ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ಕುರಿತು ಬೆಳಗಾವಿ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ತೀವ್ರ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.
ಯೋಜನೆಯಡಿ ಫಲಾನುಭವಿಗಳಿಗೆ ಹಣ ಸಮರ್ಪಕವಾಗಿ ತಲುಪಿಲ್ಲ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ವಿಧಾನಸಭೆಯಲ್ಲಿ ಉತ್ತರ ನೀಡುವಂತೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ. ಅಲ್ಲದೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸದನದಲ್ಲಿಯೇ ಆರೋಪಿಸಿದ್ದಾರೆ.
ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು, ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ ಎಂದು ದಾಖಲೆಗಳ ಸಮೇತ ಆರೋಪಿಸಿದ್ದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ದೂರಿದ್ದರು. ಈ ಎರಡು ತಿಂಗಳುಗಳ ಅವಧಿಯ 5,500 ಕೋಟಿಗೂ ಅಧಿಕ ಅನುದಾನ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದ್ದರು.
ಸರ್ಕಾರದ ಕಡೆಯಿಂದ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ಅವರು ಒಂದಷ್ಟು ತಾಂತ್ರಿಕ ದೋಷಗಳು ಇರುವುದನ್ನು ಒಪ್ಪಿಕೊಂಡಿದ್ದು, ಅವುಗಳನ್ನು ಆದಷ್ಟು ಬೇಗ ಸರಿಪಡಿಸುವುದಾಗಿ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಜಿಎಸ್ಟಿ ಪಾಲು ಲಭ್ಯವಾಗದಿರುವುದರಿಂದ ಹಣದ ಕೊರತೆ ಉಂಟಾಗಿದೆ ಎಂದು ತಿಳಿಸಿದ್ದಾರೆ. ಈ ವಿಷಯವು ಇಂದು ಸದನದಲ್ಲಿ ಮತ್ತಷ್ಟು ಚರ್ಚೆಗೆ ಬರುವ ಸಾಧ್ಯತೆಯಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಏನೆಂದರು?
ಗೃಹ ಲಕ್ಷ್ಮೀ ಹಣ ಬಂದಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಬೆಳಗಾವಿಯಲ್ಲಿ ಮಾತಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಗೃಹ ಲಕ್ಷ್ಮೀ ಹಣ ಬಿಡುಗಡೆ ಮಾಡಿದ್ದೇವೆ. ಈ ಬಗ್ಗೆ ಇಂದು ಸದನದಲ್ಲಿ ಉತ್ತರ ಕೊಡ್ತಿನಿ. ಕಾಣೆ ಆಗೋಕೆ, ಹೇಳಿದ ಮಾತು ತಪ್ಪಲು ಇದು ಬಿಜೆಪಿ ಅಲ್ಲ ಕಾಂಗ್ರೆಸ್ ಸರ್ಕಾರ ಎಂದು ತಿರುಗೇಟು ನೀಡಿದರು.
ಸದನದಲ್ಲೇ ಉತ್ತರ ಕೊಡುತ್ತೇನೆ
ಈವರೆಗೆ 23 ಕಂತು ಹಾಕಿದ್ದೀನಿ ಎಂದು ಸದನದಲ್ಲಿ ಹೇಳಿದ್ದೇನೆ. ಬಾಕಿ ಉಳಿದಿರುವ ಹಣ ಬಗ್ಗೆ ಸದನದಲ್ಲೇ ಉತ್ತರ ಕೊಡ್ತೀನಿ ಎಂದರು.