ಚೀನಾದಲ್ಲಿ ಉಲ್ಬಣಿಸಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಸೋಂಕು ಭಾರತದಲ್ಲೂ ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಬೆಂಗಳೂರಿನಲ್ಲಿ 2, ಗುಜರಾತ್ ನಲ್ಲಿ 1 ಪ್ರಕರಣ ವರದಿಯಾಗಿದ್ದು, ಸೋಂಕಿತ ಮಕ್ಕಳ ಪೈಕಿ 3 ತಿಂಗಳ ಹೆಣ್ಣುಮಗುವೊಂದನ್ನು ಡಿಸ್ಚಾರ್ಜ್ ಮಾಡಲಾಗಿದ್ದರೆ, ಎರಡನೇ ಪ್ರಕರಣದಲ್ಲಿ 8 ತಿಂಗಳ ಗಂಡು ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್ಎಂಪಿವಿ ವೈರಾಣು ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. HMPV ಸೋಂಕಿನ ಬಗ್ಗೆ ಹೆಚ್ಚಿನ ಆತಂಕ ಪಡಬೇಕಿಲ್ಲ. ಮಾಸ್ಕ್ ಕಡ್ಡಾಯವಲ್ಲ. ಸಹಜ ಮುಂಜಾಗ್ರತೆ ವಹಿಸಿದರೆ ಸಾಕು. ಬೆಂಗಳೂರಿನಲ್ಲಿ ಸೋಂಕು ತಗುಲಿದ್ದ ಮಕ್ಕಳ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇದೇ ವೇಳೆ, ICMR ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಿಗೆ ಐಎಲ್ಐ, ತೀವ್ರತರವಾದ ಉಸಿರಾಟದ ಸೋಂಕುಗಳ ಪ್ರಕರಣ ಕಂಡುಬಂದರೆ ಪರೀಕ್ಷೆ ಮಾಡುವಂತೆ ಸಲಹೆ ನೀಡಿದೆ.
ಕೆಎಸ್ಆರ್ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಈ ಮೂಲಕ ಸಾರಿಗೆ ನೌಕರರ ಹಲವು ವರ್ಷಗಳ ಬೇಡಿಕೆ ಈಡೇರಿದೆ. "ಕೆಎಸ್ಆರ್ಟಿಸಿ ಆರೋಗ್ಯ" ಯೋಜನೆಯಡಿ ಸಾರಿಗೆ ಸಂಸ್ಥೆಯ ಎಲ್ಲ ನೌಕರರು, ಅವರ ತಂದೆ - ತಾಯಿ ಮತ್ತು ಪತ್ನಿ - ಮಕ್ಕಳಿಗೆ ಖರ್ಚಿನ ಮಿತಿಯಿಲ್ಲದ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಸಿಗಲಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಾದ್ಯಂತ ಇರುವ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಒಟ್ಟು 250 ಖಾಸಗಿ ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಬಾಣಂತಿಯರ ಸಾವು ಮುಂದುವರಿದಿದ್ದು, ಇಂದು ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕಳೆದ 3 ತಿಂಗಳಿನಲ್ಲಿ ಮೃತಪಟ್ಟ ಬಾಣಂತಿಯರ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ 24 ವರ್ಷದ ಸರಸ್ವತಿ ಮೃತ ಬಾಣಂತಿಯಾಗಿದ್ದು, ಹೆರಿಗೆ ನಂತರ ಬಾಣಂತಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಅವರು ಜನವರಿ 5 ರಂದು ಮೃತಪಟ್ಟಿದ್ದಾರೆ. ತುಮಕೂರಿನ ಕುಣಿಗಲ್ ನಲ್ಲಿ ಪೆಂಟಾವಲೆಂಟ್ ವ್ಯಾಕ್ಸಿನ್ ಪಡೆದ 2 ನವಜಾತ ಶಿಶುಗಳು ಸಾವನ್ನಪ್ಪಿವೆ. ಲಸಿಕೆ ಮಾದರಿಗಳನ್ನು ಸಂಗ್ರಹಿಸಿ, ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ವರದಿ ಲಭ್ಯವಾದ ನಂತರ ಸಾವಿನ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ. ಅನೂಪ್, ರಾಖಿ, ಅನುಪ್ರಿಯಾ ವರ್ಷ ಮತ್ತು ಪ್ರಿಯಾಂಶ್ ಮೃತಪಟ್ಟಿದ್ದು, ಅನೂಪ್ ಉತ್ತರ ಪ್ರದೇಶ ಮೂಲದವರಾಗಿದ್ದು ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮನೆಗೆ ಕೆಲಸವರು ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ದಂಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ನೋರ್ಬೆರ್ಟ್ ಡಿಸೋಜ ವಿಧಿವಶರಾಗಿದ್ದು, ಅವರ ಪಾರ್ಥಿವ ಶರೀರವನ್ನು ಇಂದು ಸಾಗರದಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ನಾ. ಡಿಸೋಜ 75 ಕಾದಂಬರಿಗಳು, 6 ಚಾರಿತ್ರಿಕ ಕಾದಂಬರಿ, ಮಕ್ಕಳಿಗಾಗಿ 25 ಕಾದಂಬರಿ, 9 ಕಥಾ ಸಂಕಲನ, ಸಮಗ್ರ ಕಥೆಗಳ ಎರಡು ಸಂಪುಟಗಳನ್ನು ರಚಿಸಿದ್ದಾರೆ. 'ಮುಳುಗಡೆಯ ಊರಿಗೆ ಬಂದವರು' ಎಂಬ ಮಕ್ಕಳ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ 'ಬಾಲ ಸಾಹಿತ್ಯ ಪುರಸ್ಕಾರ’ ಸಂದಿದೆ. 'ದ್ವೀಪ' ಮತ್ತು 'ಕಾಡಿನ ಬೆಂಕಿ' ಕಾದಂಬರಿಗಳು ಚಲನಚಿತ್ರಗಳಾಗಿ ರಾಷ್ಟ್ರಿಯ ಪ್ರಶಸ್ತಿಯನ್ನು ಗಳಿಸಿವೆ. ನಾ ಡಿಸೋಜ ಅವರು 2014 ವರ್ಷದಲ್ಲಿ ಮಡಿಕೇರಿಯಲ್ಲಿ ನಡೆದ 80 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು. ಅಗಲಿದ ಸಾಹಿತಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.