ಬಿಬಿಎಂಪಿ ಕಚೇರಿ 
ರಾಜ್ಯ

BBMP ಕೇಂದ್ರ ಕಚೇರಿ ಮೇಲೆ ED ದಾಳಿ: 960 ಕೋಟಿ ರೂ ಮೊತ್ತದ ಬೋರ್‌ವೆಲ್ ಹಗರಣ ಆರೋಪ!

2016ರಲ್ಲಿ ನಡೆದಿದೆ ಎನ್ನಲಾದ ಬೋರ್‌ವೆಲ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಈ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಕೊರೆಸಿದ್ದ ಬೋರ್‌ವೆಲ್‌ನಲ್ಲಿ 960 ಕೋಟಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಇಂದು ದಿಢೀರ್ ದಾಳಿ ನಡೆಸಿದ್ದಾರೆ. ಬೆಳಗ್ಗೆ 11 ಗಂಟೆಗೆ ಏಳು ಇಡಿ ಅಧಿಕಾರಿಗಳ ತಂಡ ಕೇಂದ್ರ ಕಚೇರಿಯಲ್ಲಿರುವ ಬಿಬಿಎಂಪಿ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರ ಕಚೇರಿಯಲ್ಲಿ ಶೋಧ ನಡೆಸಿದೆ.

2016ರಲ್ಲಿ ನಡೆದಿದೆ ಎನ್ನಲಾದ ಬೋರ್‌ವೆಲ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಈ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಕೊರೆಸಿದ್ದ ಬೋರ್‌ವೆಲ್‌ನಲ್ಲಿ 960 ಕೋಟಿ ರೂಪಾಯಿ ಪೈಕಿ 400 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆದಿದ್ದು ಇದೇ ಅವಧಿಯಲ್ಲಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಎಇ, ಎಇಇಗಳನ್ನೂ ವಿಚಾರಣೆ ನಡೆಸಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ದಾಳಿ ವೇಳೆ ಇಡಿ ಅಧಿಕಾರಿಗಳು ಪ್ರಮುಖ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಸಂಗ್ರಹಿಸುತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA)ಯ ನಿಬಂಧನೆಗಳ ಅಡಿಯಲ್ಲಿ ಬಿಬಿಎಂಪಿಗೆ ಸಂಬಂಧಿಸಿದ ಸುಮಾರು ಆರು ಕಚೇರಿಗಳನ್ನು ಶೋಧಿಸಲಾಗಿದೆ. 2016ರಿಂದ 2019ರ ನಡುವೆ ಬೋರ್‌ವೆಲ್ ಮತ್ತು ಆರ್‌ಒ ಪ್ಲಾಂಟ್‌ಗಳ ಬಗ್ಗೆ 2020ರ ಜೂನ್ 16ರಂದು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದೇನೆ ಎಂದು ಬಿಜೆಪಿ ಮುಖಂಡ ರಮೇಶ್ ತಿಳಿಸಿದರು.

