ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ತಮ್ಮ ವ್ಯಾಪ್ತಿಯಲ್ಲಿ ಪದೇ ಪದೇ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಅಥವಾ ಕ್ರಿಮಿನಲ್ ಅಪರಾಧಗಳ ಹಿನ್ನೆಲೆಯುಳ್ಳ 36 ವ್ಯಕ್ತಿಗಳ ವಿರುದ್ಧ ಗಡಿಪಾರು ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಗಡಿಪಾರು ಮಾಡಲಾಗುತ್ತಿರುವ ವ್ಯಕ್ತಿಗಳು ಬಂಟ್ವಾಳ, ವಿಟ್ಲ, ಪುತ್ತೂರು ಪಟ್ಟಣ ಮತ್ತು ಗ್ರಾಮಾಂತರ, ಕಡಬ, ಸುಳ್ಯ, ಉಪ್ಪಿನಂಗಡಿ, ಪುಂಜಾಲಕಟ್ಟೆ ಮತ್ತು ಬೆಳ್ತಂಗಡಿ ಸೇರಿದಂತೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದವರು ಎಂದು ಅವರು ಹೇಳಿದ್ದಾರೆ.
ಅಧಿಕಾರಿಗಳ ಪ್ರಕಾರ, ಪುನರಾವರ್ತಿತ ಅಪರಾಧಗಳ ಇತಿಹಾಸ ಹೊಂದಿರುವ ಮತ್ತು ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ತೀವ್ರ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಪಟ್ಟಿಯಲ್ಲಿ ಜಿಲ್ಲೆಯ ವಿವಿಧ ಭಾಗಗಳ 22 ರಿಂದ 54 ವರ್ಷ ವಯಸ್ಸಿನ ವ್ಯಕ್ತಿಗಳು ಇದ್ದು, ಅವರ ವಿರುದ್ಧ ಹಲ್ಲೆ, ಬೆದರಿಕೆ, ಸುಲಿಗೆ ಮತ್ತು ಗ್ಯಾಂಗ್ ವಾರ್ ಚಟುವಟಿಕೆಯಲ್ಲಿ ತೊಡಗಿರುವ ಆರೋಪ ಹೊರಿಸಲಾಗಿದೆ.
"ಈ ಪ್ರದೇಶದಲ್ಲಿ ಶಾಂತಿಯನ್ನು ಖಚಿತಪಡಿಸಿಕೊಳ್ಳಲು ನಾವು ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ. ಸಮಾಜಕ್ಕೆ ಪದೇ ಪದೇ ಬೆದರಿಕೆಯನ್ನುಂಟುಮಾಡುವ ಪುನರಾವರ್ತಿತ ಅಪರಾಧಗಳನ್ನು ತಡೆಗಟ್ಟುವ ಕ್ರಮವೆಂದರೆ ಗಡಿಪಾರು. ಈ ಸಂಬಂಧ ಪೊಲೀಸರು ನೋಟಿಸ್ ಜಾರಿ ಮಾಡುವ ಪ್ರಕ್ರಿಯೆಯಲ್ಲಿದ್ದಾರೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ ಅವರು ತಿಳಿಸಿದ್ದಾರೆ.
15 ಮುಸ್ಲಿಮರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 36 ಜನರನ್ನು ಗಡಿಪಾರು ಮಾಡಲಾಗುತ್ತಿದೆ.