ಬೀದರ್: ಬೀದರ್ ಜಿಲ್ಲೆಯ ಗುಣತೀರ್ಥವಾಡಿ ಗ್ರಾಮದಲ್ಲಿ 19 ವರ್ಷದ ಯುವತಿಯೊಬ್ಬರು ಮನೆಯಿಂದ ನಾಪತ್ತೆಯಾದ ಕೆಲವೇ ದಿನಗಳಲ್ಲಿ ಶವವಾಗಿ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಆಗಸ್ಟ್ 29 ರಂದು ನಡೆದ ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಯುವತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದು ನಂತರ ಆಕೆಯ ದೇಹವನ್ನು ಪೊದೆಗಳಲ್ಲಿ ಎಸೆದಿದ್ದಾರೆ. ದುಷ್ಕರ್ಮಿಗಳು ಹತ್ಯೆಗೂ ಮುನ್ನ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದಾಗ್ಯೂ, ತನಿಖಾಧಿಕಾರಿಗಳು ದೃಢೀಕರಣಕ್ಕಾಗಿ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದಾರೆ. ಸಂತ್ರಸ್ತೆ ಆಗಸ್ಟ್ 29 ರಿಂದ ನಾಪತ್ತೆಯಾಗಿದ್ದು, ಈ ಸಂಬಂಧ ಆಕೆಯ ಪೋಷಕರು ಎರಡು ದಿನಗಳ ನಂತರ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
"ನಾವು ಯುವತಿ ಕಾಣೆಯಾದ ಪ್ರಕರಣವನ್ನು ದಾಖಲಿಸಿದ್ದೇವೆ ಮತ್ತು ತನಿಖೆ ಪ್ರಾರಂಭಿಸಿದ್ದೇವೆ. ಸೆಪ್ಟೆಂಬರ್ ಒಂದರಂದು, ಆಕೆಯ ಶವ ಪತ್ತೆಯಾಗಿದೆ. ದೇಹದ ಮೇಲೆ ಹಲವು ಗಾಯಗಳಿವೆ. ಹೀಗಾಗಿ ನಾವು ಆರಂಭದಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದೇವೆ. ನಂತರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ನಾವು ತಾಂತ್ರಿಕ ಪುರಾವೆಗಳ ಆಧಾರದ ಮೇಲೆ ತನಿಖೆ ಪ್ರಾರಂಭಿಸಿದ್ದೇವೆ. ಯುವತಿ ನಾಪತ್ತೆಯಾದ ದಿನದಂದು ಆಕೆಯೊಂದಿಗೆ ಸಂಪರ್ಕದಲ್ಲಿದ್ದ ಮೂರು ಜನರನ್ನು ನಾವು ವಶಕ್ಕೆ ಪಡೆದು ವಿಚಾರಣೆ ನಡೆಸಿದೇವು. ಕೊಲೆಯ ಪ್ರಮುಖ ಆರೋಪಿ ಅದೇ ಗ್ರಾಮದವನಾಗಿದ್ದು, ಈ ಕೃತ್ಯಕ್ಕೆ ಸಹಕಾರ ನೀಡಿದ್ದ ಆತನ ಇನ್ನಿಬ್ಬರು ಸ್ನೇಹಿತರನ್ನು ಬಂಧಿಸಲಾಗಿದೆ. ಮೃತಳು ಪರಿಶಿಷ್ಟ ಪಂಗಡಕ್ಕೆ ಸೇರಿದ್ದರಿಂದ ಬಸವಕಲ್ಯಾಣ ನಗರ ಠಾಣೆಯಲ್ಲಿ ಎಸ್ಸಿ,ಎಸ್ಟಿ ಕಾಯ್ದೆ ಅನ್ವಯ ಹಾಗೂ ಅತ್ಯಾಚಾರ ಪ್ರಕರಣವೆಂದು ಪರಿಗಣಿಸಿ ದೂರು ದಾಖಲಾಗಿದ್ದು, ತನಿಖೆ ಮುಂದುವರೆದಿದೆ’ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.