ಕಾವೇರಿ ನೀರು ಪೂರೈಕೆಯಾಗದ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲು ಈ ಯೋಜನೆ ಜಾರಿಗೆ ತರಲಾಗಿತ್ತು. 960 ಕೋಟಿ ರೂ.ಗಳ ಕಾಮಗಾರಿಗೆ ಸಂಬಂಧಿಸಿದಂತೆ 400 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಕೋಟಿ ಹಗರಣ ಆಗಿರುವುದರಿಂದ ಎಸಿಬಿ ಈ ಪ್ರಕರಣವನ್ನು ಇಡಿಗೆ ವಹಿಸಿದ್ದು, ಇಂದು ಬಿಬಿಎಂಪಿಯಲ್ಲಿ ಶೋಧ ನಡೆಸಲಾಗಿದೆ ಎಂದು ರಮೇಶ್ ತಿಳಿಸಿದರು. ರಾಜರಾಜೇಶ್ವರಿನಗರ, ದಾಸರಹಳ್ಳಿ, ಯಲಹಂಕ, ಮಹದೇವಪುರ, ಬೊಮ್ಮನಹಳ್ಳಿಯ 66 ಬಿಬಿಎಂಪಿ ವಲಯಗಳ ಪೈಕಿ 50 ವಲಯಗಳಲ್ಲಿ ಕೌನ್ಸಿಲರ್‌ಗಳು, ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿಕೊಂಡು 400 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ರಾಜರಾಜೇಶ್ವರಿನಗರ, ಯಶವಂತಪುರ, ಬೆಂಗಳೂರು ದಕ್ಷಿಣ, ಕೃಷ್ಣರಾಜಪುರ, ಬ್ಯಾಟರಾಯನಪುರ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ಗರಿಷ್ಠ ಲೂಟಿ ನಡೆದಿದೆ ಎಂದು ಅವರು ಹೇಳಿದ್ದಾರೆ. ಪಾಲಿಕೆಯು ಬೋರ್‌ವೆಲ್‌ ಕೊರೆಯಲು 671.16 ಕೋಟಿ ಹಾಗೂ ಆರ್‌ಒ ಘಟಕಗಳ ನಿರ್ಮಾಣಕ್ಕೆ 156 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ರಮೇಶ್ ತಿಳಿಸಿದರು. ಈ ಅವಧಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ 9,588 ಬೋರ್‌ವೆಲ್‌ಗಳನ್ನು ಕೊರೆಸಿರುವ ಬಗ್ಗೆ ಮಾಹಿತಿ ಇದೆ ಎಂದು ತಿಳಿಸಿದರು. ಅದರಂತೆ ಬೋರ್ ವೆಲ್ ಕೊರೆಸಲು ಸರಾಸರಿ ಏಳು ಲಕ್ಷ ರೂಪಾಯಿ ಹಾಗೂ ಆರ್ ಒ ಘಟಕ ನಿರ್ಮಾಣಕ್ಕೆ 16 ಲಕ್ಷ ರೂಪಾಯಿ ಖರ್ಚು ಮಾಡಿರುವುದಾಗಿ ಹೇಳಲಾಗುತ್ತಿದೆ. ಹೀಗಾಗಿ ಬೆಂಗಳೂರು ಮಹಾನಗರ ಕಾರ್ಯಪಡೆ ಮತ್ತು ಲೋಕಾಯುಕ್ತಕ್ಕೂ ದೂರು ನೀಡಿದ್ದೇನೆ ಎಂದು ರಮೇಶ್ ಹೇಳಿದರು.

ದಾಳಿಗಳ ಬಗ್ಗೆ ಬಿಬಿಎಂಪಿ ಇಂಜಿನಿಯರ್-ಇನ್-ಚೀಫ್ ಬಿ ಎಸ್ ಪ್ರಹ್ಲಾದ್ ಅವರು ಇಡಿ ತಮ್ಮ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಿದೆ. ಅಧಿಕಾರಿಗಳು 2016 ಮತ್ತು 2019ರ ನಡುವೆ ಸ್ಥಾಪಿಸಲಾದ ಬೋರ್‌ವೆಲ್‌ಗಳು ಮತ್ತು ಆರ್‌ಒ ಘಟಕಗಳಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆಗಾಗಿ ಬಂದಿದ್ದಾರೆ ಎಂದು ತಿಳಿಸಿದರು. ಇಡಿ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಿದೆ ಮತ್ತು ನಾವು ಅವರಿಗೆ ಸಹಕರಿಸುತ್ತಿದ್ದೇವೆ. ನಾವು ದಾಖಲೆಗಳನ್ನು ನೀಡುತ್ತಿದ್ದೇವೆ. ಅವರು ಏನು ಕೇಳುತ್ತಾರೋ ಅದನ್ನು ನಾವು ನೀಡುತ್ತೇವೆ ಎಂದು ಪ್ರಹ್ಲಾದ್ ಹೇಳಿದರು. ಜತೆಗೆ ವಿವಿಧ ಇಲಾಖೆಗಳ ಮುಖ್ಯಸ್ಥರ ಜತೆ ಸಭೆ ನಡೆಯುತ್ತಿದೆ. ನಾವು ಅವರನ್ನು ಇಡಿ ಅಧಿಕಾರಿಗಳಿಗೆ ಪರಿಚಯಿಸುತ್ತಿದ್ದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT