ಪ್ರಧಾನಿ ನರೇಂದ್ರ ಮೋದಿ-ಸಿಎಂ ಸಿದ್ದರಾಮಯ್ಯ(ಸಂಗ್ರಹ ಚಿತ್ರ) 
ರಾಜ್ಯ

ಗ್ಯಾರಂಟಿ ಯೋಜನೆ ಜಟಾಪಟಿ: ರಾಜಕೀಯ ಪುಡಾರಿ ರೀತಿ ಸುಳ್ಳು ಆರೋಪ ಮಾಡುತ್ತಿರುವುದು ವಿಷಾದನೀಯ; ಪ್ರಧಾನಿ ಮೋದಿ ವಿರುದ್ಧ ಸಿದ್ದು, ಖರ್ಗೆ ಕಿಡಿ

ಕರ್ನಾಟಕಕ್ಕೆ ನೀವು ಶಹಾಬಾಸ್ ಗಿರಿ ಕೊಡಬೇಕಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸುಳ್ಳಿನ ಬಾಣಗಳ ಮೂಲಕ ಕನ್ನಡಿಗರನ್ನು ಅವಮಾನಿಸುತ್ತಿದ್ದಾರೆ. ಇದು ಖಂಡನೀಯ, ಸಹಿಸಲು ಸಾಧ್ಯವಿಲ್ಲ.

ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಬಣ್ಣ ಬಯಲಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಲು ಆ ಪಕ್ಷ ಹೊರಟಿದೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಯಶಸ್ಸು ಮತ್ತು ಇದರಿಂದಾಗಿ ಏರುಗತಿಯಲ್ಲಿ ಸಾಗುತ್ತಿರುವ ರಾಜ್ಯದ ಆರ್ಥಿಕತೆಯನ್ನು ಕಂಡು ಬೆನ್ನುತಟ್ಟಿ ಪ್ರೊತ್ಸಾಹ ನೀಡಬೇಕಾಗಿದ್ದ ದೇಶದ ಪ್ರಧಾನಿ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕ ರಾಜ್ಯಕ್ಕೆ ಮತ್ತು ಕನ್ನಡಿಗರಿಗೆ ಅವಮಾನ ಮಾಡುತ್ತಿರುವುದು ವಿಷಾದನೀಯ ಬೆಳವಣಿಗೆ ಎಂದು ಹೇಳಿದ್ದಾರೆ.

ಕನ್ನಡ ರಾಜ್ಯೋತ್ಸವದ ದಿನ. “ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ…” ಎಂದು ಸಾರಿದ ರಾಷ್ಟ್ರಕವಿ ಕುವೆಂಪು ಅವರ ಕಾವ್ಯವನ್ನು ನಾಡಗೀತೆಯಾಗಿ ಸ್ವೀಕರಿಸಿರುವ ಕರ್ನಾಟಕ, ಭಾರತಕ್ಕೆ ತಾಯಿಯ ಸ್ಥಾನವನ್ನು ನೀಡಿದೆ. ಇದೇ ಪ್ರೀತಿ ಮತ್ತು ಬದ್ಧತೆಯಿಂದ ಪ್ರಾಮಾಣಿಕವಾಗಿ ತಮ್ಮ ಬೆವರಗಳಿಕೆಯನ್ನು ತೆರಿಗೆಯಾಗಿ ನೀಡಿ ದೇಶದ ಬೊಕ್ಕಸವನ್ನು ತುಂಬಿದವರು ಕನ್ನಡಿಗರು. ದೇಶದಲ್ಲಿ ಮಹಾರಾಷ್ಟ್ರದ ನಂತರ ಅತ್ಯಂತ ಹೆಚ್ಚು ನೇರ ತೆರಿಗೆ (11.9%) ಪಾವತಿಯಾಗಿರುವುದು ಕರ್ನಾಟಕ ರಾಜ್ಯದಲ್ಲಿ ಎನ್ನುವುದನ್ನು ಭಾರತೀಯ ಸ್ಟೇಟ್ ಬ್ಯಾಂಕ್ ವರದಿ ಒಪ್ಪಿಕೊಂಡಿರುವುದನ್ನು ನೀವು ಗಮನಿಸಿರಬಹುದೆಂದು ಭಾವಿಸಿದ್ದೇನೆ.

ಎಲ್ಲವನ್ನೂ ಪಕ್ಷ, ರಾಜಕೀಯದ ಹಳದಿ ಕನ್ನಡಕದಿಂದ ನೋಡುವ ಅಭ್ಯಾಸವನ್ನು ಬಿಟ್ಟು ಒಬ್ಬ ಮುತ್ಸದ್ದಿ ರಾಜಕಾರಣಿಯಾಗಿ ಕರ್ನಾಟಕದ ಅಭಿವೃದ್ದಿ ಮಾದರಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಬಡವರ ಕೈಗೆ ದುಡ್ಡು ಸಿಕ್ಕಿ ಅದು ಮಾರುಕಟ್ಟೆಗೆ ಹರಿದುಬಂದು ಅದರಿಂದ ತೆರಿಗೆ ಸಂಗ್ರಹವೂ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಬಲ ಬರಲಿದೆ ಎಂದು ಪ್ರಾರಂಭದಿಂದಲೂ ನಾನು ಹೇಳಿಕೊಂಡು ಬಂದಿದ್ದೇನೆ. ಅದು ಇಂದು ನಿಜವಾಗಿದೆ. ಇದಕ್ಕಾಗಿ ಕರ್ನಾಟಕಕ್ಕೆ ನೀವು ಶಹಾಬಾಸ್ ಗಿರಿ ಕೊಡಬೇಕಿತ್ತು, ಆದರೆ ನೀವು ಸುಳ್ಳಿನ ಬಾಣಗಳ ಮೂಲಕ ಕನ್ನಡಿಗರನ್ನು ಅವಮಾನಿಸುತ್ತಿದ್ದೀರಿ. ಇದು ಖಂಡನೀಯ, ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರದ ಕಡೆಗೆ ಬೆರಳು ಮಾಡುವ ಮುನ್ನ ಬಿಜೆಪಿ ಪಕ್ಷದ ವಿನಾಶಕಾರಿ ಇತಿಹಾಸದ ಮೇಲೊಮ್ಮೆ ಕಣ್ಣಾಯಿಸಿ. ನಾವು ಜನರಿಗೆ ನೀಡಿದ್ದ ಪ್ರತಿ ಭರವಸೆಯನ್ನು ಈಡೇರಿಸಿದ್ದೇವೆ - ನಮ್ಮ 5 ಗ್ಯಾರಂಟಿ ಯೋಜನೆಗಳನ್ನು ರೂ.52,000 ಕೋಟಿಗೂ ಅಧಿಕ ಅನುದಾನದಲ್ಲಿ ಅನುಷ್ಠಾನಕ್ಕೆ ಕೊಟ್ಟಿದ್ದೇವೆ, ಇದರ ಜೊತೆಗೆ ನಾಡಿನ ಭವಿಷ್ಯ ರೂಪಿಸಲು ರೂ.52,903 ಕೋಟಿ ಅನುದಾನ ಬಳಸಲಾಗುತ್ತಿದೆ. ರಾಜ್ಯದಲ್ಲಿ ಅಧಿಕಾರದಲ್ಲಿದ್ದ ನಿಮ್ಮ ಪಕ್ಷದ ಸಾಧನೆ ಏನು? ಏಳು ಕೋಟಿ ಕನ್ನಡಿಗರ ಅಭಿವೃದ್ದಿಗಾಗಿ ವ್ಯಯವಾಗಬೇಕಾಗಿದ್ದ ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು ಶೇ.40 ಕಮಿಷನ್ ರೂಪದಲ್ಲಿ ತಿಂದು ತೇಗಿದ್ದೇ? ಆದಾಯದ ಮೂಲಗಳನ್ನೆಲ್ಲ ಬರಿದು ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯ ಅಂಚಿಗೆ ತಳ‍್ಳಿದ್ದೇ? ಈ ರೀತಿ ಲೂಟಿ ಮಾಡಿದ್ದ ಹಣದಲ್ಲಿ ನಿಮಗೂ ಪಾಲು ಸಂದಾಯವಾಗಿದೆ ಎಂದು ನಿಮ್ಮ ಬಿಜೆಪಿ ಪಕ್ಷದ ನಾಯಕರೇ ಮಾಡಿರುವ ಆರೋಪ ನಿಮ್ಮ ಗಮನಕ್ಕೂ ಬಂದಿರಬಹುದಲ್ಲವೇ? ನಿಮ್ಮ ನಾಯಕರು ಲೂಟಿ ಮಾಡುತ್ತಿದ್ದ ಶೇ.40 ಕಮಿಷನ್ ಹಣವನ್ನು ನಾವು ನೇರವಾಗಿ ಜನರಿಗೆ ತಲುಪಿಸುತ್ತಿದ್ದೇವೆ.

ನಾವು ನುಡಿದಂತೆ ನಡೆದಿದ್ದೇವೆ, ನಿಮ್ಮ ಭರವಸೆಗಳೇನಾಯಿತು? ಪ್ರತಿಯೊಬ್ಬನ ಖಾತೆಗೆ ಹದಿನೈದು ಲಕ್ಷ ರೂಪಾಯಿ ಜಮೆ ಆಯಿತೇ? ಕಪ್ಪು ಹಣ ಮಾಯವಾಯಿತೇ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಯಾಯಿತೇ? ರೈತರ ಆದಾಯ ದುಪ್ಪಟ್ಟಾಯಿತೇ? ಎಲ್ಲಿದೆ ನಿಮ್ಮ ಸ್ಮಾರ್ಟ್ ಸಿಟಿ? ಎಲ್ಲಿದೆ ನಿಮ್ಮ ಮೇಕ್ ಇನ್ ಇಂಡಿಯಾ? ನಿಮ್ಮ ಸಾಧನೆಗಳಾದರೂ ಏನು? ನಾಡನ್ನು ಸಾಲದ ಕೂಪಕ್ಕೆ ತಳ್ಳಿದ್ದೆ? ಸುಳ್ಳು ಮತ್ತು ಅಪಪ್ರಚಾರದ ಮೂಲಕ ನಿಮ್ಮ ವೈಫಲ್ಯಗಳನ್ನು ಮುಚ್ಚಿಹಾಕಿದ್ದೇ?

ನಿಮ್ಮ ಅತ್ಯಂತ ಪ್ರಮುಖ ಸಾಧನೆ ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಿದ್ದು. ನಿಮ್ಮ ಆಡಳಿತದಲ್ಲಿ 2024-25ರ ಆರ್ಥಿಕ ವರ್ಷದ ಅಂತ್ಯಕ್ಕೆ ದೇಶದ ಸಾಲ ರೂ.185.27 ಲಕ್ಷ ಕೋಟಿಯ ಗಡಿ ಮುಟ್ಟಲಿದೆ ಎಂದು ಅಂದಾಜಿಸಲಾಗಿದೆ. ಇದು ಜಿಡಿಪಿ 56.8% ಆಗಲಿದೆ. ಇದು ನಿಮ್ಮ ದುರಾಡಳಿತ ಮಾತ್ರವಲ್ಲ, ನೀವು ಪ್ರತಿಯೊಬ್ಬ ಭಾರತೀಯನ ಮೇಲೆ ಹೊರಿಸುತ್ತಿರುವ ಸಾಲದ ಹೊರೆಯೂ ಹೌದು. ಆಗಾಗ ನೀವು ಸುಳ್ಳು ಸಂಗತಿಗಳನ್ನು ಪೋಣಿಸಿಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಬಂದಿದ್ದೀರಿ. ಈ “ ತೂ ತೂ ಮೈ ಮೈ..” ಚರ್ಚೆಗೆ ತಾರ್ಕಿಕವಾದ ಅಂತ್ಯ ಹಾಡಿ ಬಿಡೋಣ. ಕಳೆದ ಎರಡು ಲೋಕಸಭಾ ಚುನಾವಣೆಯ ಮುನ್ನ ನಿಮ್ಮ ಪಕ್ಷ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯನ್ನು ಇಟ್ಟುಕೊಂಡು ಒಂದು ಸಾರ್ವಜನಿಕ ಚರ್ಚೆಯನ್ನು ಹಮ್ಮಿಕೊಳ್ಳೋಣ. ಪ್ರಣಾಳಿಕೆಯಲ್ಲಿ ನೀವು ಕೊಟ್ಟಿರುವ ಭರವಸೆಗಳಲ್ಲಿ ಎಷ್ಟನ್ನು ನೀವು ಈಡೇರಿಸಿದ್ದೀರಿ? ಎನ್ನುವುದನ್ನು ಸಾರ್ವಜನಿಕವಾಗಿಯೇ ಚರ್ಚೆ ಮಾಡೋಣ. ದೇಶದ ಪ್ರಜ್ಞಾವಂತ ಜನರೇ ಯಾರದ್ದು ಎಷ್ಟು ಸತ್ಯ? ಎಷ್ಟು ಸುಳ್ಳು? ಎನ್ನುವುದನ್ನು ತೀರ್ಮಾನಿಸಲಿ ಎಂದು ಸವಾಲು ಹಾಕಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರು ಕೂಡ ಪ್ರಧಾನಿ ಮೋದಿಯವರ ವಿರುದ್ಧ ಕಿಡಿಕಾರಿದ್ದು, ಸುಳ್ಳು, ವಂಚನೆ, ನಕಲಿ, ಲೂಟಿ ಮತ್ತು ಪ್ರಚಾರ ನಿಮ್ಮ ಸರ್ಕಾರದ ಮೂಲಮಂತ್ರಗಳು ಎಂದು ಕಿಡಿಕಾರಿದ್ದಾರೆ.

