ಅಭಿವೃದ್ಧಿ ಕಾಮಗಾರಿಗಳ ಪರಿಶೀಲಿಸುತ್ತಿರುವ ಸಿಎಂ. 
ರಾಜ್ಯ

3 ತಿಂಗಳ ಬಳಿಕ ಸಿಎಂ ಸಿಟಿ ರೌಂಡ್ಸ್: ರಸ್ತೆ ಗುಂಡಿಗಳ ತ್ವರಿತವಾಗಿ ಮುಚ್ಚುವಂತೆ ಅಧಿಕಾರಿಗಳಿಗೆ ಸೂಚನೆ

ರಸ್ತೆ ಅಗೆತದಿಂದ ಆಗುವ ರಸ್ತೆ ಗುಂಡಿಗಳನ್ನು ಆಯಾ ಸಂಸ್ಥೆಗಳೇ ಅಂದರೆ ಬೆಸ್ಕಾಂ, ಕೆ.ಪಿ.ಟಿ.ಸಿ.ಎಲ್, ಗೇಲ್‍ಗ್ಯಾಸ್ ರವರೇ ಮುಚ್ಚುವಂತೆ ಆದೇಶ ನೀಡಲಾಗಿದ್ದು, ರಸ್ತೆ ಗುಂಡಿಗಳಿಗೆ ಕಡಿವಾಣ ಹಾಕಲಾಗಿದೆ.

ಬೆಂಗಳೂರು: ಮೂರು ತಿಂಗಳ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ನಗರ ಪ್ರದಕ್ಷಿಣೆ ನಡೆಸಿದ್ದು, ಈ ವೇಶೆ ನಗರದ ರಸ್ತೆ ಗುಂಡಿಗಳ ನಿರ್ಮೂಲನೆ ಹಾಗೂ ರಸ್ತೆ ಅಭಿವೃದ್ಧಿ ಮತ್ತು ವಿವಿಧ ಇಲಾಖೆಗಳಿಂದ ಕೈಗೊಳ್ಳಲಾಗಿರುವ ಮೂಲಭೂತ ಸೌಕರ್ಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ಪರಿಶೀಲನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರು ನಗರದಲ್ಲಿ ಸುಮಾರು 12,878 ಕಿ.ಮೀ ಉದ್ದದ ರಸ್ತೆ ಜಾಲವಿದ್ದು, ಈ ಪೈಕಿ ಸುಮಾರು 1,344.84 ಕಿ.ಮೀ ಗಳು ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆ ಗುಂಪಿಗೆ ಸೇರುತ್ತಿದ್ದು, ಉಳಿಕೆ ಸುಮಾರು 11,533.16 ಕಿ.ಮೀ ರಸ್ತೆಗಳು ವಲಯ ಮಟ್ಟದ ರಸ್ತೆ ಗುಂಪಿಗೆ ಸೇರಿದೆ. ಬೆಂಗಳೂರು ನಗರದ ರಸ್ತೆಗಳ ತಳಭಾಗದಲ್ಲಿ ಬೆಸ್ಕಾಂ ಕೇಬಲ್, ನೀರು ಸರಬರಾಜು ಮತ್ತು ಒಳಚರಂಡಿ ಕೊಳವೆಗಳು, ಗೇಲ್‍ಗ್ಯಾಸ್‍ನ ಕೊಳವೆಗಳು, ಕೆ.ಪಿ.ಟಿ.ಸಿ.ಎಲ್ ಸಂಸ್ಥೆಯ ಬೃಹತ್ ಮತ್ತು ಹೆಚ್ಚಿನ ಸಾಮರ್ಥ್ಯದ ಕೇಬಲ್‍ಗಳ ಅಳವಡಿಕೆ ಮತ್ತು ಒಎಫ್‍ಸಿ ಕೇಬಲ್‍ಗಳ ಅಳವಡಿಕೆಯಿಂದ ರಸ್ತೆಯ ಮೇಲ್ಮೈ ಭಾಗವು ಶಿಥಿಲಗೊಂಡು ರಸ್ತೆ ಗುಂಡಿಗಳು ಉದ್ಭವಿಸುತ್ತಿರುವುದು ಗಮನಿಸಲಾಗಿದೆ.

