ತಮಿಳು ನಾಡು ಮಾಜಿ ಸಿಎಂ ಜಯಲಲಿತಾ(ಸಂಗ್ರಹ ಚಿತ್ರ)
ತಮಿಳು ನಾಡು ಮಾಜಿ ಸಿಎಂ ಜಯಲಲಿತಾ(ಸಂಗ್ರಹ ಚಿತ್ರ) 
ರಾಜ್ಯ

ಜಯಲಲಿತಾ ಚಿನ್ನಾಭರಣಗಳ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

Manjula VN

ಬೆಂಗಳೂರು: ನಗರದ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರು ಅಕ್ರಮವಾಗಿ ಗಳಿಸಿದ್ದ ಜಿನ್ನಾಭರಣ ಮತ್ತು ಮತ್ತು ಇತರ ಪರಿಕರಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ.

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರಿಂದ ವಶಪಡಿಸಿಕೊಳ್ಳಲಾದ ನೂರಾರು ಕೋಟಿ ಮೌಲ್ಯದ ಚಿನ್ನಾಭರಣ ಸೇರಿ ಇತರೆ ವಸ್ತುಗಳನ್ನು ಕಾನೂನಾತ್ಮಕ ವಾರಸುದಾರರಾದ ತಮಗೆ ಬಿಡುಗಡೆ ಮಾಡಬೇಕು ಎಂದು ಜಯಲಲಿತಾ ಅವರ ಸಹೋದರನ ಮಕ್ಕಳು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯವು 2023ರ ಜುಲೈ 12ರಂದು ವಜಾ ಮಾಡಿತ್ತು.

ಇದನ್ನು ಪ್ರಶ್ನಿಸಿ ಅರ್ಜಿದಾರರಲ್ಲಿ ಒಬ್ಬರಾದ ಜೆ ದೀಪಾ ಎಂಬುವರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಮಾರ್ಚ್‌ 26ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಜಯಲಲಿತಾ ವಿರುದ್ದದ ಭ್ರಷ್ಟಾಚಾರ ಆರೋಪ ಸಂಬಂಧ ಸುಪ್ರೀಂ ಕೋರ್ಟ್‌ನಿಂದ ತೀರ್ಪು ಬರುವ ಮುನ್ನವೇ ಅವರು ಮೃತರಾಗಿದ್ದರು. ಅರ್ಜಿದಾರರು ಜಯಲಲಿತಾ ಅವರ ಕಾನೂನುಬದ್ಧ ವಾರಸುದರಾಗಿದ್ದು, ಅವರ ಎಲ್ಲ ಚಿನ್ನಾಭರಣಗಳನ್ನು ಅರ್ಜಿದಾರರಿಗೆ ಹಸ್ತಾಂತರ ಮಾಡಬೇಕು ಎಂದು ಕೋರಿದರು.

ಈ ವಾದ ದಾಖಲಿಸಿಕೊಂಡ ಪೀಠವು ವಿಶೇಷ ಸಿಬಿಐ ನ್ಯಾಯಾಲಯದಿಂದ ತಮಿಳುನಾಡು ಸರ್ಕಾರಕ್ಕೆ ನಾಳೆಯಿಂದ ನಡೆಯಬೇಕಿದ್ದ ಚಿನ್ನಾಭರಣಗಳ ಹಸ್ತಾಂತರ ಪ್ರಕ್ರಿಯೆಗೆ ತಡೆ ನೀಡಿ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.

SCROLL FOR NEXT