ಬೆಂಗಳೂರು: ಕುಮಾರಸ್ವಾಮಿ ರಾಜಕಾರಣ, ಬೇರೆ ಮಾತು ಎಲ್ಲವನ್ನು ಬಿಟ್ಟು ರಾಜ್ಯದಲ್ಲಿ 50 ಸಾವಿರದಿಂದ 1 ಲಕ್ಷ ಜನರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಲಿ. ಕಾಂಗ್ರೆಸ್ ಸರ್ಕಾರ ಅವರಿಗೆ ಬೇಕಾದಂತಹ ಸಹಕಾರ ನೀಡುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕುಮಾರಸ್ವಾಮಿಗೆ ಮೋದಿ ಅವರು ಉಕ್ಕು, ಕೈಗಾರಿಕೆ ಎನ್ನುವ ದೊಡ್ಡ ಹಾಗೂ ಉತ್ತಮ ಖಾತೆ ಕೊಟ್ಟಿದ್ದಾರೆ. ಅವರಿಗೆ ಸಿಕ್ಕಿರುವ ಒಳ್ಳೇ ಅವಕಾಶ ಬಳಸಿಕೊಳ್ಳಲಿ” ಎಂದರು. ಯೋಗಕ್ಕಿಂತ ಯೋಗಕ್ಷೇಮ ಮುಖ್ಯವಾದುದು. ಹಾಸನ, ಬೆಂಗಳೂರು, ಮಂಡ್ಯ, ಬೀದರ್, ಕಲಬುರ್ಗಿ ಸೇರಿದಂತೆ ಇತರೇ ಭಾಗಗಳಿಗೆ ಉತ್ತಮ ಕೆಲಸ ಮಾಡಿ, ಏನಾದರೂ ಸಾಕ್ಷಿ ಬಿಟ್ಟು ಹೋಗಲಿ. ರಾಜಕೀಯ ಇದ್ದಿದ್ದೇ, ಏಕೆ ಇಂತಹ ಅವಕಾಶವನ್ನು ಕಳೆದುಕೊಳ್ಳುತ್ತಾ ಇದ್ದಾರೆ” ಎಂದು ಡಿಕೆಶಿ ವ್ಯಂಗ್ಯವಾಡಿದ್ದಾರೆ.
“ನಾವೆಲ್ಲಾ ಪ್ರತಿದಿನ ರಾಜಕೀಯ ಮಾಡುತ್ತಲೇ ಇರುತ್ತೇವೆ. ಅಭಿವೃದ್ದಿಯಿದ್ದರೇ ತಾನೇ ರಾಜಕೀಯ.ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ.ಎತ್ತಿನಹೊಳೆ ಕೆಲಸ ಮುಗಿಸಬೇಕು, ಪ್ರಣಾಳಿಕೆಗಳಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಬೇಕು. ಪ್ರತಿದಿನ ಸಮಯ ಓಡುತ್ತಿರುತ್ತದೆ” ಎಂದು ಹೇಳಿದ್ದಾರೆ. “ನಾವು 136 ಕಾಂಗ್ರೆಸ್ ಶಾಸಕರು ಒಟ್ಟಿಗೆ ಇದ್ದೇವೆ. ಇಲ್ಲಿ ಚರ್ಚೆ ಮಾಡುವಾಗ ಅಧಿಕಾರಿಗಳು ಬೇಕಾಗಿಲ್ಲ. ನಾಯಕರ ಹಿಂದೆ ಅಧಿಕಾರಿಗಳು ಬೇಕಾಗಿಲ್ಲ.ನಾವು ಆಲೋಚಿಸುತ್ತೇವೆ, ಚರ್ಚೆ ಮಾಡುತ್ತೇವೆ, ಅಭಿಪ್ರಾಯ ಕೇಳುತ್ತೇವೆ. ಮಾತನಾಡುವವರು ಹಾಗೂ ತೀರ್ಮಾನಿಸುವವರು ಒಬ್ಬರೇ” ಎಂದು ಹೇಳಿದರು.
ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ದ ಕುಮಾರಸ್ವಾಮಿ ಅವರ ಆರೋಪದ ಪ್ರತಿಕ್ರಿಯಿಸಿದ ಡಿಕೆಶಿ, “ತನಿಖೆ ಮಾಡುವವರು ಅವರು, ತನಿಖೆಗೆ ಒಳಗಾಗುವವರು ಅವರು. ಅದಕ್ಕೂ ನನಗೂ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.
ಸರ್ಕಾರ ಬೀಳಿಸಲು 1 ಸಾವಿರ ಕೋಟಿ ಮೀಸಲಿಡಲಾಗಿದೆ ಎನ್ನುವ ಯತ್ನಾಳ್ ಅವರ ಹೇಳಿಕೆ ಬಗ್ಗೆ ಮಾತನಾಡಿದ ಡಿ ಕೆ ಶಿವಕುಮಾರ್, “ಇದರ ಬಗ್ಗೆ ಈಗಾಗಲೇ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಪಕ್ಷ ಹಾಗೂ ಸರ್ಕಾರ ಉರುಳಿಸಲು ಈ ಕೆಲಸ ಮಾಡಲಾಗುತ್ತಿದೆ. ನಮ್ಮ ಕಾನೂನು ಸಲಹೆಗಾರರ ಬಳಿ ಚರ್ಚೆ ನಡೆಸಲಾಗುವುದು.ಈ ಕೃತ್ಯ ಐಟಿಯವರಿಂದ ತನಿಖೆಗೆ ಒಳಗಾಗಬೇಕು” ಎಂದರು.
“ಮುಂದಿನ 2025 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರನ್ನು ಹರಿಸಲು ಪ್ರಯತ್ನ ಮಾಡಲಾಗುವುದು. ಈಗಾಗಲೇ ಎತ್ತಿನಹೊಳೆ ನೀರನ್ನು ಮೇಲಕ್ಕೆ ಎತ್ತಿ ಸಂಗ್ರಹ ಮಾಡಲಾಗಿದೆ. ತುಮಕೂರು ಹಾಗೂ ಹಾಸನ ಜಿಲ್ಲೆಯಲ್ಲಿ ಅರಣ್ಯ ಭೂಮಿಯನ್ನು ಗುರುತಿಸಲಾಗಿದೆ. ಇದನ್ನು ನೀರಾವರಿ ಇಲಾಖೆಗೆ ವರ್ಗಾವಣೆ ಮಾಡಬೇಕು. ಈ ವಿಚಾರವಾಗಿ ಪ್ರತ್ಯೇಕ ಸಭೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅರಣ್ಯ ಸಚಿವರ ಬಳಿಯೂ ಮಾತನಾಡಲಾಗುವುದು” ಎಂದರು.