ಬೆಂಗಳೂರು: ಆಗಸ್ಟ್ 26 ಮತ್ತು 27 ರಂದು ಗೌರಿ - ಗಣೇಶ ಹಬ್ಬ ಆಚರಿಸಲು ಜನ ಭಾರಿ ಸಂಖ್ಯೆಯಲ್ಲಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಹೋಗಲು ಸಜ್ಜಾಗಿದ್ದು, ಜನದಟ್ಟಣೆ ತಪ್ಪಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ರಾಜ್ಯದಾದ್ಯಂತ ವಿವಿಧ ಸ್ಥಳಗಳಿಗೆ 1,500 ವಿಶೇಷ ಬಸ್ಗಳನ್ನು ಓಡಿಸುವುದಾಗಿ ಶುಕ್ರವಾರ ಪ್ರಕಟಿಸಿದೆ.
ನಿಯಮಿತ ವೇಳಾಪಟ್ಟಿಗಳ ಜೊತೆಗೆ, ಆಗಸ್ಟ್ 31 ರಂದು ಭಾನುವಾರ ವಿಶೇಷ ಬಸ್ ಗಳನ್ನು ಸಹ ಒದಗಿಸಲಾಗುವುದು ಎಂದು ಕೆಎಸ್ಆರ್ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ತಿರುಪತಿ, ವಿಜಯವಾಡ ಮತ್ತು ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ಗಳು ತೆರಳುತ್ತವೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ವಿಶೇಷ ಬಸ್ಗಳು ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿ ಕಡೆಗೆ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿವೆ.
ಶಾಂತಿನಗರ(ಟಿಟಿಎಂಸಿ) ಬಿಎಂಟಿಸಿ ಬಸ್ ನಿಲ್ದಾಣದಿಂದ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿರಾಪಳ್ಳಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕೋಝಿಕ್ಕೋಡ್ ಮತ್ತು ತಮಿಳುನಾಡು ಮತ್ತು ಕೇರಳದ ಇತರ ಸ್ಥಳಗಳಿಗೆ ಪ್ರೀಮಿಯರ್ ವಿಶೇಷ ಬಸ್ ಗಳು ಲಭ್ಯವಿರುತ್ತವೆ.
ಕೆಎಸ್ಆರ್ಟಿಸಿ ವ್ಯಾಪ್ತಿಯ ತಾಲೂಕು ಮತ್ತು ಜಿಲ್ಲಾ ಬಸ್ ನಿಲ್ದಾಣಗಳಿಂದ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಯಾಣಿಕರು www.ksrtc.karnataka.gov.inನಲ್ಲಿ ಆನ್ಲೈನ್ ಮೂಲಕ ತಮ್ಮ ಟಿಕೆಟ್ಗಳನ್ನು ಬುಕ್ ಮಾಡಬಹುದು.