ಬೆಂಗಳೂರು: ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ನಿಧಿಯಲ್ಲಿ ರಾಜ್ಯಗಳಿಂದ ಸಂಗ್ರಹವಾದ ಹಣವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗವನ್ನು ಕೇಂದ್ರಕ್ಕೆ ತೆಗೆದುಕೊಂಡು ಹೋಗುವುದಾಗಿ ಸಚಿವ ಈಶ್ವರ ಬಿ ಖಂಡ್ರೆ ಅವರು ಶುಕ್ರವಾರ ಹೇಳಿದರು.
ಮಾನವ-ಪ್ರಾಣಿ ಸಂಘರ್ಷವನ್ನು ತಗ್ಗಿಸುವುದು, ರೈಲು ಬ್ಯಾರಿಕೇಡ್ಗಳನ್ನು ನಿರ್ಮಿಸುವುದು ಮತ್ತು ಇತರ ಕೆಲಸಗಳಿಗೆ ಕ್ಯಾಂಪಾ ನಿಧಿಯ ಅಗತ್ಯವಿದೆ. ಆದಾಗ್ಯೂ, ಹಣದ ಕೊರತೆಯಿಂದಾಗಿ ಹೆಚ್ಚಿನ ಕೆಲಸಗಳು ವಿಳಂಬವಾಗಿವೆ. ಆದರೆ, ಕೇಂದ್ರ ಸರ್ಕಾರ ಕ್ಯಾಂಪಾದಲ್ಲಿರುವ ರಾಜ್ಯದ 1400 ಕೋಟಿ ರೂ. ಹಣವನ್ನೇ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರ ಬಳಿಗೆ ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗ ತೆಗೆದುಕೊಂಡು ಹೋಗಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲೇ ಎಲ್ಲ ಸಚಿವರಿಗೂ ಪತ್ರ ಬರೆಯಲಾಗುವುದು ಎಂದು ಹೇಳಿದರು.
ಆ.12ರಂದು ಬೆಂಗಳೂರಿನಲ್ಲಿ ನಡೆದ ಮಾನವ-ಆನೆ ಸಂಘರ್ಷ ಕುರಿತ ಅಂತರ್ರಾಷ್ಟ್ರೀಯ ಸಮ್ಮೇಳನದ ಸಂದರ್ಭದಲ್ಲಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಜಾಖರ್ಂಡ್ ರಾಜ್ಯದ ಸಚಿವರು ಕೂಡ ಕೇಂದ್ರಕ್ಕೆ ನಿಯೋಗದಲ್ಲಿ ಆಗಮಿಸಲು ಸಮ್ಮಿತಿಸಿದ್ದರು. ನಂತರ ಯಾವುದೇ ಬೆಳವಣಿಗೆಗಳು ಕಂಡು ಬರಲಿಲ್ಲ. ಈಗ ಮತ್ತೂಮ್ಮೆ ಚರ್ಚಿಸಿ, ಎಲ್ಲ ರಾಜ್ಯಗಳ ಸಚಿವರನ್ನೂ ಆಹ್ವಾನಿಸುತ್ತೇವೆ ಎಂದು ತಿಳಿಸಿದರು.
ಕರ್ನಾಟಕ ಮತ್ತು ಕೇರಳಕ್ಕೆ ಸಂಪರ್ಕ ಕಲ್ಪಿಸುವ ಬಂಡೀಪುರ–ವಯನಾಡು ನಡುವೆ ರಾತ್ರಿ ಸಂಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪ್ರಸ್ತುತ ರಾತ್ರಿ 9ರ ವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ರಾತ್ರಿ 9 ಗಂಟೆಯ ಅನಂತರ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ. ಆದರೆ, ಇದರ ಹೊರತಾಗಿಯೂ ಎರಡೂ ಕಡೆಯಿಂದ 2 ಬಸ್ಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ ವಾಹನಗಳನ್ನು ಪರಿಶೀಲಿಸಿ ಬಿಡಲಾಗುತ್ತಿದೆ. ಆ್ಯಂಬುಲೆನ್ಸ್ ಓಡಾಟಕ್ಕೆ ಯಾವುದೇ ಅಡ್ಡಿ ಮಾಡುತ್ತಿಲ್ಲ. ಹೀಗಾಗಿ ರಾತ್ರಿ ಸಂಚಾರಕ್ಕೆ ಯಾವುದೇ ತೊಡಕಿಲ್ಲ ಎಂದು ಸ್ಪಷ್ಟಪಡಿಸಿದರು.