ಬೆಂಗಳೂರು: ಅಪ್ರಾಪ್ತನೊಬ್ಬ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿ ಮೂವರು ಪಾದಚಾರಿ ಗಳಿಗೆ ಡಿಕ್ಕಿ ಹೊಡೆದು, ಉರುಳಿ ಬಿದ್ದು ಮೃತ ಪಟ್ಟಿರುವ ಘಟನೆ ಬಳ್ಳಾರಿ ರಸ್ತೆಯ ಚಿಕ್ಕ ಜಾಲದ ದೇವನಹಳ್ಳಿ (ಸಾದಹಳ್ಳಿ) ಟೋಲ್ ಪ್ಲಾಜಾ ಬಳಿ ಭಾನುವಾರ ಸಂಜೆ ನಡೆದಿದೆ.
ಕೋಲಾರ ಮೂಲದ ರುದ್ರೇಶ್ (17) ಮೃತ ವಿದ್ಯಾರ್ಥಿ. ರುದ್ರೇಶ್ ಖಾಸಗಿ ಕಾಲೇ ಜಿನಲ್ಲಿ ಪಿಯುಸಿ ಮೊದಲನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಇವರ ತಂದೆ ಸುರೇಶ್ ಅವರು ಹೋಟೆಲ್ನಲ್ಲಿ ಅಡುಗೆ ಕೆಲಸ ಮಾಡುತ್ತಾರೆ. ತಂದೆಯೊಂದಿಗೆ ರುದ್ರೇಶ್ ಭಾನುವಾರ ದೇವನಹಳ್ಳಿಗೆ ಬಂದಿದ್ದ ಎಂದು ತಿಳಿದುಬಂದಿದೆ.
ಸುರೇಶ್ ಅವರು ಕೆಲಸದಲ್ಲಿ ನಿರತರಾಗಿದ್ದಾಗ, ರುದ್ರೇಶ್ ತಮ್ಮ ತಂದೆಯ ಬೈಕ್ ತೆಗೆದುಕೊಂಡು ಟೋಲ್ ಕಡೆಗೆ ಸವಾರಿ ಮಾಡಲು ಹೋಗಿದ್ದು, ಈ ವೇಳೆ ಅತಿವೇಗದಲ್ಲಿ ಬೈಕ್ ಚಲಾಯಿಸುತ್ತಾ ಟೋಲ್ ಬಳಿ ರಸ್ತೆ ದಾಟುತ್ತಿದ್ದ ಮಹಿಳೆ ಸೇರಿದಂತೆ ಮೂವರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದ್ದಾನೆ.
ಬಳಿಕ ತಾನು ಉರುಳಿಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೇ ರುದ್ರೇಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿದ್ದಾನೆ. ಅಪಘಾತದಲ್ಲಿ ಅಂಬಿಕಾ ಎಂಬ ಪಾದಚಾರಿಗೆ ಕಾಲು ಮುರಿದಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ರುದ್ರೇಶ್ ಹೆಲ್ಮೆಟ್ ಧರಿಸಿರಲಿಲ್ಲ. ಅಪಘಾತದಲ್ಲಿ ತಲೆಗೆ ತೀವ್ರ ಗಾಯಗಳಾಗಿದ್ದವು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಘಟನೆ ವೇಳೆ ರಸ್ತೆ ದಾಟುತ್ತಿದ್ದ ಮೂವರು ಪಾದಚಾರಿಗಳಿಗೂ ಗಾಯಗಳಾಗಿವೆ. ಮಹಿಳೆಯೊಬ್ಬರ ಎಡ ತೊಡೆಯ ಮೂಳೆ ಮುರಿದವಾಗಿದ್ದು, ಇಬ್ಬರು ಪುರುಷರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಗನಿಗೆ ಬೈಕ್ ನೀಡಿದ್ದ ತಂದೆಯ ವಿರುದ್ಧ ಇದೀಗ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಮತ್ತೊಂದು ಅಪಘಾತದಲ್ಲಿ ಕೆ.ಆರ್. ಪುರದಲ್ಲಿರುವ ಖಾಸಗಿ ಕಾಲೇಜಿನಲ್ಲಿ ಎಂಸಿಎ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಸಾಗರ್ ಎಂಬ ಯುವಕ ಸಾವನ್ನಪ್ಪಿದ್ದಾನೆ.
ಭಾನುವಾರ ಮಧ್ಯರಾತ್ರಿ ಸ್ನೇಹಿತನ ಮನೆಗೆ ಹೋಗಿ 12.30 ರ ಸುಮಾರಿಗೆ ತನ್ನ ಮನೆಗೆ ಸ್ಕೂಟರ್ನಲ್ಲಿ ಹಿಂತಿರುಗುತ್ತಿದ್ದಾಗ ಜಯಮಹಲ್ ಮುಖ್ಯರಸ್ತೆಯ ಟಿ.ವಿ. ಟವರ್ಜಂಕ್ಷನ್ ಬಳಿ ಪಾದಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದಾನೆ. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಪರೀಕ್ಷಿಸಿದ ವೈದ್ಯರು ಆತ ಮಾರ್ಗಮಧ್ಯೆದಲ್ಲಿಯೇ ಮೃತಪಟ್ಟಿದ್ದಾನೆ ಎಂದು ದೃಢಪಡಿಸಿದ್ದಾರೆ. ಘಟನೆ ಸಂಬಂಧ ಆರ್.ಟಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.