ಕಲಬುರಗಿ: ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳಾದ ಡಾ. ಶರಣಬಸವಪ್ಪ ಅಪ್ಪನವರು ಗುರುವಾರ ಲಿಂಗೈಕ್ಯರಾಗಿದ್ದು, ಇಂದು ಸಂಜೆ ಮಹಾಮನೆಯಲ್ಲಿ ಕೊನೆಯುಸಿರೆಳೆದರು ಎಂದು ಹೇಳಲಾಗಿದೆ.
ಕಲ್ಯಾಣ ಕರ್ನಾಟಕದ ಶಿಕ್ಷಣ ಕ್ರಾಂತಿಯ ಹರಿಕಾರರಾಗಿದ್ದ ಅಪ್ಪನವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಸಂಜೆ ಅವರನ್ನು ಆಸ್ಪತ್ರೆಯಿಂದ ಡಿಸ್ವಾರ್ಜ್ ಮಾಡಿಕೊಂಡು ಮಹಾಮನೆಗೆ ಶಿಫ್ಟ್ ಮಾಡಲಾಗಿತ್ತು.
ಮನೆಯಲ್ಲಿಯೇ ಆಸ್ಪತ್ರೆಯಲ್ಲಿನ ಸಕಲ ವ್ಯವಸ್ಥೆ ಕಲ್ಪಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆಸ್ಪತ್ರೆ ಚಿಕಿತ್ಸೆ ಬಿಟ್ಟು ಮನೆಗೆ ಶಿಫ್ಟ್ ಮಾಡಿರುವುದರಿಂದ ಅಪ್ಪಾ ಅವರ ಆರೋಗ್ಯದ ಬಗ್ಗೆ ಭಕ್ತರಲ್ಲಿ ಆತಂಕ ಹೆಚ್ಚಾಗಿತ್ತು. ಈ ಹಿನ್ನೆಲೆ ಮಹಾಮನೆ ಆವರಣದಲ್ಲಿಯೇ ಕುಳಿತಿದ್ದರು. ಆದರೆ ಪರಮಪೂಜ್ಯ ಡಾ. ಶರಣಬಸವಪ್ಪ ಅಪ್ಪನವರು ಲಿಂಗೈಕ್ಯರಾಗಿದ್ದಾರೆ.
ಅಪ್ಪ ಅವರು ಪತ್ನಿ ದಾಕ್ಷಾಯಣಿ ಎಸ್. ಅಪ್ಪ, ಏಳು ಜನ ಪುತ್ರಿಯರು ಮತ್ತು ಪುತ್ರರನ್ನು ಅಗಲಿದ್ದಾರೆ. ಪ್ರಸ್ತುತ ಸಂಸ್ಥಾನದ 9ನೇ ಪೀಠಾಧಿಪತಿಯಾಗಿ ದೊಡ್ಡಪ್ಪ ಅಪ್ಪ ಇದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಣ ಕ್ರಾಂತಿ ಮೂಡಿಸಿದ್ದ ಡಾ. ಶರಣಬಸವಪ್ಪ ಅಪ್ಪಾ ಅವರು ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಯಾಗಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವುದರ ಜೊತೆಗೆ ಶೈಕ್ಷಣಿಕ ಕ್ರಾಂತಿ ಮಾಡಿದ್ದ ಶರಣಬಸವಪ್ಪ ಅವರು ಶರಣಬಸವೇಶ್ವರ ವಿಶ್ವವಿದ್ಯಾಲಯ, ಶರಣಬಸವೇಶ್ವರ ರೆಸಿಡೆನ್ಷಿಯಲ್ ಪಬ್ಲಿಕ್ ಸ್ಕೂಲ್, ಅಪ್ಪ ಪಬ್ಲಿಕ್ ಸ್ಕೂಲ್, ಗೋದುತಾಯಿ ಮಹಿಳಾ ಕಾಲೇಜು, ಎಂಜಿನಿಯರಿಂಗ್, ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಕಾಲೇಜುಗಳನ್ನು ಆರಂಭಿಸಿ ಹೊಸ ಎತ್ತರಕ್ಕೆ ಕೊಂಡೊಯ್ದರು.
ಕಂಬನಿ ಮಿಡಿದ ಗಣ್ಯರು
ಡಾ. ಶರಣಬಸವಪ್ಪ ಅಪ್ಪನವರು ನಿಧನಕ್ಕೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಎಕ್ಸ್ ನಲ್ಲಿ, 'ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಶರಣಬಸವಪ್ಪ ಅಪ್ಪನವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಧರ್ಮ ಜಾಗೃತಿ, ಸಮಾಜ ಸೇವೆ, ಶೈಕ್ಷಣಿಕ ಕ್ಷೇತ್ರದಲ್ಲಿ ಅದಮ್ಯ ಸಾಧನೆ ಮಾಡಿದ ಅವರ ನಿಧನದಿಂದ ಒಬ್ಬ ಶ್ರೇಷ್ಠ ಕಾಯಕಯೋಗಿ ಗುರುಗಳನ್ನು ನಾವು ಕಳೆದುಕೊಂಡಿದ್ದೇವೆ. ಅವರ ಆಶೀರ್ವಾದ ಭಕ್ತರ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತಾ, ಅವರ ಅಪಾರ ಭಕ್ತರಿಗೆ, ಶಿಷ್ಯರಿಗೆ, ಗುರುಗಳ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಪೋಸ್ಟ್ ಮಾಡಿದ್ದಾರೆ.
ಅಂತೆಯೇ 'ಶರಣರ ನಾಡಾದ ಕಲಬುರಗಿಯಲ್ಲಿ ಶರಣ ಪರಂಪರೆಯ ಪ್ರಮುಖ ಕೇಂದ್ರವಾಗಿರುವ ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಡಾ.ಶರಣಬಸಪ್ಪ ಅಪ್ಪಾ ಅವರು ಲಿಂಗಕ್ಯರಾಗಿರುವುದು ಅತೀವ ನೋವಿನ ವಿಷಯವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.