ಈ ರಸ್ತೆ ಗುಂಡಿಗಳನ್ನು ಅತೀ ಶೀಘ್ರವಾಗಿ ದುರಸ್ತಿ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬಿಬಿಎಂಪಿ ಬ್ಯಾಚ್ ಮಿಕ್ಸ್ ಘಟಕವನ್ನು ಸ್ಥಾಪಿಸಲಾಗಿದ್ದು, ಈ ಬ್ಯಾಚ್ ಮಿಕ್ಸ್ ಘಟಕದಿಂದ ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಉದ್ಭಿಸುತ್ತಿರುವ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ಅದೇ ರೀತಿ ವಲಯ ಮಟ್ಟದ ರಸ್ತೆಗಳನ್ನು ವಾರ್ಡ್‍ವಾರು ವಿಭಾಗಗೊಳಿಸಲಾಗಿದ್ದು, ಪ್ರತಿ ವಾರ್ಡ್‍ಗೆ 15 ಲಕ್ಷ ರೂ.ಗಳಂತೆ ರಸ್ತೆ ಗುಂಡಿ ಮುಚ್ಚಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ರಸ್ತೆ ಗುಂಡಿ ಮುಚ್ಚುವ ಪ್ರಕ್ರಿಯೆಯು ಜಾರಿಯಲ್ಲಿದ್ದು, ರಸ್ತೆ ಗುಂಡಿ ಉದ್ಭಿಸಿದ ಕೆಲವೇ ಸಮಯದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮವಹಿಸಲಾಗುತ್ತಿದೆ. ಮಳೆಗಾಲದಲ್ಲಿ ಹೆಚ್ಚಿನ ಸಂಖ್ಯೆಯ ರಸ್ತೆ ಗುಂಡಿಗಳು ಉದ್ಭವಿಸುತ್ತಿದ್ದು, ಮಳೆಗಾಲದಲ್ಲಿಯೂ ರಸ್ತೆ ಗುಂಡಿ ಮುಚ್ಚಲು ತಂಪಾದ ಡಾಂಬರ ಮಿಶ್ರಣ ಪದ್ಧತಿ ಅನ್ನು ತಯಾರಿಸುವ ಘಟಕವನ್ನು ಬಿಬಿಎಂಪಿ ವತಿಯಿಂದಲೆ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ರಸ್ತೆ ಅಗೆತದಿಂದ ಆಗುವ ರಸ್ತೆ ಗುಂಡಿಗಳನ್ನು ಆಯಾ ಸಂಸ್ಥೆಗಳೇ ಅಂದರೆ ಬೆಸ್ಕಾಂ, ಕೆ.ಪಿ.ಟಿ.ಸಿ.ಎಲ್, ಗೇಲ್‍ಗ್ಯಾಸ್ ರವರೇ ಮುಚ್ಚುವಂತೆ ಆದೇಶ ನೀಡಲಾಗಿದ್ದು, ರಸ್ತೆ ಗುಂಡಿಗಳಿಗೆ ಕಡಿವಾಣ ಹಾಕಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಹಾಗೂ ಇತರೆ ಇಲಾಖೆಗಳೊಂದಿಗೆ ಸಮನ್ವಯತೆಯನ್ನು ಸಾಧಿಸಲಾಗಿದ್ದು, ರಸ್ತೆ ಅಗೆಯುವ, ದುರಸ್ಥಿಗೊಳಿಸುವ ಪ್ರಕ್ರಿಯೆಯನ್ನು ಕ್ರಮಬದ್ಧ ಗೊಳಿಸಲಾಗಿದೆ. ರಸ್ತೆ ಅಗೆತವನ್ನು ತಡೆಗಟ್ಟಲು ಪ್ರಮುಖ ರಸ್ತೆಗಳಲ್ಲಿ ರಸ್ತೆ ಅಭಿವೃದ್ಧಿಯ ಜೊತೆಗೆ ಡಕ್ಟ್‌ ಗಳ ನಿರ್ಮಾಣವನ್ನು ಕೈಗೊಂಡಿರುವ ಹಿನ್ನಲೆಯಲ್ಲಿ ರಸ್ತೆ ಗುಂಡಿಗಳ ಉದ್ಭವಿಕೆಗೆ ಕಡಿವಾಣ ಹಾಕಲಾಗಿದೆ ಎಂದು ತಿಳಿಸಿದರು.

