ಪ್ರಿಯಾಂಕ್ ಖರ್ಗೆ ಮತ್ತು ಎಂಬಿ ಪಾಟೀಲ್ 
ರಾಜ್ಯ

ಸ್ಪೇಸ್ ಪಾರ್ಕ್ ಸೇರಿ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹ ನೀತಿ ರೂಪಿಸಲು ಮಾತುಕತೆ

ಹೂಡಿಕೆಗೆ ಸಂಬಂಧಿಸಿದ ಪ್ರೋತ್ಸಾಹಕಗಳ ಕುರಿತು ಸಮಗ್ರ ವರದಿಯನ್ನು ಸಿದ್ಧಪಡಿಸುವಂತೆ ಇಬ್ಬರೂ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೆಂಗಳೂರು: ಉದ್ದೇಶಿತ ಬಾಹ್ಯಾಕಾಶ ಪಾರ್ಕ್, ವಿದ್ಯುನ್ಮಾನ ಬಿಡಿಭಾಗಗಳ ತಯಾರಿಕಾ ಪಾರ್ಕ್ ಹಾಗೂ ಮೂಲಸೌಕರ್ಯದಂತಹ ಹೆಚ್ಚಿನ ಆದ್ಯತೆಯ ವಲಯಗಳಲ್ಲಿ ಹೂಡಿಕೆ ಹೆಚ್ಚಿಸಲು, ರಾಜ್ಯ ಸರ್ಕಾರವು ವಿಶೇಷ ಪ್ರೋತ್ಸಾಹ ನೀತಿಯನ್ನು ರೂಪಿಸಲು ನಿರ್ಧರಿಸಿದೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ್ ಮತ್ತು ಐಟಿ/ಬಿಟಿ ಮತ್ತು ಎಲೆಕ್ಟ್ರಾನಿಕ್ಸ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪ್ರಸ್ತಾವಿತ ರಿಯಾಯಿತಿಗಳ ಕುರಿತು ಚರ್ಚಿಸಲಿದ್ದಾರೆ.

ಬುಧವಾರ ನಡೆದ ಜಂಟಿ ಸಭೆಯಲ್ಲಿ, ಹೂಡಿಕೆಗೆ ಸಂಬಂಧಿಸಿದ ಪ್ರೋತ್ಸಾಹಕಗಳ ಕುರಿತು ಸಮಗ್ರ ವರದಿಯನ್ನು ಸಿದ್ಧಪಡಿಸುವಂತೆ ಇಬ್ಬರೂ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಒಂದು ವಾರದೊಳಗೆ ಕರಡು ಸಲ್ಲಿಸಲು ಕೈಗಾರಿಕೆಗಳು ಮತ್ತು ಐಟಿ/ಬಿಟಿ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳನ್ನು ಕೇಳಲಾಗಿದೆ.

ಐಟಿ ಇಲಾಖೆಯು ಇಎಸ್‌ಡಿಎಂ ವಲಯಕ್ಕೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹ ಕ್ರಮಗಳ ನೀತಿಯನ್ನು ರೂಪಿಸುತ್ತಿದೆ. ಇದಕ್ಕೆ ಪೂರಕವಾಗಿ ಕೈಗಾರಿಕಾ ಇಲಾಖೆ ಕೂಡ ವಿದ್ಯುನ್ಮಾನ ತಯಾರಿಕೆ ವಲಯದಲ್ಲಿ ಹೂಡಿಕೆ ಆಕರ್ಷಣೆಗೆ ಕಾರ್ಯತಂತ್ರ ರೂಪಿಸಬೇಕಾದ ಅಗತ್ಯವಿದೆ. ಕೆಲವೆಡೆ ಒಂದೇ ಯೋಜನೆಗೆ ಐಟಿ ಮತ್ತು ಕೈಗಾರಿಕೆ ಇಲಾಖೆಗಳೆರಡೂ ರಿಯಾಯಿತಿಗಳನ್ನು ಕೊಡುತ್ತಿದ್ದು, ಇದನ್ನು ಸರಿ ಮಾಡಬೇಕಾಗಿದೆ ಎನ್ನುವ ಅಭಿಪಾಯ ಸಭೆಯಲ್ಲಿ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ನಮ್ಮಲ್ಲಿ ತಯಾರಾಗುತ್ತಿರುವ ಸ್ಮಾರ್ಟ್ ಫೋನ್ ಗಳಲ್ಲಿ ಶೇ.44ರಷ್ಟು ಅಮೆರಿಕಕ್ಕೆ ರಫ್ತಾಗುತ್ತಿದೆ. ಇದರಲ್ಲಿ ಮೊದಲು ಶೇ.61ರಷ್ಟು ಪಾಲು ಹೊಂದಿದ್ದ ಚೀನಾದ ಪ್ರಮಾಣ ಈಗ ಶೇ.25ಕ್ಕೆ ಕುಸಿದಿದೆ. ಆದರೆ, ವಿಯೆಟ್ನಾಂನ ಪಾಲು ಮಾತ್ರ ಶೇ.50ರಷ್ಟಿದೆ. ಈ ಸ್ಪರ್ಧೆಯನ್ನು ಪರಿಗಣಿಸಿ ಬಂಡವಾಳವನ್ನು ಸೆಳೆಯಬೇಕಾಗಿದೆ. ಜೊತೆಗೆ ಸ್ಮಾರ್ಟ್ ಫೋನ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕಾಗಿದೆ. ಇದಕ್ಕೆ ಪೂರಕವಾಗಿ ಈ ಕ್ಷೇತ್ರಕ್ಕೆ ಹಲವು ರಿಯಾಯಿತಿಗಳನ್ನು ಘೋಷಿಸಬೇಕಾಗಿದೆ ಎಂದು ಇಬ್ಬರೂ ಸಚಿವರು ಅಭಿಪ್ರಾಯಪಟ್ಟರು.

ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ತಮ್ಮ ಇಲಾಖೆಯು ದೇವನಹಳ್ಳಿ ಸಮೀಪದ ಆದಿನಾರಾಯಣ ಹೊಸಹಳ್ಳಿ ಅಥವಾ ಐಟಿಐಆರ್ ಪ್ರದೇಶದಲ್ಲಿ 100 ಎಕರೆಯಲ್ಲಿ ಸ್ಪೇಸ್ ಪಾರ್ಕ್, ಮೈಸೂರಿನ ಕೋಚನಹಳ್ಳಿ ಹಂತ-2ರಲ್ಲಿ 150 ಎಕರೆಯಲ್ಲಿ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ (ಪಿಸಿಬಿ) ಪಾರ್ಕ್, ಕ್ವಿನ್ ಸಿಟಿ / ಅಡಕನಹಳ್ಳಿ ಮತ್ತು ಕೋಚನಹಳ್ಳಿ ಎರಡೂ ಕಡೆಗಳಲ್ಲಿ ತಲಾ 100 ಎಕರೆಯಲ್ಲಿ ಗ್ಲೋಬಲ್ ಇನ್ನೋವೇಶನ್ ಸಿಟಿ, ಅಡಕನಹಳ್ಳಿ/ ಕೋಚನಹಳ್ಳಿಯಲ್ಲಿ 100 ಎಕರೆಯಲ್ಲಿ ಕಿಯೋನಿಕ್ಸ್ ಪ್ಲಗ್ & ಪ್ಲೇ ಸೌಲಭ್ಯ ಕೇಂದ್ರದ ಅಭಿವೃದ್ಧಿ ಮೂಲಕ ಗ್ಲೋಬಲ್ ಕೇಪಬಿಲಿಟಿ ಸೆಂಟರ್‌ಗಳನ್ನು ಸ್ಥಾಪಿಸಲು ತೀರ್ಮಾನಿಸಿದೆ. ಇದಕ್ಕಾಗಿ ಈ ಸ್ಥಳಗಳಲ್ಲಿ ಜಮೀನನ್ನು ಮಂಜೂರು ಮಾಡುವಂತೆ ಈ ಸಂದರ್ಭದಲ್ಲಿ ಪಾಟೀಲ್ ಅವರಲ್ಲಿ ಕೋರಿದರು.

ಡ್ರೋನ್ ಪರೀಕ್ಷಾ ಕೇಂದ್ರವು ನಿರ್ಜನ ಪ್ರದೇಶದಲ್ಲಿ ಇರಬೇಕು ಎನ್ನುವ ನಿಯಮವಿದೆ. ಆದ್ದರಿಂದ ಬೆಂಗಳೂರಿನ ಭಾಗವೇ ಆಗಿರುವ ಹೆಸರಘಟ್ಟದಲ್ಲಿ ಈ ಯೋಜನೆ ಬರುವುದು ಕಷ್ಟವಾಗಬಹುದು. ಆದ್ದರಿಂದ ಇದಕ್ಕೆ ಸೂಕ್ತ ಜಾಗ ಹುಡುಕುವುದು ಒಳ್ಳೆಯದು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಕೈಗಾರಿಕೆಗಳಲ್ಲಿ, ವಿಶೇಷವಾಗಿ ಡೇಟಾ ಸೈನ್ಸ್ ಮತ್ತು ಉತ್ಪಾದನೆಯಲ್ಲಿ ನೀರು ಮತ್ತು ವಿದ್ಯುತ್‌ಗಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಗುರುತಿಸಿ, ಸಚಿವರು 'ಕೈಗಾರಿಕಾ ಜಲ ಭದ್ರತಾ ನೀತಿ'ಗೆ ಕರೆ ನೀಡಿದರು. ಅವರು ಕೈಗಾರಿಕಾ ನೀರಿನ ಮರುಬಳಕೆ ಮತ್ತು ವಿದ್ಯುತ್ ಉತ್ಪಾದನಾ ಉದ್ಯಾನವನವನ್ನು ಸ್ಥಾಪಿಸಲು ಮತ್ತು ನೈಸರ್ಗಿಕ ಅನಿಲದ ಮೂಲಕ ವಿದ್ಯುತ್ ಉತ್ಪಾದನೆಯನ್ನು ಅನ್ವೇಷಿಸಲು ಪ್ರಸ್ತಾಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT