ಬೆಳಗಾವಿ: ಜಾತಿ-ಜಾತಿಗಳು, ಧರ್ಮ-ಧರ್ಮಗಳ ಮಧ್ಯೆ ದ್ವೇಷ ಬಿತ್ತುವ, ವೈಯಕ್ತಿಕ ನಿಂದನೆಯ ಪಿತಾಮಹರು ಈ ಬಿಜೆಪಿವವರು. ಸಂವಿಧಾನದ ಆಶಯಗಳ ಪ್ರಕಾರ ಅವರು ನಡೆದುಕೊಳ್ಳಲಿ. ಸಂವಿಧಾನಕ್ಕೆ ಗೌರವ ಕೊಡುವ ಇಚ್ಛೆ ಅವರಿಗಿದ್ದರೆ, ಅದನ್ನು ಪಾಲಿಸಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತು ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿ, ದ್ವೇಷ ಮಾಡಣ ಮಾಡದೇ ಹೋದರೆ ಸಮಸ್ಯೆಯೇ ಇರುವುದಿಲ್ಲವಲ್ಲ. ಸಂವಿಧಾನದ ರಕ್ಷಣೆಗೆ ನಾವು ಈ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಮಸೂದೆಯನ್ನು ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಪರಿಚಯಿಸಲಾಗುತ್ತಿದೆ ಎಂಬ ಬಿಜೆಪಿಯ ಆರೋಪ ನಿರಾಕರಿಸಿದ ಅವರು ಸಾಂವಿಧಾನಿಕ ತತ್ವಗಳನ್ನು ಬಲಪಡಿಸುವ ಗುರಿಯನ್ನು ಈ ಮಸೂದೆ ಹೊಂದಿದೆ ಎಂದರು. "ಬಿಜೆಪಿ ಸಾಂವಿಧಾನಿಕ ಮೌಲ್ಯಗಳ ಪ್ರಕಾರ ವರ್ತಿಸಲಿ. ಈ ಶಾಸನವು ಸಂವಿಧಾನವನ್ನು ರಕ್ಷಿಸುವ ಉದ್ದೇಶವನ್ನು ಹೊಂದಿದೆ" ಎಂದು ಡಿಕಶಿ ಹೇಳಿದರು.
ನೆಹರು ಮತ್ತು ಇಂದಿರಾ ಗಾಂಧಿ ಅವರು ಮತ ಕಳ್ಳತನ ಮಾಡಿದ್ದರು ಎಂಬ ಅಮಿತ್ ಶಾ ಹೇಳಿಕೆ ಬಗ್ಗೆ ಕೇಳಿದಾಗ, “ಅಮಿತ್ ಶಾ ಅವರು ಈ ಬಗ್ಗೆ ಕನಿಷ್ಠ ಜ್ಞಾನ ಹೊಂದಿರಬೇಕು. ಅವರ ಕಾಲದಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತಿತ್ತು. ಹೀಗಿರುವಾಗ ಮತ ಕಳ್ಳತನ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಕೆಎಸ್ಸಿಎ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರು ನಿಮ್ಮನ್ನು ಭೇಟಿಯಾಗಿ ಸಲ್ಲಿಸಿರುವ ಮನವಿಯನ್ನು ಸಚಿವ ಪುಟ ಸಭೆಯಲ್ಲಿ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, “ಕೆಎಸ್ಸಿಎ ನೂತನ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರು ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾರೆ.
ಅವರು ಮನವಿ ನೀಡಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರ್ಘಟನೆ ಆಗಬಾರದಿತ್ತು. ಆದರೂ ಆಗಿದೆ. ಅನೇಕ ತಪ್ಪುಗಳು ನಡೆದಿವೆ. ಇವುಗಳನ್ನು ಸರಿಪಡಿಸಿಕೊಂಡು, ಪ್ರತ್ಯೇಕ ಮಾರ್ಗಸೂಚಿ ಅನುಸಾರ ಜನ ಸಂದಣಿ ನಿಯಂತ್ರಣ ಮಾಡಬೇಕಾಗುತ್ತದೆ” ಎಂದರು.
ಕ್ರಿಕೆಟ್ ವಿಚಾರದಲ್ಲಿ ನಾನು ವೈಯಕ್ತಿಕವಾಗಿ ಮುಕ್ತ ಮನಸ್ಸಿನಿಂದ ಇದ್ದೇನೆ. ನಮ್ಮ ರಾಜ್ಯದ ಗೌರವ ಹಾಳು ಮಾಡಿಕೊಳ್ಳುವುದು ಬೇಡ. ಈ ವಿಚಾರವನ್ನು ಸಚಿವ ಸಂಪುಟ ಸಭೆಯ ಮುಂದಿಟ್ಟು ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.