ಬೆಂಗಳೂರು: ಸೌರ ಕೃಷಿ ಪಂಪ್ ಸೆಟ್ ಯೋಜನೆ ಕುಸುಮ್-ಬಿ ಅಡಿ 40 ಸಾವಿರ ಪಂಪ್ ಸೆಟ್ಗಳ ಅಳವಡಿಕೆಗೆ ಅನುಮೋದನೆ ನೀಡಲಾಗಿದ್ದು, ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಂದು ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ, ಕುಸುಮ್-ಬಿ ಯೋಜನೆ ಅನುಷ್ಠಾನವನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್, ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕುಸುಮ್-ಬಿ ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಮ್ ಉತ್ಥಾನ ಮಹಾಭಿಯಾನ(ಪಿಎಂ ಕುಸುಮ್) ಯೋಜನೆಯ ಬಿ ಘಟಕವಾಗಿದ್ದು, ಇದು ನೀರಾವರಿಗಾಗಿ 14 ಲಕ್ಷ ಸ್ಟ್ಯಾಂಡ್-ಅಲೋನ್ ಸೌರ ಕೃಷಿ ಪಂಪ್ಸೆಟ್ಗಳ ಸ್ಥಾಪನೆಯ ಮೇಲೆ ಕೇಂದ್ರೀಕರಿಸುತ್ತದೆ.
ಈ ಯೋಜನೆಯಡಿಯಲ್ಲಿ, ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು ಕೇಂದ್ರ ಸರ್ಕಾರ ಶೇ.30 ರಷ್ಟು, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ. 20ರಷ್ಟು ಭರಿಸಬೇಕಿದೆ.
ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು, 40,000 ಪಂಪ್ ಸೆಟ್ಗಳ ಅಳವಡಿಕೆಗೆ ಅನುಮೋದನೆ ನೀಡಿರುವುದನ್ನು ಗಮನಿಸಿದರು ಮತ್ತು ಅವುಗಳ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಈ ಯೋಜನೆಯಡಿಯಲ್ಲಿ ಹೆಚ್ಚುವರಿಯಾಗಿ 25,000 ರೈತರು ಅರ್ಜಿ ಸಲ್ಲಿಸಿದ್ದಾರೆ ಮತ್ತು ರಾಜ್ಯ ಸರ್ಕಾರವು ಇದಕ್ಕಾಗಿ 752 ಕೋಟಿ ರೂ.ಗಳನ್ನು ಖರ್ಚು ಮಾಡಲಿದೆ. ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ.
4.5 ಲಕ್ಷ ಅನಧಿಕೃತ ಐಪಿ ಸೆಟ್ಗಳ ಪೈಕಿ 2 ಲಕ್ಷ ಐಪಿ ಸೆಟ್ ಸಂಪರ್ಕ ಅಧಿಕೃತಗೊಳಿಸಲಾಗಿದೆ. ಈ ಅನಧಿಕೃತ ಐಪಿ ಸೆಟ್ಗಳನ್ನು ಕುಸುಮ್ ಬಿ ಯೋಜನೆಯಡಿ ಆದ್ಯತೆ ಮೇರೆಗೆ ತರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.
ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಕಲ್ಪಿಸಲು ಅವಕಾಶ ಕಲ್ಪಿಸಲಾಗುತ್ತಿದ್ದು, ಟ್ರಾನ್ಸ್ ಫಾರ್ಮರ್ಗಳನ್ನು ಇಲಾಖೆ ಒದಗಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನೀರಾವರಿ ಪಂಪ್ ಸೆಟ್ಗಳಿಗೆ 2024-25ರ ಸಾಲಿನಲ್ಲಿ 12,785 ಕೋಟಿ ರೂಪಾಯಿಗಳ ಅನುದಾನ ಹಂಚಿಕೆ ಆಗಿದ್ದು, ಫೆಬ್ರವರಿ 2025ರ ವರೆಗೆ ರೂ.11,720 ಕೋಟಿ ಬಿಡುಗಡೆ ಆಗಿದೆ. 2025-26ರಲ್ಲಿ 16,021ಕೋಟಿ ರೂಪಾಯಿಗಳ ಆಯವ್ಯಯ ಹಂಚಿಕೆ ಆಗಿದೆ.