ವರ್ಷಕ್ಕೆ‌ 2 ಕೋಟಿ‌ ಉದ್ಯೋಗ ಸೃಷ್ಟಿಯ ನಿಮ್ಮ ಭರವಸೆ ಏನಾಯ್ತು? ಭಾರತದ ನಿರುದ್ಯೋಗ ದರವು 45 ವರ್ಷಗಳ ಗರಿಷ್ಠ ಮಟ್ಟದಲ್ಲಿದೆ ಯಾಕೆ? ಜನರ‌ ಉಳಿತಾಯದ ಮಟ್ಟ ಕನಿಷ್ಟ ಮಟ್ಟಕ್ಕೆ ಏಕೆ ಕುಸಿದಿದೆ. ನಿಮ್ಮ ಅಚ್ಛೇ ದಿನದ ಭರವಸೆ ಏನಾಯ್ತು ಎಂದು ಪ್ರಶ್ನೆ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ನೀವು ಉದ್ಘಾಟಿಸಿದ್ದ ಶಿವಾಜಿ ಪ್ರತಿಮೆ ಕುಸಿದು ಬಿದ್ದಿದೆ. ದೆಹಲಿ ಏರ್​ಪೋರ್ಟ್​ನ ಮೇಲ್ಚಾವಣಿ ಹಾರಿಹೋಗಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಸೋರುತ್ತಿದೆ. ಅಟಲ್ ಸೇತು ಬಿರುಕು ಬಿಟ್ಟಿದೆ, ಗುಜರಾತ್​ನ ಮೊರ್ಬಿ ಸೇತುವೆ ಕುಸಿದಿದೆ. ಬಿಹಾರದಲ್ಲಿ ಹೊಸ ಸೇತುವೆಗಳು ಕುಸಿದು ಬೀಳುವುದು ಸಾಮಾನ್ಯವಾಗಿದೆ. ದೇಶದ ಹಲವೆಡೆ ಲೆಕ್ಕವಿಲ್ಲದಷ್ಟು ರೈಲು ಅಪಘಾತಗಳು ಸಂಭವಿಸಿವೆ, ಆದರೆ ಸಚಿವರು ರೀಲ್ಸ್ ಪ್ರಚಾರದಲ್ಲಿ‌ ತೊಡಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಉದ್ಯಮಿ ಅದಾನಿ ಹಗರಣ, ಸೆಬಿ ಹಗರಣ ಹಾಗೂ ಎಲೆಕ್ಟ್ರೋರಾಲ್ ಬಾಂಡ್ ಹಗರಣ ಇವೆಲ್ಲ ಏನು? ನೀರವ್, ಮಲ್ಯ, ಚೋಕ್ಸಿ‌ ದೇಶ ಬಿಟ್ಟು ಹೋಗಲು ಅವಕಾಶ ಮಾಡಿಕೊಟ್ಟಿದ್ಯಾರು? ನಿಮ್ಮ ಆಡಳಿತದಲ್ಲಿ ಎಸ್‌ಸಿಗಳ ವಿರುದ್ಧದ ಅಪರಾಧಗಳಲ್ಲಿ ಶೇ.46 ಹೆಚ್ಚಳವಾಗಿದೆ. ಎಸ್‌ಟಿಗಳ ವಿರುದ್ಧದ ಅಪರಾಧಗಳಲ್ಲಿ ಶೇ.48 ಹೆಚ್ಚಳವಾಗಿದೆ. ಎಸ್​ಸಿ/ಎಸ್​ಟಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳು ಹೆಚ್ಚಳವಾಗಿದೆ. 2014ಕ್ಕೆ ಹೋಲಿಸಿದರೆ 2022ರಲ್ಲಿ 1.7 ಪಟ್ಟು ಹೆಚ್ಚಾಗಿದೆ. ನರೇಂದ್ರ ಮೋದಿ‌‌ಯೇ ಗ್ಯಾರಂಟಿ ಎನ್ನುವುದು ಬಿಜೆಪಿಯ ಕ್ರೂರ ಜೋಕ್​ ಎಂದು ತೀವ್ರವಾಗಿ ಹರಿಹಾಯ್ದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT