ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ "ಮತಗಳ್ಳತನ" ನಡೆದಿದೆ ಎಂದು ಆರೋಪಿಸಿ ನಿನ್ನೆ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ್ದ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ತಮ್ಮ ಆರೋಪಗಳನ್ನು ಪುನರುಚ್ಚರಿಸಿದ್ದು, ಸಹಿ ಮಾಡಿದ ಅಫಿಡವಿಟ್ ಜೊತೆಗೆ ದಾಖಲೆ ಸಲ್ಲಿಸುವಂತೆ ಕೇಳಿದ್ದಕ್ಕಾಗಿ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು ನಗರದ ಫ್ರೀಡಂಪಾರ್ಕ್ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ರಾಹುಲ್, ಆರೋಪ ಸಾಬೀತುಪಡಿಸಲು ಬದ್ಧರಾಗಿದ್ದು, ಎಲೆಕ್ಟ್ರಾನಿಕ್ ಮತದಾರರ ಪಟ್ಟಿ ಮತ್ತು ಮತದಾನದ ವೀಡಿಯೊಗ್ರಫಿಯನ್ನು ಒದಗಿಸುವಂತೆ ಒತ್ತಾಯಿಸಿದ್ದಾರೆ. "ನಾನು ಲೋಕಸಭೆಯಲ್ಲಿ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 2024 ರಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿದೆ ಎಂಬುದನ್ನು ಬಹಿರಂಗಪಡಿಸಿದ್ದು ನೂರಕ್ಕೆ ನೂರು ಸತ್ಯ ಎಂದು ಅವರು ಪುನರುಚ್ಚರಿಸಿದ್ದಾರೆ.
ಇನ್ನು ಮತ ಕಳ್ಳತನದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶದಲ್ಲಿ ಮತಗಳ್ಳತನವಾಗಿದೆ. ಹೀಗಾಗಿ ಮೋದಿ ಪ್ರಧಾನಿ ಸ್ಥಾನದಲ್ಲಿ ಮುಂದುವರೆಯಲು ಯಾವುದೇ ನೈತಿಕತೆ ಇಲ್ಲ. ಅವರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧ ಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ ಮಾಡಿ, ಮತದಾನದ ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಿ ದಾಖಲೆಗಳ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮತ ಕಳ್ಳತನದ ವಿರುದ್ಧ ಹೋರಾಡುವಲ್ಲಿ ಇಂಡಿ ಮೈತ್ರಿಕೂಟ ಒಗ್ಗಟ್ಟಾಗಿದೆ ಎಂಬ ಸಂದೇಶವನ್ನು ರವಾನಿಸಿದೆ. ಬಿಜೆಪಿ ಮತಗಳ್ಳತನ ನಡೆಸಿದ್ದಕ್ಕಾಗಿ ತಾವು 2019ರ ಲೋಕಸಭಾ ಚುನಾವಣೆಯಲ್ಲಿ ಸೋಲಬೇಕಾಯಿತು ಎಂದು ಹೇಳಿದ್ದಾರೆ.
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ಸಾಕ್ಷಿ-ದೂರುದಾರ ವ್ಯಕ್ತಿ ತನಗೆ ಜೀವ ಬೆದರಿಕೆ ಇರುವುದರಿಂದ ಗನ್ ಮ್ಯಾನ್ ಹಾಗೂ ಭದ್ರತೆ ಒದಗಿಸಲು ತನಿಖೆ ನಡೆಸುತ್ತಿರುವ ಎಸ್ಐಟಿಗೆ ಮನವಿ ಮಾಡಿದ್ದಾರೆ. ಈಗಾಗಲೇ ಅವರಿಗೆ ಭದ್ರತೆ ಒದಗಿಸಲಾಗಿದೆ. ಜಿಲ್ಲಾ ಪೊಲೀಸರು ರಕ್ಷಣೆ ಒದಗಿಸಿದ್ದಾರೆಂದು ಎಸ್ಐಟಿ ಮೂಲಗಳು ತಿಳಿಸಿವೆ. ಏತನ್ಮಧ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬುಧವಾರ ನಡೆದ ಯೂಟ್ಯೂಬರ್ ಮತ್ತು ಸುದ್ದಿ ವಾಹಿನಿಯ ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ನಾಲ್ಕು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಮೂರು ಸೇರಿದಂತೆ ಒಟ್ಟು ಏಳು ಎಫ್ಐಆರ್ಗಳನ್ನು ದಾಖಲಿಸಲಾಗಿದೆ.
ಫ್ರೀ ಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಸಹೋದರಿಯ ಮಗನನ್ನು ಆತನ ಸೋದರ ಮಾವನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಮೋಘ ಕೀರ್ತಿ ಎಂಬ ಬಾಲಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕ ಅಮೋಘ ಕೀರ್ತಿ ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್ನಲ್ಲಿ ಫ್ರೀಫೈರ್ ಗೇಮ್ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ವಾರದ ಹಿಂದೆ ಹಣ ಕೊಡುವಂತೆ ಮಾವನ ಮೇಲೆ ಹಲ್ಲೆ ಕೂಡ ಮಾಡಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್ ಬಾಲಕನ ಕತ್ತು ಸೀಳಿ ಕೊಂದಿದ್ದಾನೆ. ಘಟನೆ ಬಳಿಕ ಆರೋಪಿ ಪೊಲೀಸರೆದುರು ಶರಣಾಗಿದ್ದಾನೆ.
ಹೈಕೋರ್ಟ್ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನ ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್ ಇಲಾಖೆ ಹಾಗೂ ವಾಣಿಜ್ಯ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಡಾ.ವಿಷ್ಣುವರ್ಧನ್ ಅಂತ್ಯಕ್ರಿಯೆಯನ್ನು ಕೆಂಗೇರಿಯಲ್ಲಿರುವ ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ನಡೆಸಲಾಗಿತ್ತು. ನಂತದಲ್ಲಿ ಅದನ್ನು ಸ್ಮಾರಕವಾಗಿ ಘೋಷಿಸಬೇಕೆಂಬ ಹೋರಾಟ ನಡೆಯುತ್ತಲೇ ಇತ್ತು. ಈಗ ಹೈಕೋರ್ಟ್ ಸೂಚನೆ ಮೇರೆ ರಾತ್ರೋರಾತ್ರಿ ಸಮಾಧಿಯನ್ನ ತೆರವುಗೊಳಿಸಲಾಗಿದೆ. ಮೈಸೂರಿನಲ್ಲಿ ಈಗಾಗಲೇ ಒಟ್ಟು 2.75 ಎಕ್ರೆ ಪ್ರದೇಶದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಆಗಿದೆ. ವಿಷ್ಣು ಸಿನಿಮಾದಲ್ಲಿನ ಪ್ರಶಸ್ತಿಗಳೂ ಸ್ಮಾರಕದ ಮ್ಯೂಸಿಯಂನಲ್ಲಿದೆ. ವಿಶೇಷವಾದ ವಿಷ್ಣು ಪುತ್ಥಳಿಯನ್ನೂ ನಿರ್ಮಿಸಲಾಗಿದೆ.