ರಸ್ತೆ ಗುಂಡಿಗಳನ್ನು ಪಾರದರ್ಶಕವಾಗಿ ಗುರುತಿಸಲು ಮತ್ತು ದುರಸ್ಥಿ ಪಡಿಸಲು ಹಾಗೂ ನಿಗಧಿತ ಅವಧಿಯಲ್ಲಿ ರಸ್ತೆ ಗುಂಡಿ ಮುಚ್ಚಲಾದ ಕಾರ್ಯವಿಧಾನದ ಬಗ್ಗೆ ನಿಗಾ ವಹಿಸಲು “ರಸ್ತೆ ಗುಂಡಿ ಗಮನ” ಎಂಬ ನೂತನ ಮೊಬೈಲ್ ಆಪ್‍ಅನ್ನು ಜಾರಿಗೆ ತರಲಾಗಿದೆ. ರಸ್ತೆ ಗುಂಡಿಗಳಿಗೆ ಕಡಿವಾಣ ಹಾಕಲು 2023-24ನೇ ಸಾಲಿನಲ್ಲಿ ಒಟ್ಟು 1700 ಕೋಟಿ ರೂ.ಗಳ ಅನುದಾನದಲ್ಲಿ ವೈಟ್ ಟಾಪಿಂಗ್ ಕಾಮಗಾರಿಗಳ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ವೈಟ್ ಟಾಪಿಂಗ್ ರಸ್ತೆ ನಿರ್ಮಾಣದಿಂದ ದೀರ್ಘಬಾಳಿಕೆಯ ಮತ್ತು ಕಡಿಮೆ ನಿರ್ವಹಣೆ ವೆಚ್ಚದ ರಸ್ತೆಗಳನ್ನು ನಿರ್ಮಿಸಿದ್ದಂತಾಗುತ್ತದೆ.

ಬೆಂಗಳೂರು ನಗರದಲ್ಲಿ ಒಟ್ಟು 1611 ಕಿ.ಮೀ ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳಿದ್ದು, 459 ಕಿ.ಮೀ. ಉದ್ದದ ರಸ್ತೆ ಹಾಳಾಗಿರುವುದು ಸರಕಾರದ ಗಮನಕ್ಕೆ ಬಂದಿದ್ದು, ಪ್ರಸಕ್ತ ವರ್ಷದಲ್ಲಿಯೇ ಈ 459 ಕಿ.ಮೀ. ಉದ್ದದ ರಸ್ತೆಯನ್ನು 659.71 ಕೋಟಿ ರೂ.ಗಳಲ್ಲಿ ಡಾಂಬರೀಕರಣವನ್ನು ನವೆಂಬರ್ ತಿಂಗಳಿನಿಂದ ಕೈಗೆತ್ತಿಗೊಳ್ಳಲಾಗುವುದು ಮತ್ತು ಮಾರ್ಚ್ ಅಂತ್ಯದವರೆಗೆ ಪೂರ್ಣಗೊಳಿಸಲಾಗುವುದು ಎಂದು ವಿವರಿಸಿದ್ದಾರೆ.

ಇದೇ ವಳೆ ಮುಖ್ಯಮಂತ್ರಿಗಳು ಹೆಬ್ಬಾಳದ ಬಳಿ ಬಿಡಿಎ ಮೇಲ್ಸೇತುವೆ ಕಾಮಗಾರಿ, ಹೊರವರ್ತುಲ ರಸ್ತೆಯ ಕರಿಯಣ್ಣನ ಪಾಳ್ಯದ ಬಳಿ ಸರ್ವೀಸ್ ರಸ್ತೆಯಲ್ಲಿ ಡಾಂಬರೀಕರಣ, ಹೆಣ್ಣೂರು ಜಂಕ್ಷನ್ ಬಳಿ ಡಾಂಬರೀಕರಣ ಪರಿಶೀಲನೆ, ಕೆ.ಆರ್.ಪುರ ರೈಲ್ವೆ ನಿಲ್ದಾಣದ ಬಳಿ ಮೆಟ್ರೋ ಕಾಮಗಾರಿ ನಕ್ಷೆಗಳ ವೀಕ್ಷಣೆ ನಡೆಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಭೈರತಿ ಸುರೇಶ್, ಶಾಸಕರಾದ ಬಿ.ಎ.ಬಸವರಾಜ, ರಿಝ್ವಾನ್ ಅರ್ಶದ್, ಎ.ಸಿ.ಶ್ರೀನಿವಾಸ್, ವಿಧಾನಪರಿಷತ್ ಸದಸ್ಯರಾದ ಕೆ.ಗೋವಿಂದ ರಾಜು, ನಾಗರಾಜ ಯಾದವ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT