬಿಳಿ ಬಣ್ಣದ ಹ್ಯಾಟ್​​ ಮೇಲೆ ನಂಬರ್ 10 ಎಂದು ನಮೂದಿಸಲಾಗಿದೆ. ಸದ್ಯ ಆರೋಪಿಗಾಗಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ನಾಲ್ವರು ವಶಕ್ಕೆ: ನಿನ್ನೆ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 10 ಜನರು ಗಾಯಗೊಂಡಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಬಗ್ಗೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.

"ನಮಗೆ ಸಿಗುತ್ತಿರುವ ಸುಳಿವಿನ ಆಧಾರದ ಮೇಲೆ ನಾವು ಶೀಘ್ರವೇ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಬಹುದೆಂಬ ನಿರೀಕ್ಷೆಯಲ್ಲಿದ್ದೇವೆ " ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ಗುಪ್ತಚರ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ತೀವ್ರಗೊಂಡ ವಿಚಾರಣೆ: ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಸದ್ಯ ಈಗ ಎನ್ ಎಸ್ ಜಿ, ಬಾಂಬ್ ನಿಷ್ಕ್ರಿಯ ದಳ ಮತ್ತು ಸ್ಥಳೀಯ ಪೊಲೀಸರ ತಂಡ ತನಿಖೆ ನಡೆಸುತ್ತಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಭರದಿಂದ ಸಾಗಿದೆ. ಇಲ್ಲಿಯವರೆಗೆ ಪಡೆದ ವಿಭಿನ್ನ ಮಾಹಿತಿಗಳ ಆಧಾರದ ಹಲವಾರು ತಂಡಗಳು ಕಾರ್ಯನಿರ್ವಹಿಸುತ್ತಿವೆ. ಪ್ರಕರಣದ ಸೂಕ್ಷ್ಮತೆ ಮತ್ತು ಭದ್ರತಾ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಮಾಧ್ಯಮಗಳು ಊಹಾಪೋಹಗಳಿಗೆ ಒಳಗಾಗದಂತೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ಇಂದು ಸಿದ್ದರಾಮಯ್ಯ ಸಭೆ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪೊಲೀಸ್​ ಮಹಾ ನಿರ್ದೇಶಕ ಅಲೋಕ್​ ಮೋಹನ್​, ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಹಲವರು ಭಾಗಿಯಾಗಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಮಾಜಿ ರಾಷ್ಟ್ರಪತಿ ದಿವಂಗತ ಡಾ ಎ ಪಿ ಜೆ ಅಬ್ದುಲ್​ ಕಲಾಂ ಅವರ ಸ್ಪೂರ್ತಿಯಿಂದ ತೆರೆದಂತಹ ರಾಮೇಶ್ವರಂ ಕೆಫೆ, ಭಾರತದಾದ್ಯಂತ ತನ್ನ ಶಾಖೆಗಳನ್ನು ಹೊಂದಿದೆ. ರಾಮೇಶ್ವರಂ ಕೆಫೆ ದೇಗುಲದ ಮಾದರಿಯಲ್ಲಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲೂ ಹಲವು ಶಾಖೆಗಳನ್ನು ಹೊಂದಿದ್ದು, ಜನ ಸಾಮಾನ್ಯರ ಜೊತೆಗೆ ಐಟಿ ಸಿಬ್ಬಂದಿಯ ಅಚ್ಚುಮೆಚ್ಚಿನ ಊಟದ ತಾಣವಾಗಿದೆ. ಇಂತಹ ಕೆಫೆಯಲ್ಲಿ ನಿನ್ನೆ ಮಧ್ಯಾಹ್ನ ಊಟದ ಸಮಯಕ್ಕೆ ಸರಿಯಾಗಿ ಬಾಂಬ್ ಬ್ಲಾಸ್ಟ್ ಆಗಿದೆ. ವಿವಿಧ ತನಿಖಾ ತಂಡಗಳು ರಾತ್ರಿಯೆಲ್ಲಾ ತನಿಖೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

SCROLL FOR NEXT