ಮಾಜಿ ಪ್ರಧಾನಮಂತ್ರಿ ಎಚ್‌ಡಿ ದೇವೇಗೌಡ  
ರಾಜ್ಯ

ಸತ್ತ ಆರ್ಥಿಕತೆ: ಟ್ರಂಪ್ ಅಂಧ-ಅಜ್ಞಾನಿ; ಭಾರತದ ವಿರುದ್ಧ 'ದೊಡ್ಡಣ್ಣ'ನ ಹೇಳಿಕೆಗೆ ದೇವೇಗೌಡರ ಆಕ್ಷೇಪ

ಜಗತ್ತಿನ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ನಮ್ಮ ಆರ್ಥಿಕತೆಯನ್ನು 'ಸತ್ತಿದೆ' ಎಂದು ಹೇಳಲು ಟ್ರಂಪ್ ಕುರುಡರಾಗಿರಬೇಕು ಅಥವಾ ಅಜ್ಞಾನಿಯಾಗಿರಬೇಕು.

ಬೆಂಗಳೂರು: ಭಾರತದ ಆರ್ಥಿಕತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಟೀಕಿಸಿದ್ದಾರೆ. ಭಾರತವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದ್ದು, ಜಗತ್ತಿನ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ನಮ್ಮ ಆರ್ಥಿಕತೆಯನ್ನು 'ಸತ್ತಿದೆ' ಎಂದು ಹೇಳಲು ಟ್ರಂಪ್ ಕುರುಡರಾಗಿರಬೇಕು ಅಥವಾ ಅಜ್ಞಾನಿಯಾಗಿರಬೇಕು ಎಂದು ದೇವೇಗೌಡರು ಹರಿಹಾಯ್ದಿದ್ದಾರೆ.

ನಾನು ಕೂಡ ಭಾರತದ ಆರ್ಥಿಕತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಧಾರ ರಹಿತ ಮತ್ತು ಕೋಪದ ಹೇಳಿಕೆಗಳಿಂದ ಆಶ್ಚರ್ಯಚಕಿತನಾಗಿದ್ದೇನೆ. ಆಧುನಿಕ ಇತಿಹಾಸದಲ್ಲಿ ಇಷ್ಟೊಂದು ಅಸ್ಥಿರ, ಅನಾಗರಿಕ ಮತ್ತು ಬೇಜವಾಬ್ದಾರಿಯುತ ರಾಷ್ಟ್ರಮುಖ್ಯಸ್ಥರನ್ನು ನಾನು ಕಂಡಿಲ್ಲ ಎಂದು ಹೇಳಿದ್ದಾರೆ.

ಟ್ರಂಪ್ ಭಾರತದೊಂದಿಗೆ ಮಾತ್ರವಲ್ಲ, ಜಗತ್ತಿನಾದ್ಯಂತ ಪ್ರತೀ ದೇಶದೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ. ಅವರು ತಮ್ಮ ದೀರ್ಘಕಾಲದ ಮಿತ್ರರಾಷ್ಟ್ರಗಳನ್ನು ಬಿಟ್ಟಿಲ್ಲ. ಅವರಲ್ಲಿ ಮೂಲಭೂತವಾಗಿ ಏನೋ ಸಮಸ್ಯೆ ಇದೆ. ರಾಜತಾಂತ್ರಿಕತೆ ಅಥವಾ ರಾಜಕೀಯದ ಮೂಲಕ ಅದನ್ನು ಪತ್ತೆ ಹಚ್ಚಲು ಅಥವಾ ಪರಿಹರಿಸಲು ಸಾಧ್ಯವಿಲ್ಲ. ಅವರ ಕೋಪದ ಸ್ವಭಾವದ ಬಗ್ಗೆ ಇದಕ್ಕಿಂತ ಹೆಚ್ಚಿಗೆ ಹೇಳುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಏಕೆಂದರೆ, ಅದು ನಮ್ಮ ತತ್ವಾದರ್ಶಗಳಿಗೆ, ಬದ್ಧತೆ ಕಡಿಮೆ ಎನಿಸುತ್ತದೆ. ಭಾರತದ ಸಣ್ಣ ವ್ಯಾಪಾರಿ ಮತ್ತು ಬಡರೈತ ಕೂಡ ತಮ್ಮ ವ್ಯವಹಾರವನ್ನು ಬಹಳ ಘನತೆ, ಸಮಗ್ರತೆ ಮತ್ತು ಮಾನವೀಯತೆಯಿಂದ ನಡೆಸುತ್ತಾ ಟ್ರಂಪ್‍ಗೆ ಅನೇಕ ಪಾಠಗಳನ್ನು ಕಲಿಸಬಹುದು ಎಂದು ನಾನು ಬಲವಾಗಿ ನಂಬಿದ್ದೇನೆ ಎಂದು ದೇವೇಗೌಡ ತಿಳಿಸಿದ್ದಾರೆ .

