ನವದೆಹಲಿ: ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಕಾರ್ಯಾಚರಣೆ ಕುರಿತಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ಕಾರ್ಯಾಚರಣೆಗೆ ಹೋಲಿಸಿದ ಬೆನ್ನಲ್ಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಸಿಎಂ ಒಬ್ಬ ಕಮ್ಯೂನಿಸ್ಟ್. ಕೋಗಿಲು ಲೇಔಟ್ ನಲ್ಲಿ 2021-22ರಿಂದ ಅನಧಿಕೃತವಾಗಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದರು. ಅವರಿಗೆ ನೋಟಿಸ್ ಕೊಟ್ಟು ತೆರವು ಮಾಡಬೇಕು ಎಂದು ಹೇಳಿದ್ದೇವು. ಆದರೆ ಅಲ್ಲಿ ವಾಸಿಸುತ್ತಿದ್ದವರು ನಮ್ಮ ಮಾತನ್ನು ಕೇಳಲಿಲ್ಲ. ಹೀಗಾಗಿ ತೆರವು ಕಾರ್ಯಾಚರಣೆ ನಡೆಸಿ ಜಾಗವನ್ನು ಖಾಲಿ ಮಾಡಿಸಿದ್ದಾರೆ.
ಈ ಬಗ್ಗೆ ನಾನು ಜಿಬಿಎ ಕಮಿಷನರ್ ಹಾಗೂ ರಾಜ್ಯ ಕಾರ್ಯದರ್ಶಿ ಜೊತೆ ಮಾತನಾಡಿದ್ದೀನಿ. ಮನೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಹೇಳಿದ್ದೇನೆ. ಅವರೆಲ್ಲಾ ವಲಸಿಗರಾದರೂ ಮಾನವೀಯತೆಯ ದೃಷ್ಟಿಯಿಂದ ಅವರಿಗೆ ಬೇರೆ ಕಡೆ ಮನೆ ಕಟ್ಟಿಕೊಳ್ಳಲು ಜಾಗ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ನಲ್ಲಿರುವ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ, ಅಲ್ಲಿ ಮುಸ್ಲಿಂ ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿದ್ದವು. ಇದೀಗ ಏಕಾಏಕಿ ಈ ಚಳಿಗಾಲದಲ್ಲಿ ಮನೆಗಳನ್ನು ನೆಲಸಮ ಮಾಡಿದರೆ ಅವರು ಎಲ್ಲಿಗೆ ಹೋಗಬೇಕು. ಈ ಚಳಿಯಲ್ಲಿ ಮಕ್ಕಳ, ಮಹಿಳೆಯರನ್ನು ಬೀದಿಗೆ ಹಾಕಿದ್ದಾರೆ ಎಂದು ಕೇರಳ ಮುಖ್ಯಮಂತ್ರಿಗಳು ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ಹೊರಹಾಕಿದ್ದರು.
ಕೋಗಿಲು ಬಡಾವಣೆ ಅಕ್ರಮ ಒತ್ತುವರಿ ಸಂಬಂಧ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕದಲ್ಲಿ ಬುಲ್ಡೋಜರ್ ರಾಜ್ ನಡೆಯುತ್ತಿದೆ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಪಿಣರಾಯಿ ವಿಜಯನ್ ರಂತಹ ಹಿರಿಯ ನಾಯಕರು ಸತ್ಯಾಸತ್ಯತೆ ಅರಿಯದೇ ಮಾತನಾಡಿರುವುದು ದುರಾದೃಷ್ಟಕರ. ಬೆಂಗಳೂರಿನ ವಿಚಾರ ಏನು ಎಂದು ಅವರು ತಿಳಿಯಬೇಕು. ಈ ಜಾಗ ಘನತ್ಯಾಜ್ಯ ವಿಲೇವಾರಿ ಮಾಡುವ ಕ್ವಾರಿ ಪಿಟ್ ಆಗಿದೆ. ಘನತ್ಯಾಜ್ಯ ವಿಲೇವಾರಿ ಘಟಕಕ್ಕಾಗಿ 9 ವರ್ಷಗಳ ಹಿಂದೆಯೇ ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರು ಬಗ್ಗೆ ಚೆನ್ನಾಗಿ ಗೊತ್ತಿದೆ. ಲ್ಯಾಂಡ್ ಮಾಫಿಯಾದವರು ಸ್ಲಂಗಳನ್ನು ನಿರ್ಮಿಸಲು ನಾವು ಬಿಡುವುದಿಲ್ಲ. ನಾವು ನಮ್ಮ ಭೂಮಿಯನ್ನು ರಕ್ಷಣೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದರು.