ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ತೂಗುದೀಪ ಸೇರಿ 7 ಜನ ಆರೋಪಿಗಳ ಜಾಮೀನು ರದ್ದಾಗಿದೆ. ದರ್ಶನ್ ಜೊತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ಸ್ಯಾಂಡಲ್ ವುಡ್ ಕ್ವೀನ್, ಮಾಜಿ ಸಂಸದೆ ನಟಿ ರಮ್ಯಾ ಅವರು ಈ ಕೇಸ್ ವಿಚಾರವಾಗಿ ದರ್ಶನ್ ಅವರನ್ನು ವಿರೋಧಿಸುತ್ತಲೇ ಬಂದಿದ್ದರು. ಈಗ ಜಾಮೀನು ರದ್ದಾಗುತ್ತಿದ್ದಂತೆ ಪೋಸ್ಟ್ ಹಂಚಿಕೊಂಡಿದ್ದಾರೆ.
ರಮ್ಯಾ ಪೋಸ್ಟ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಉಳಿದವರಿಗೆ ನಾನು ಹೇಳುವುದೇನೆಂದರೆ ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯವು ಸಿಗುತ್ತೆ.ಎಲ್ಲಕ್ಕಿಂತ ಮುಖ್ಯವಾಗಿ, ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಇರಿ” ಎಂದು ರಮ್ಯಾ ಪೋಸ್ಟ್ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ನಟ ದರ್ಶನ್ ಅಭಿಮಾನಿಗಳೆಂದು ಗುರುತಿಸಿಕೊಂಡವರು ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎಂದು ಆರೋಪಿಸಿ ರಮ್ಯಾ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಕೂಡಲೇ ಕ್ರಮ ಕೈಗೊಂಡ ಪೊಲೀಸರು ಹಲವರನ್ನು ಬಂಧಿಸಿದ್ದರು.
ಜೂನ್ 2024 ರಲ್ಲಿ ಚಿತ್ರದುರ್ಗದಿಂದ ರೇಣುಕಾಸ್ವಾಮಿ ಎನ್ನುವವರನ್ನು ಅಪಹರಿಸಿ ಬೆಂಗಳೂರಿನ ಶೆಡ್ನಲ್ಲಿ 3 ದಿನಗಳ ಕಾಲ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಗ್ಯಾಂಗ್ ಮೇಲಿದೆ. ರೇಣುಕಾಸ್ವಾಮಿ ಮೃತಪಟ್ಟಾಗ ಮೃತದೇಹವನ್ನು ಚರಂಡಿಗೆ ಎಸೆಯಲಾಗಿತ್ತು.
ಆ ಬಳಿಕ ಇಬ್ಬರು ಪೊಲೀಸ್ ಠಾಣೆಗೆ ಬಂದು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಪೊಲೀಸರು ಇನ್ನಷ್ಟು ತನಿಖೆ ಮಾಡಿದ ಬಳಿಕ ಕೊಲೆ ವಿಷಯ ಬಹಿರಂಗವಾಗಿತ್ತು. ದರ್ಶನ್, ಪವಿತ್ರಾ ಗೌಡ, ಅನು ಕುಮಾರ್, ಲಕ್ಷ್ಮಣ್ ಎಂ, ಪ್ರದೂಷ್ ಎಸ್ ರಾವ್, ವಿ ವಿನಯ್, ಜಗದೀಶ್, ನಾಗರಾಜು ಆರ್ ಅವರು ಸೇರಿ 11 ಮಂದಿಯ ಬಂಧನವಾಗಿತ್ತು.