ಮಡಿಕೇರಿ: ಶ್ರೀಮಂಗಲ ಹೋಬಳಿಯ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡಿದ್ದ ಹುಲಿ ಸೆರೆಗೆ ಕಳೆದ 3 ದಿನಗಳಿಂದ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ಹುಲಿಯು ಅರಣ್ಯ ಪ್ರದೇಶಕ್ಕೆ ಮರಳಿರುವ ಹೆಜ್ಜೆ ಗುರುತುಗಳನ್ನು ಅರಣ್ಯಾಧಿಕಾರಿಗಳು ಪತ್ತೆ ಹಚ್ಚಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಹುಲಿ ಜಾನುವಾರಗಳ ಮೇಲೆ ದಾಳಿ ನಡೆಸಿದ ಸ್ಥಳದಲ್ಲಿ ದೊರೆತಿರುವ ಹೆಜ್ಜೆ ಗುರುತು ಹಾಗೂ ಬೀರುಗ ಗ್ರಾಮದ ಪಾಚಿಬೇಲ್ ಮೂಲಕ ಬ್ರಹ್ಮಗಿರಿ ಅಭಯಾರಣ್ಯಕ್ಕೆ ಹುಲಿ ತೆರಳಿರುವ ಸ್ಥಳದಲ್ಲಿ ಪತ್ತೆಯಾಗಿರುವ ಹುಲಿ ಹೆಜ್ಜೆ ಪರಸ್ಪರ ಹೊಂದಾಣಿಕೆಯಾಗುತ್ತಿದೆ. ಇದನ್ನು ವೈಜ್ಞಾನಿಕವಾಗಿಯೂ ಅರಣ್ಯ ಇಲಾಖೆ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.
ಈ ಹಿನ್ನೆಲೆ ಸ್ಥಳದಲ್ಲಿರುವ ಸಾಕಾನೆ, ಕ್ಷಿಪ್ರ ಕಾರ್ಯಪಡೆ, ಕಾಡಾನೆ ಟಾಸ್ಕ್ ಪೋರ್ಸ್ನ್ನು ಕಾರ್ಯಾಚರಣೆಯಿಂದ ಹಿಂಪಡೆಯಾಗುವುದು, ಆದರೆ, ಶ್ರೀಮಂಗಲ ವನ್ಯಜೀವಿ ವಿಭಾಗದ ವಲಯರಣ್ಯಾಧಿಕಾರಿ ಅರವಿಂದ್ ಅವರ ನೇತೃತ್ವದಲ್ಲಿ ತಂಡವೊಂದು ಹುಲಿ ಚಲನವಲನದ ಮೇಲೆ ನಿಗಾ ಇಡುತ್ತದೆ ಕಾರ್ಯಾಚರಣೆ ಮೇಲುಸ್ತುವಾರಿ ವಹಿಸಿರುವ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರು ಹೇಳಿದ್ದಾರೆ.
ಕಳೆದ 2 ತಿಂಗಳಿನಿಂದ ಶ್ರೀಮಂಗಲ ಹೋಬಳಿ ವ್ಯಾಪ್ತಿಯಲ್ಲಿ ಹುಲಿಯೊಂದು ದಾಳಿ ಮಾಡಿ 16 ಹಸುಗಳನ್ನು ಕೊಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕಾನೂನು ಸಲಹೆಗಾರರು ಮತ್ತು ಶಾಸಕ ಎ.ಎಸ್.ಪೊನ್ನಣ್ಣ ಅವರು ಅರಣ್ಯ ಸಚಿವರು ಮತ್ತು ವನ್ಯಜೀವಿ ವಿಭಾಗದ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಅರವಳಿಕೆ ನೀಡಿ ಹುಲಿ ಸೆರೆ ಹಿಡಿಯಲು ಅನುಮತಿ ದೊರಕಿಸಿದ್ದರು. ಆದರೆ, ಮಂಗಳವಾರ ಸಂಜೆ ಅರಣ್ಯ ಪ್ರದೇಶದಲ್ಲಿ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