ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಜೊತೆಗೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ವಿರುದ್ಧ ವಿಶೇಷ ತನಿಖಾ ತಂಡ (ಎಸ್ಐಟಿ) ಲುಕ್ಔಟ್ ನೋಟಿಸ್ ಜಾರಿ ಮಾಡಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶನಿವಾರ ಹೇಳಿದ್ದಾರೆ. ರೇವಣ್ಣ ವಿರುದ್ಧ ಎರಡು ಎಫ್ಐಆರ್ಗಳು ದಾಖಲಾಗಿವೆ.
ಎರಡನೇ ಬಾರಿ ಸಮನ್ಸ್ ಪಡೆದಿರುವ ಮಾಜಿ ಸಚಿವ ರೇವಣ್ಣ, ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ಇಂದು ಸಂಜೆಯವರೆಗೂ ಸಮಯಾವಕಾಶವಿದೆ. ಅವರ ವಿರುದ್ಧ ಈಗಾಗಲೇ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಅವರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇವಣ್ಣ ಮತ್ತು ಪ್ರಜ್ವಲ್ ಇಬ್ಬರ ವಿರುದ್ಧವೂ ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ. ರೇವಣ್ಣ ಕೂಡ ವಿದೇಶಕ್ಕೆ ಹೋಗಲು ಮುಂದಾಗಬಹುದು ಎಂಬ ನಿರೀಕ್ಷೆಯಲ್ಲಿ ಈ ನೋಟಿಸ್ ನೀಡಲಾಗಿದೆ ಎಂದರು.
ಈ ನಡುವೆ ಅಪಹರಣ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಬಂಧನ ಆಗಲಿದೆ. ಲುಕ್ಔಟ್ ನೋಟಿಸ್ಗಳನ್ನು ನೀಡಲಾಗಿದೆ. ಇತರ ಹಲವಾರು ಬೆಳವಣಿಗೆಗಳು ನಡೆಯುತ್ತವೆ, ಅನೇಕ ವಿಷಯಗಳು ಸಾರ್ವಜನಿಕರ ಗಮನಕ್ಕೆ ಬರದೇ ಇರಬಹುದು. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಕಳೆದ ಭಾನುವಾರ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ತಂದೆ ಮತ್ತು ಮಗನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.
ಮೈಸೂರಿನಲ್ಲಿ ಗುರುವಾರ ರಾತ್ರಿ ರೇವಣ್ಣ ಮತ್ತು ಅವರ ಆಪ್ತ ಸತೀಶ್ ಬಾಬಣ್ಣ ವಿರುದ್ಧ ಎರಡನೇ ಎಫ್ಐಆರ್ ದಾಖಲಾಗಿದ್ದು, ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಕಿಡ್ನಾಪ್ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಅವರನ್ನು ಬಂಧಿಸಲಾಗಿದೆ, ಆದರೆ ಮೊದಲನೇ ಆರೋಪಿ ರೇವಣ್ಣ ಅವರನ್ನು ಇನ್ನೂ ಬಂಧಿಸಿಲ್ಲ. ಅವರಿಗೆ ಅವಕಾಶ ನೀಡಲಾಗಿದ್ದು, ಸೆಕ್ಷನ್ 41ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ಸಿಆರ್ಪಿಸಿಯ 41ಎ ಅಡಿ ಅವರಿಗೆ ಎರಡನೇ ನೋಟಿಸ್ ನೀಡಲಾಗಿದೆ. ಅವರು ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಬೇಕಾಗಿದೆ. ಅವರಿಗೆ 24 ಗಂಟೆಗಳ ಕಾಲಾವಕಾಶವಿದೆ, ಅದು ಇಂದು ಕೊನೆಗೊಳ್ಳುತ್ತದೆ, ನಂತರ ಯಾವುದೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಪ್ರಜ್ವಲ್ ರೇವಣ್ಣ ವಿದೇಶದಿಂದ ವಾಪಸ್ ಬರಬೇಕಾಗುತ್ತದೆ. ಇವತ್ತಲ್ಲದಿದ್ದರೆ ನಾಳೆ ಅಥವಾ ಆ ನಂತರ ಬರಬೇಕಾಗುತ್ತದೆ. ಅದರ ನಂತರ, ಬಂಧನ ಮತ್ತಿತರ ಕೆಲಸಗಳನ್ನು ಮಾಡಲಾಗುವುದು ಎಂದು ಪರಮೇಶ್ವರ್ ಮಾಹಿತಿ ನೀಡಿದರು.