ಮಡಿಕೇರಿ: ಕೊಡಗನ್ನು ಸ್ವಿಟ್ಜರ್ಲೆಂಡ್ನಂತೆ, ಮೈಸೂರನ್ನು ಪ್ಯಾರಿಸ್ನಂತೆ ಮಾಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದರು. ಆದರೆ ಎರಡೂ ಕಡೆ ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಮಂಗಳವಾರ ಆರೋಪಿಸಿದ್ದಾರೆ.
ಇಂದು ಜಿಲ್ಲೆಯ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ ನಂತರ ಕೊಡಗಿನಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ, ಈ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಜಯಭೇರಿ ಬಾರಿಸಲಿದ್ದು, ಕೇಂದ್ರದಿಂದ ಕ್ಷೇತ್ರಕ್ಕೆ ಅಭಿವೃದ್ಧಿ ಯೋಜನೆಗಳನ್ನು ತರಲಾಗುವುದು ಎಂದು ಭರವಸೆ ನೀಡಿದರು.
ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ಷ್ಮಣ್, ಕ್ಷೇತ್ರದ ಅಭ್ಯರ್ಥಿಯಾಗಿರುವ ತಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದು, ಜವಾಬ್ದಾರಿಯಿಂದ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ನನ್ನ ಗೆಲುವಿಗೆ ಕಾರ್ಯಕರ್ತರು ಮತ್ತು ಮುಖಂಡರು ಬೆಂಬಲ ನೀಡುತ್ತಾರೆ. ಸಿಎಂ ಹಾಗೂ ಡಿಸಿಎಂ ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತಾರೆ. ರಾಜ್ಯ ಸರ್ಕಾರದ ಸಹಕಾರದೊಂದಿಗೆ ಕ್ಷೇತ್ರ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸಲು ಒತ್ತು ನೀಡಲಾಗುವುದು. ಮೈಸೂರಿನಲ್ಲಿರುವ ಐಟಿ ಕಂಪನಿಗಳು ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಖಾತ್ರಿಪಡಿಸುವ ಅವಶ್ಯಕತೆಯಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಕಿದ್ದ ಬ್ಯಾನರ್ನಲ್ಲಿ ಅಭ್ಯರ್ಥಿಯ ಹೆಸರನ್ನು ಲಕ್ಷ್ಮಣಗೌಡ ಎಂದು ನಮೂದಿಸಿದ್ದು, 47 ವರ್ಷಗಳ ನಂತರ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಒಕ್ಕಲಿಗ ಅಭ್ಯರ್ಥಿಗೆ ಟಿಕೆಟ್ ನೀಡಿದೆ. ಬಿಜೆಪಿ ಒಕ್ಕಲಿಗರನ್ನು ಕಡೆಗಣಿಸುತ್ತಿದೆ ಮತ್ತು ಹಲವಾರು ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನಿರಾಕರಿಸಿದೆ ಎಂದು ಆರೋಪಿಸಿದರು.