ಭಾರತವು ವೈವಿಧ್ಯಮಯ ಮತ್ತು ಪ್ರಜಾಪ್ರಭುತ್ವವಾದಿ ಸಾರ್ವಭೌಮ ರಾಷ್ಟ್ರ. ಸ್ವಾತಂತ್ರ್ಯದ ನಂತರ ಅದು ಯಾವಾಗಲೂ ಅತ್ಯುನ್ನತ ರಾಷ್ಟ್ರೀಯ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುತ್ತಾ ಬಂದಿದೆ. ಭಾರತವು ತನ್ನ ದಾರಿಗೆ ಎದುರಾಗುವ ಎಲ್ಲ ತೊಂದರೆಗಳನ್ನು ಮಾತುಕತೆ ಮೂಲಕವೇ ಪರಿಹರಿಸಿಕೊಂಡು ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ದೇವರು ಕರುಣಿಸಿರುವ ಸಾಮರ್ಥ್ಯ ಮತ್ತು ಶಕ್ತಿಯನ್ನು ಹೊಂದಿದೆ ಎಂಬುದು ನನ್ನ ಭಾವನೆ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ನಮ್ಮ ರಾಷ್ಟ್ರೀಯ ಹಿತಾಸಕ್ತಿಯನ್ನು ರಾಜಿ ಮಾಡಿಕೊಂಡಿಲ್ಲ ಎಂಬ ಬಗ್ಗೆ ನನಗೆ ಅತೀವ ಸಂತೋಷ ಮತ್ತು ಹೆಮ್ಮೆ ಇದೆ. ಟ್ರಂಪ್ ಅವರ ಬೆದರಿಕೆಗೆ ಭಾರತ ಹೆದರುವುದಿಲ್ಲ ಮತ್ತು ಅಂಥ ಬೆದರಿಕೆಗಳಿಂದ ಭಾರತ ಎಂದಿಗೂ ಇನ್ನೊಬ್ಬರ ತಾಳಕ್ಕೆ ತಕ್ಕಂತೆ ನಡೆಯುವುದಿಲ್ಲ ಎಂದು ಈಗಾಗಲೇ ತೋರಿಸಿಕೊಟ್ಟಿದೆ ಎಂದು ದೇವೇಗೌಡ ತಿಳಿಸಿದ್ದಾರೆ.

ಇದಕ್ಕೆ ವಿರುದ್ಧವಾಗಿ ರಾಷ್ಟ್ರದ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆ ಅವಲಂಬಿಸಿರುವ ಕೃಷಿ ವಲಯ ಮತ್ತು ಸಣ್ಣ ಮತ್ತು ಮಧ್ಯಮ ವ್ಯವಹಾರಗಳನ್ನು ಸಂರಕ್ಷಿಸಲು ಮೋದಿ ಅವರ ಸರಕಾರವು ಪರಿಪೂರ್ಣ ಪ್ರಯತ್ನ ಮಾಡಿದೆ. ಸರಕಾರ ಕೈಕೊಂಡ ದೃಢ ನಿಲುವು ಅಭೂತಪೂರ್ವ ರಾಷ್ಟ್ರೀಯ ಅಭಿವೃದ್ಧಿಯ ಪುನರುಜ್ಜೀವನಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT