ಸಚಿವ ಎಂಬಿ ಪಾಟೀಲ್ 
ರಾಜ್ಯ

ಶೀಘ್ರದಲ್ಲೇ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ; 154 ಎಕರೆ ಸ್ವಾಧೀನ: ಸಚಿವ ಎಂಬಿ ಪಾಟೀಲ್

154 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಪೂರ್ಣ

ಬೆಂಗಳೂರು: ಬಾಂಗ್ಲಾದೇಶದಲ್ಲಿ ಉಂಟಾಗಿರುವ ರಾಜಕೀಯ ಭಿಕ್ಕಿಟ್ಟಿನ ಹಿನ್ನೆಲೆಯಲ್ಲಿ ಜೀನ್ಸ್ ಉದ್ಯಮವನ್ನು ಹೆಚ್ಚಿಸಲು ಅವಕಾಶ ಸಿಕ್ಕಿದ್ದು, ಬಳ್ಳಾರಿ ಸಮೀಪದ ಸಂಜೀವರಾಯನಕೋಟೆಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವತಿಯಿಂದ ಜೀನ್ಸ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಗುರುವಾರ ಘೋಷಿಸಿದ್ದಾರೆ.

ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ ಭರವಸೆಯನ್ನು ಈಡೇರಿಸಲು ಈ ಯೋಜನೆಗಾಗಿ ಈಗಾಗಲೇ 154 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

'ಉದ್ದೇಶಿತ ಪಾರ್ಕ್‌ನಲ್ಲಿ ಜಾಗತಿಕವಾಗಿ ಹೆಸರಾಂತ ಕಂಪನಿಗಳು ತಮ್ಮ ಕಾರ್ಯಾಚರಣೆಗಳನ್ನು ಆರಂಭಿಸುವ ನಿರೀಕ್ಷೆಯಿದೆ. ಬಾಂಗ್ಲಾದೇಶದಲ್ಲಿನ ಅಸ್ಥಿರ ಪರಿಸ್ಥಿತಿಯು ಹೂಡಿಕೆದಾರರು ಮತ್ತು ರಫ್ತುದಾರರನ್ನು ಪರ್ಯಾಯ ಅವಕಾಶಗಳತ್ತ ಗಮನ ಹರಿಸಲು ಪ್ರೇರೇಪಿಸಿದೆ. ಹೀಗಾಗಿ, ಬಳ್ಳಾರಿ ಅನುಕೂಲಕರ ತಾಣವಾಗಿ ಹೊರಹೊಮ್ಮಿದೆ. ಜೀನ್ಸ್ ವಲಯದಲ್ಲಿ ಗಮನಾರ್ಹ ಹೂಡಿಕೆಗಳನ್ನು ಆಕರ್ಷಿಸುವ ಮೂಲಕ ನಾವು ಇದನ್ನು ಲಾಭದಾಯಕವನ್ನಾಗಿ ಮಾಡಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ' ಎಂದು ತಮ್ಮ ಕಚೇರಿಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ 500ಕ್ಕೂ ಹೆಚ್ಚು ಜೀನ್ಸ್ ತಯಾರಿಕಾ ಘಟಕಗಳಿದ್ದು, ಇದು ಹತ್ತಾರು ನೇರ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಿದೆ. ಕೈಗಾರಿಕಾ ಇಲಾಖೆಯು ಜವಳಿ ಇಲಾಖೆಯ ನೆರವಿನೊಂದಿಗೆ ಈ ಪ್ರದೇಶವನ್ನು ಸಂಘಟಿತ ರಫ್ತು ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಯೋಜಿಸಿದೆ. ಜೀನ್ಸ್ ಉತ್ಪಾದನಾ ಘಟಕಗಳಿಗೆ ಸಂಭವನೀಯ ಪ್ರೋತ್ಸಾಹ ಆಯ್ಕೆಗಳ ಕುರಿತು ಚರ್ಚಿಸಲು ಜವಳಿ ಸಚಿವರೊಂದಿಗೆ ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದರು.

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಬಳ್ಳಾರಿಯ ಜೀನ್ಸ್ ಉದ್ಯಮದ ಕಾರ್ಮಿಕರು ಮತ್ತು ಮಾಲೀಕರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಅಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸುವ ಭರವಸೆ ನೀಡಿದ್ದರು ಮತ್ತು ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ 2023ರ ಆಗಸ್ಟ್ 1 ರಂದು ಕೈಗಾರಿಕಾ ಇಲಾಖೆಗೆ ಪತ್ರ ಬರೆದಿದ್ದರು.

ಎಂಬಿ ಪಾಟೀಲ್ ಅವರ ಪ್ರಕಾರ, ಸದ್ಯದ ಭೌಗೋಳಿಕ ರಾಜಕೀಯ ಪರಿಸ್ಥಿತಿಯು ಈ ದೃಷ್ಟಿಯನ್ನು ಸಾಕಾರಗೊಳಿಸಲು ಅನುಕೂಲಕರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024ರ ಫೆಬ್ರುವರಿಯಲ್ಲಿ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಈ ಉಪಕ್ರಮವನ್ನು ಘೋಷಿಸಿದರು. ಬಳ್ಳಾರಿಯ ಜೀನ್ಸ್ ಉದ್ಯಮವನ್ನು ರಚನಾತ್ಮಕ ಚೌಕಟ್ಟಿನಲ್ಲಿ ಜಾಗತಿಕ ಗುಣಮಟ್ಟಕ್ಕೆ ಏರಿಸುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT