ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಿಗೂಢ ಸರಣಿ ಸಾವುಗಳ ತನಿಖೆಗಾಗಿ ಕರ್ನಾಟಕ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಶನಿವಾರ ತನ್ನ ತನಿಖೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಸ್ಐಟಿ ತನ್ನ ಕಚೇರಿಯನ್ನು ಧರ್ಮಸ್ಥಳದ ಬದಲಿಗೆ ಬೆಳ್ತಂಗಡಿಯಲ್ಲಿ ಆರಂಭಿಸಿದೆ. ಮಲ್ಲಿಕಟ್ಟೆಯಲ್ಲಿರುವ ಗುಪ್ತಚರ ಬ್ಯೂರೋ ಆವರಣದಲ್ಲಿ ಸ್ಥಾಪಿಸಲಾದ ಎಸ್ಐಟಿ ಕಚೇರಿಗೆ ಹಿರಿಯ ಅಧಿಕಾರಿಗಳು ಆಗಮಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸ್ಥಳಗಳಿಗೆ ಭೇಟಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಪೊಲೀಸ್ ಉಪ ಮಹಾನಿರ್ದೇಶಕ(ಡಿಐಜಿ) ಎಂ.ಎನ್. ಅನುಚೇತ್ ಅವರು ಮಂಗಳೂರಿಗೆ ಆಗಮಿಸಿದ್ದು, ಎಸ್ಐಟಿಗೆ ನಿಯೋಜಿಸಲಾದ 20 ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ದಯಾಮಾ ಅವರನ್ನು ತನಿಖಾ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಮೂಲಗಳ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅಧಿಕಾರಿಗಳನ್ನು ತಂಡಕ್ಕೆ ನಿಯೋಜಿಸಲಾಗಿದೆ. ಇವರಲ್ಲಿ ಧರ್ಮಸ್ಥಳ, ಮೂಲ್ಕಿ ಮತ್ತು ಬೈಂದೂರು ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ಗಳು ಮತ್ತು ಸಬ್ ಇನ್ಸ್ಪೆಕ್ಟರ್ಗಳು ಸೇರಿದ್ದಾರೆ.
ಎಸ್ಐಟಿ ಆಂತರಿಕ ಮಾಹಿತಿಗಳನ್ನು ಪಡೆಯುವ ನಿರೀಕ್ಷೆಯಿದ್ದು, ಸಮಾಧಿಗಳ ಬಗ್ಗೆ ಆರಂಭದಲ್ಲಿ ಆರೋಪಗಳನ್ನು ಎತ್ತಿದ್ದ ಅನಾಮಧೇಯ ದೂರುದಾರನನ್ನು ಪ್ರಶ್ನಿಸುವ ಸಾಧ್ಯತೆಯಿದೆ. ಡಿಐಜಿ ಅನುಚೇತ್ ಅವರ ಮೇಲ್ವಿಚಾರಣೆಯಲ್ಲಿ ಮಲ್ಲಿಕಟ್ಟೆಯಲ್ಲಿರುವ ಎಸ್ಐಟಿ ಕಚೇರಿಯಲ್ಲಿಯೇ ವಿಚಾರಣೆ ನಡೆಯುವ ಸಾಧ್ಯತೆಯಿದೆ.
ವಿಚಾರಣೆ ಮತ್ತು ಹೇಳಿಕೆ ದಾಖಲಿಸುವುದಕ್ಕಾಗಿ ವಿಡಿಯೋ ರೆಕಾರ್ಡಿಂಗ್ ಉಪಕರಣಗಳು ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.